Cauvery water: ಯಾವುದೇ ಕಾರಣಕ್ಕೂ ಐದು ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವಿಲ್ಲ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು, ಸೆಪ್ಟೆಂಬರ್ 19: ಯಾವುದೇ ಕಾರಣಕ್ಕೂ ಐದು ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಜಲಾಶಯಗಳೆಲ್ಲ ಖಾಲಿ ಆಗಿದಾವೆ, ಬೆಂಗಳೂರಿಗೆ ಕುಡಿಯುವ ನೀರಿಗೂ ಸಮಸ್ಯೆ ಆಗಿದೆ. ಇಂಥ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಲಿ. ಸುಪ್ರೀಂಕೋರ್ಟ್ ನಲ್ಲಿ ರಾಜ್ಯದ ವಾಸ್ತವಿಕ ಪರಿಸ್ಥಿತಿ ತಿಳಿಸಲಿ. ಅಗತ್ಯ ಬಿದ್ದರೆ ಪ್ರಾಧಿಕಾರದ ನಿಯೋಗ ರಾಜ್ಯಕ್ಕೆ ಬಂದು ವಾಸ್ತವಿಕ ಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳಬೇಕು, ಯಾವುದೇ ಕಾರಣಕ್ಕೂ ನಾವು ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ ಅನ್ನೋದನ್ನು ಮನದಟ್ಟು ಮಾಡುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.

ಈ ವೇಳೆ ಬಸವರಾಜ ಬೊಮ್ಮಾಯಿ ಮಾತನಾಡಿ, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12 ರ ನಂತರ ನೀರು ತಮಿಳುನಾಡಿಗೆ ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಂದೆ ಅಪಿಡವಿಟ್ ಹಾಕಿದೆ. ಅದಕ್ಕೆ ತಾವು ಬದ್ದರಾಗಿರಬೆಕಲ್ಲ. ಸರ್ಕಾರದ ಅಪಿಡವಿಟ್ ಅಂದರೆ ಸುಮ್ಮನೆ ಅಲ್ಲ. ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು ಎಂದು ಅಭಿಪ್ರಾಯಪಟ್ಟರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾನು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯದ ಹಿತ ದೃಷ್ಟಿಯಿಂದ ನಾನು ಸಲಹೆ ನೀಡಿದ್ದೇನೆ. ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲು ಸಿದ್ದವಿಲ್ಲ. ಸರ್ಕಾರ ನಡೆಸುವವರಿಗೆ ಜವಾಬ್ದಾರಿ, ಅರಿವು ಇರಬೇಕು. ವಕೀಲರು ಯಾವಾಗಲೂ ನೀರು ಬಿಡುವಂತೆ ಸಲಹೆ ನಿಡುತ್ತಾರೆ. ನಾವು ಅದನ್ನು ಬದಲಾಯಿಸಿದ್ದೇವು. ನಮ್ಮ ಅವಧಿಯಲ್ಲಿ ರಾತ್ರೋರಾತ್ರಿ ನೀರು ಬಿಟ್ಟಿಲ್ಲ. ನೀವು ಸಿಡಬ್ಲುಎಂಎ ಆದೇಶ ಪಾಲನೆ ಮಾಡಿದ ಮೇಲೆ ಸುಪ್ರೀಂ ಕೋರ್ಟ್ ಮುಂದೆ ಹೇಳುವುದೇನಿದೆ ಎಂದು ಪ್ರಶ್ನಿಸಿದರು.
ಇನ್ನೂ ಈ ವೇಳೆ ಕಾವೇರಿ ಜಲವಿವಾದ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸರ್ಕಾರ ಕೆಲವು ತೀರ್ಮಾನ ತೆಗೆದುಕೊಂಡಿತ್ತು. ಈ ಬೆಳವಣಿಗೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುಳಿತು ಒಂದು ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ ಪರವಾಗಿ ಏನೇನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ನಮ್ಮ ಸರ್ಕಾರ ಖಂಡಿತ ಮಾಡುತ್ತದೆ.
ಇದರಲ್ಲಿ ಯಾವುದೇ ಅನುಮಾನ ಪಡುವಂತದ್ದು ಇಲ್ಲ. ಒಂದೊಂದು ಸನ್ನಿವೇಶದಲ್ಲಿ ಒಂದೊಂದು ಬೇಡಿಕೆ ಬರುತ್ತಿರುತ್ತವೆ, ಮಳೆ ಕಡಿಮೆಯಾದಾಗ ಬೇಡಿಕೆಗಳು ಹೆಚ್ಚಾಗುತ್ತದೆ. ಬೇಡಿಕೆಗಳು ಹೆಚ್ಚಾದಾಗ ಒತ್ತಡಗಳು ಬರುತ್ತವೆ, ಎಸ್.ಎಂ ಕೃಷ್ಣ ಅವರ ಅವಧಿಯಲ್ಲಿ ಪಾದಯಾತ್ರೆ ಮಾಡಿದ್ವಿ. ನೀರು ಕೊಡಲು ಆಗಲ್ಲ ಎಂದು ಹೇಳಬೇಕಾಗಿತ್ತು. ತಮಿಳುನಾಡು - ಕರ್ನಾಟಕ ನಡುವೆ ಸಾಕಷ್ಟು ವ್ಯಾಜ್ಯಗಳು ನಡೆದಿವೆ. ಈಗ ಪ್ರಾಧಿಕಾರ ರಚನೆ ಆಗಿದೆ
ಒಂದೆಡೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಪ್ರಾಧಿಕಾರ ರಚನೆ ಸಂಪೂರ್ಣ ನಿಯಂತ್ರಣ ಅದಕ್ಕೆ ನೀಡಲಾಗಿದೆ, ಹಿಂದೆ ಏನಾಯಿತು ಎಂಬುದು ಮುಖ್ಯ ಅಲ್ಲ, ಇವತ್ತು ಏನಾಯಿತು ಎಂಬುದು ಮುಖ್ಯ. ನೀರಿನ ವಿಚಾರ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಈಗಲೂ ಒಗ್ಗಟ್ಟಾಗಿ ಇರಬೇಕು ಎಂದು ಹೇಳಿದರು.












Click it and Unblock the Notifications