ಬೆಂಗಳೂರಲ್ಲಿ ಬ್ಯಾನರ್ ಹಾವಳಿ: ಪಾಲಿಕೆ, ಪೊಲೀಸರಿಗೆ ಹೈಕೋರ್ಟ್ ತರಾಟೆ
ಬೆಂಗಳೂರು, ಜುಲೈ 13: ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿ ಮೀತಿ ಮಿರುತ್ತಿರುವುದಕ್ಕೆ ಹೈಕೋರ್ಟ್ ಸರ್ಕಾರ, ಪೊಲೀಸರು ಹಾಗೂ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಚುರುಕು ಮುಟ್ಟಿಸಲು ಮುಂದಾಗಿದೆ.
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತ ಹೋರ್ಡಿಂಗ್ಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು 2017 ಮತ್ತು 2019ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದವು.

ಖಡಕ್ ಎಚ್ಚರಿಕೆ: ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪಿಸಿದ ಸಿಜೆ, ಈಗಾಗಲೇ 2017 ಮತ್ತು 2018 ಮತ್ತು 2022ರಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಜೊತೆಗೆ ಜುಲೈ 11ರಂದು ಆಂಗ್ಲ ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಸುದ್ದಿ ಆಧರಿಸಿ ನ್ಯಾಯಾಲಯ ಈ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಅರ್ಜಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ, ಪಾಲಿಕೆ ಮತ್ತು ನಗರ ಪೊಲೀಸರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿತು.
ಅಲ್ಲದೆ, ಈ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಜತೆಗೆ, 2017ರಿಂದ ಕಾಲ ಕಾಲಕ್ಕೆ ನ್ಯಾಾಯಾಲಯ ನೀಡಿರುವ ಆದೇಶಗಳನ್ನು ಪಾಲಿಸುವ ಹೊಣೆ ಹೊತ್ತಿರುವ ಪಾಲಿಕೆ ಮುಖ್ಯ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ವಿಫಲವಾಗಿರುವ ನಿಮ್ಮ ವಿರುದ್ಧ ನ್ಯಾಾಯಾಂಗ ನಿಂದನೆ ಅಡಿ ಕ್ರಮ ಏಕೆ ಜರುಗಿಸಬಾರದು? ಎಂಬ ಬಗ್ಗೆ ವಿವರಣೆ ಕೊಡುವಂತೆಯೂ ನಿರ್ದೇಶನ ನೀಡಿದೆ.
ನಿರ್ಲಕ್ಷ್ಯದ ಪರಮಾವಧಿ: ಪತ್ರಿಕೆಯಲ್ಲಿ ವರದಿಯಾಗಿರುವಂತೆ ನ್ಯಾಯಾಲಯದ ಹಲವು ಆದೇಶಗಳ ಹೊರತಾಗಿಯೂ ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿ ಮುಂದುವರಿದಿದೆ.
2017ರಿಂದ ಕಾಲ ಕಾಲಕ್ಕೆ ನ್ಯಾಯಾಲಯ ಆದೇಶ/ ನಿರ್ದೇಶನಗಳನ್ನು ನೀಡುತ್ತಾ ಬಂದಿದೆ. 2024ರ ಜ.8ರಂದು ವಿವರವಾದ ಆದೇಶವನ್ನು ನ್ಯಾಯಾಲಯ ಹೊರಡಿಸಿದೆ. ಪಾಲಿಕೆ 6.8 ಲಕ್ಷ ಅನಧಿಕೃತ ಬ್ಯಾನರ್, ಹೋರ್ಡಿಂಗ್ಗಳನ್ನು ತೆರವುಗೊಳಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇದು ನಗರದಲ್ಲಿ ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕುವುದು ಯಥೇಚ್ಛವಾಗಿ ನಡೆದಿದೆ ಅನ್ನುವುದನ್ನು ಸಾಕ್ಷೀಕರಿಸುತ್ತದೆ. ಜೊತೆಗೆ ನ್ಯಾಯಾಲಯದ ಅದೇಶಗಳ ಬಗ್ಗೆ ಪಾಲಿಕೆ, ನಗರ ಪೊಲೀಸರು ನಿರ್ಲಕ್ಷ್ಯದ ಪರಮಾವಧಿ ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.












Click it and Unblock the Notifications