ಮಳೆಯಿಂದ ಮನೆ ಹಾನಿಯಾದರೆ 10 ಸಾವಿರ ತುರ್ತು ಪರಿಹಾರ, ಡಿಸಿ ಖಾತೆಯ 731 ಕೋಟಿ ಬಳಸಲು ಸೂಚನೆ
ಬೆಂಗಳೂರು, ಜು. 08: ರಾಜ್ಯದಲ್ಲಿ ಬೀಳುತ್ತಿರುವ ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಯಿತು. ಪ್ರವಾಹ ತಡೆ ಹಾಗೂ ರಕ್ಷಣಾ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿರುವ 731 ಕೋಟಿ ರೂ. ಅನುದಾನವನ್ನು ವಿನಿಯೋಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಅಬ್ಬರದ ಮಳೆಯಿಂದಾಗಿ 13 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಹದಿನೇಳು ತಾಲೂಕುಗಳಲ್ಲಿ ಪ್ರವಾಹಕ್ಕೆ ತುತ್ತಾಗಿದ್ದು, 37 ಗ್ರಾಮಗಳ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ 4 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕಾಳಜಿ ಕೇಂದ್ರಗಳಲ್ಲಿ 90 ಮಂದಿ ಆಶ್ರಯ ಪಡೆದಿದ್ದಾರೆ. ಪ್ರವಾಹಕ್ಕೆ ತುತ್ತಾಗಿ 12 ಪ್ರಾಣಹಾನಿ ಸಂಭವಿಸಿದ್ದು, 65 ಜಾನುವಾರುಗಳು ಸಾವನ್ನಪ್ಪಿವೆ.
ಮನೆ ಹಾನಿಯಾದಲ್ಲಿ ಭಾಗಶಃ ಅಥವಾ ನೀರು ನುಗ್ಗಿರುವ ಮನೆಗಳಿಗೆ ಮೊದಲು 10 ಸಾವಿರ ತುರ್ತು ಪರಿಹಾರ ಕೂಡಲೇ ನೀಡುವಂತೆ ಆದೇಶ ಮಾಡಿದ್ದು, ನಂತರ ಹಾನಿ ಪ್ರಮಾಣವನ್ನು ವರದಿಯನ್ನು 2-3 ದಿನಗಳಲ್ಲಿ ಜಿಲ್ಲಾ ಪಂಚಾಯತ್ ನ ಇಂಜಿನಿಯರ್ ಗಳಿಂದ ಪಡೆದು ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ, ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
ಮಳೆ ಪ್ರಮಾಣ ಕಡಿಮೆಯಾದ ನಂತರ ಬೆಳೆ ಹಾನಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಲು ಪಡೆದು ಪರಿಹಾರ ನೀಡುವಂತೆ ಸೂಚಿಸಲಾಯಿತು. ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳವಂತೆ ಸೂಚಿಸಲಾಯಿತು.

ತುರ್ತು ರಸ್ತೆ ದುರಸ್ಥಿಗೆ ಕ್ರಮ
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನದಲ್ಲಿ ಮಳೆ ಬೀಳುವ ಮುನ್ಸೂಚನೆಯಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಹಾನಿಯಾಗಿರುವ ರಸ್ತೆಗಳನ್ನು ತುರ್ತಾಗಿ ದುರಸ್ಥಿ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಭೂ ಕುಸಿತ ಪ್ರದೇಶದಲ್ಲಿ ಕೂಡಲೇ ರಸ್ತೆ ತೆರವಿಗೆ ಕ್ರಮ ಜರುಗಿಸಬೇಕು ಎಂದು ಎಚ್ಚರಿಕೆ ನೀಡಿದರು.

ಮನೆ ಹಾನಿ ಬಗ್ಗೆ ವರದಿ ಸಲ್ಲಿಸಬೇಕು
ಮಳೆಗೆ ಮನೆಗಳು ಹಾನಿಯಾದಲ್ಲಿ ಜಿಲ್ಲಾಧಿಕಾರಿಗಳ ಪರಿಹಾರ ಖಾತೆಯಿಂದ ತುರ್ತಾಗಿ 10 ಸಾವಿರ ರೂ. ಪರಿಹಾರ ನೀಡಬೇಕು. ಆ ಬಳಿಕ ಹಾನಿ ಪ್ರಮಾಣ ನಿಯಮಾನುಸಾರ ಅಂದಾಜು ಮಾಡಿ, ವರ್ಗೀಕರಿಸಿ ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು. ಈ ಮೂಲಕ ಪರಿಹಾರ ಕ್ರಮ ವಿತರಣೆಗೆ ಕ್ರಮ ಜರುಗಿಸಬೇಕು.

ಜೀವ ಹಾನಿಗೆ ತುರ್ತು ಪರಿಹಾರ ಘೋಷಣೆ
ರಾಜ್ಯದಲ್ಲಿ ಮಳೆ ಪ್ರವಾಹದಿಂದ ಬೆಳೆ ಹಾನಿ ಸಂಭವಿಸಿದಲ್ಲಿ, ಸಮೀಕ್ಷೆ ಮಾಡಿ ಅಧಿಕಾರಿಗಳು ಕೂಡಲೇ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಜೀವಹಾನಿ, ಜಾನುವಾರು ಹಾನಿ ಸಂಭವಿಸಿದಾಗ ತಕ್ಷಣ ಪರಿಹಾರ ಕ್ರಮ ವಿತರಿಸಬೇಕು. ಕಂದಾಯ, ಪೊಲೀಸ್ , ಅಗ್ನಿ ಶಾಮಕ ಇತರೆ ಇಲಾಖೆಗಳ ಸಮನ್ವಯದಿಂಧ ಕೆಲಸ ಮಾಡಬೇಕು ಎಂದು ಬೊಮ್ಮಾಯಿ ಸೂಚನೆ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ಎಸ್ಡಿಆರ್ಎಫ್, ಎನ್ ಡಿಆರ್ ಎಫ್ ರಕ್ಷಣ ಕಾರ್ಯಕ್ಕೆ ಬಳಸಿಕೊಳ್ಳಬೇಕು. ಕಡಲ ಕೊರತ ಆದಲ್ಲಿ ತುರ್ತಾಗಿ ಕಾಮಗಾರಿ ಕೈಗೊಂಡು ಹೆಚ್ಚು ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ವಿದ್ಯುತ್ ಅಡಚಣೆಯಾಗದಂತೆ ತುರ್ತು ಕ್ರಮ:
ಪ್ರವಾಹಕ್ಕೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಪ್ರವಾಹಕ್ಕೆ ತುತ್ತಾಗುವ ಮಂದಿ ನೇರ ಸಂಪರ್ಕ ಸಾಧಿಸಲು ನಿಯಂತ್ರಣ ಕೊಠಡಿ ಸ್ಥಾಪಿಸಬೇಕು. ಜನ ಸಾಮಾನ್ಯರ ಕಷ್ಟಗಳಿಗೆ ಸರ್ಕಾರದ ಆಡಳಿತ ತುರ್ತು ಸ್ಪಂದನೆ ಮಾಡಬೇಕು. ಪೊಲೀಸರು ದಿನದ 24 ಗಂಟೆ ಸೇವೆಗೆ ಲಭ್ಯವಿರಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಸರಿ ಪಡಿಸಿ ವಿದ್ಯುತ್ ಸರಬರಾಜಿನಲ್ಲಿ ತಡೆಯಾಗದಂತೆ ಕ್ರಮ ವಹಿಸಬೇಕು ಎಂದು ಸಿಎಂ ಸಲಹೆ ಮಾಡಿದರು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಪರಿಹಾರ ಕಾರ್ಯಗಳಿಗೆ ಸದ್ಬಳಕೆ ಮಾಡುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಯನ್ವಯ ಪರಿಹಾರ ನೀಡಿ. ತೊಡಕುಗಳಿದ್ದಾಗ, ವಿಶೇಷ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ವಿಭಾಗದ ಅಧಿಕಾರಿಗಳ ಮಾರ್ಗದರ್ಶನದೊಂದಿಗೆ ಕೆಲಸ ನಿರ್ವಹಿಸುವಂತೆ ಸೂಚಿಸಿದರು. ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಸುನಿಲ್ ಕುಮಾರ್, ನಾರಾಯಣಗೌಡ, ಕೋಟ ಶ್ರೀನಿವಾಸ ಪೂಜಾರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಭಿವೃದ್ಧಿ ಆಯುಕ್ತರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications