ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ; ಅ.3ಕ್ಕೆ ಪ್ರತಿಭಟನೆ
ಬೆಂಗಳೂರು, ಅಕ್ಟೋಬರ್ 02 : ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸಿನ ಪರಿಹಾರ ನೀಡಿಲ್ಲ, ಸಂತ್ರಸ್ತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ.
ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ, ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿದೆ. ಅಕ್ಟೋಬರ್ 3ರಂದು ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ.

ಅಕ್ಟೋಬರ್ 3ರ ಗುರುವಾರ ಬೆಳಗ್ಗೆ 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಫ್ರೀಡಂ ಪಾರ್ಕವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ. ನೆರೆ ಸಂತ್ರಸ್ತರಿಗಾಗಿ ಮಿಡಿಯುವ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.











Click it and Unblock the Notifications