ಲೋಕಸಭೆ ಚುನಾವಣೆ: ಕೆಲವು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ಬೆಂಗಳೂರು, ಮಾ.27: ಈಗಾಗಲೇ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆ ನಡೆಯುತ್ತಿದ್ದು, ತುಮಕೂರಿನಲ್ಲಿ 5 ನಾಮಪತ್ರಗಳು ತಿರಸ್ಕೃತಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಏಪ್ರಿಲ್ 18ರಂದು ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ಪರಿಶೀಲನೆ ಆರಂಭವಾಗಿದೆ. ಸಂಜೆ ವೇಳೆಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಾ.29ರವರೆಗೆ ನಾಮಪತ್ರ ಹಿಂಪಡೆಯಲು ಗಡುವು ನೀಡಲಾಗಿದೆ. ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಪ್ರಕಟಿಸಲಿದ್ದಾರೆ.
ಕಳೆದ ಮಾ.29ರಿಂದ ನಿನ್ನೆಯವರೆಗೆ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 362 ಅಭ್ಯರ್ಥಿಗಳು 455 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇವರಲ್ಲಿ 337 ಪುರುಷ, 25 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. ಕಡೆದಿನವಾದ ನಿನ್ನೆ 181 ಅಭ್ಯರ್ಥಿಗಳು 222 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಚಿತ್ರದುರ್ಗ, ಚಾಮರಾಜನಗರ, ಕೋಲಾರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ 64 ಅಭ್ಯರ್ಥಿಗಳು 79 ನಾಮಪತ್ರ ಸಲ್ಲಿಸಿದ್ದಾರೆ. ಚಿತ್ರದುರ್ಗ ಕ್ಷೇತ್ರದಲ್ಲಿ 26 ಅಭ್ಯರ್ಥಿಗಳು 31 ನಾಮಪತ್ರಗಳು, ಚಾಮರಾಜನಗರದಲ್ಲೂ 13 ಅಭ್ಯರ್ಥಿಗಳು 18 ನಾಮಪತ್ರಗಳು ಹಾಗೂ ಕೋಲಾರದಲ್ಲಿ 25 ಅಭ್ಯರ್ಥಿಗಳು 30 ನಾಮಪತ್ರಗಳನ್ನು ಸಲ್ಲಿಸಿದ್ದು, ಈ ಮೂರು ಕ್ಷೇತ್ರಗಳಲ್ಲಿ ಪುರುಷ ಅಭ್ಯರ್ಥಿಗಳೇ ಸ್ಪರ್ಧಿಗಿಳಿದಿದ್ದಾರೆ.
ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಚಾಮರಾಜನಗರ ಮೈಸೂರು-ಕೊಡಗು, ದಕ್ಷಿಣಕನ್ನಡ, ಉಡುಪಿ-ಚಿಕ್ಕಮಗಳೂರು, ತುಮಕೂರು ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಿನ್ನೆಗೆ ಮುಕ್ತಾಯಗೊಂಡಿದೆ.
ಈ 14 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 10, ಜೆಡಿಎಸ್ ನಾಲ್ಕು, ಬಿಜೆಪಿ 13 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಬಿಎಸ್ಪಿ, ಸಿಪಿಐ ಸೇರಿದಂತೆ ಇತರೆ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅತಿಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರು ಸ್ಫರ್ಧೆಯಲ್ಲಿದ್ದಾರೆ.