Karnataka Flood: ಪ್ರವಾಹದಿಂದ ಅಪಾರ ಹಾನಿ, ಪರಿಹಾರ-ವಿಶೇಷ ಪ್ಯಾಕೇಜ್ಗೆ ಮನವಿ, ವೈಮಾನಿಕ ಸಮೀಕ್ಷೆಗೆ ಡೇಟ್ ಫೀಕ್ಸ್
Bidar Rain & Flood: ಭಾರೀ ಮಳೆ ಹಾಗೂ ಭೀಮಾ ನದಿ ನೀರು ಬಿಡುಗಡೆ ಹಿನ್ನೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಉಂಟಾಗಿದೆ. ರೈತರ ಬೆಳೆ ಕೈಗೆ ಸಿಗದೆ ನಷ್ಟವಾಗಿದೆ. ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿಗೆ ಹಾನಿ ಉಂಟಾಗಿದೆ. ಈ ಸಂಬಂಧ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪೌರಾಡಳಿತ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆಗೆ ಮನವಿ ಮಾಡಿದ್ದಾರೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಸಲ್ಲಿಸಿದರು. ಬೀದರ್ ಜಿಲ್ಲೆಯಲ್ಲಿ ಸದ್ಯ ಉಂಟಾಗಿರುವ ಮಳೆ, ಪ್ರವಾಹ ಸ್ಥಿತಿಗತಿ, ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಈಶ್ವರ್ ಖಂಡ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳೆಗಳು, ಮನೆಗಳು ಹಾಗೂ ಮೂಲಸೌಕರ್ಯಗಳಿಗೆ ತೀವ್ರ ಹಾನಿಯಾಗಿದೆ ಉಂಟಾಗಿದೆ. ರೈತರ ಜೀವನ ಸಂಪೂರ್ಣ ಸಂಕಷ್ಟಕ್ಕೀಡಾಗಿದೆ. ವೈಮಾನಿಕ ಸಮೀಕ್ಷೆ ನಡೆಸಿ ತುರ್ತು ಪರಿಹಾರ ಹಾಗೂ ವಿಶೇಷ ಘೋಷಣೆ ಮಾಡುವಂತೆ ಕೋರಿ ಸಚಿವ ರಹೀಂ ಖಾನ್ ಅವರ ಜೊತೆಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ. ವಿಶೇಷ ಮನವಿ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದರು.
ಸಿಎಂ ವೈಮಾನಿಕ ಸಮೀಕ್ಷೆಯ ಭರವಸೆ
ಮುಖ್ಯಮಂತ್ರಿಗಳು ನನ್ನ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ, ಸೆಪ್ಟೆಂಬರ್ 30 ರಂದು ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಹವಾಮಾನ ಬದಲಾವಣೆ ಹಾಗೂ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಈ ಬಾರಿಯ ಋತುಮಾನಗಳಲ್ಲಿ ದೊಡ್ಡ ಏರುಪೇರಾಗಿದ್ದರೆ, ಅದರ ಹೊಡೆತದ ಗಡಿ ಜಿಲ್ಲೆ ಬೀದರ್ ಮೇಲೂ ಬಿದ್ದಿದೆ. ಜಿಲ್ಲೆಯ ಶೇ.75ರಷ್ಟು ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, 4.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ. ಆಗಸ್ಟ್ನಲ್ಲಿ ಸುರಿದ ಮಳೆಯಿಂದ ಶೇ.25ರಷ್ಟು ಬೆಳೆ ಹಾನಿಯಾಗಿದೆ. ಈಗ ಸೆಪ್ಟೆಂಬರ್ನಲ್ಲಿ ಸುರಿದ ನಿರಂತರ ಮಳೆಯಿಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿ ಎಲ್ಲಾ ಬೆಳೆಗಳಿಗೆ ಹಾನಿಯಾಗಿದೆ ಎಂದು ಸಚಿವರು ಸಿಎಂ ಗಮನಕ್ಕೆ ತಂದರು.
ಪ್ರವಾಹದಿಂದ ಸೇತುವೆಗಳು ಕುಸಿದು ಸಂಚಾರ ಸಂಪರ್ಕ ಕಡಿತವಾಗಿದೆ. ಅನೇಕ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿ ಜನರು ಅಂಧಕಾರದಲ್ಲಿ ಜೀವನ ನಡೆಸುತ್ತಿದ್ದಾರೆ. ಶಾಲೆ, ಅಂಗನವಾಡಿ, ಆಸ್ಪತ್ರೆ ಹಾಗೂ ಸರ್ಕಾರಿ ಕಚೇರಿಗಳ ಕಟ್ಟಡಗಳು ಸೊರಗಿವೆ. ಫಲವತ್ತಾದ ಮಣ್ಣು ಕೊಚ್ಚಿಹೋಗಿ ಭೂಮಿ ಸವಳು ಜವಳಾಗಿದೆ.
ಈ ಎಲ್ಲಾ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿ, ರೈತರ ಸಂಕಷ್ಟ ನಿವಾರಣೆಗೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ವಿನಂತಿಸಲಾಗಿದೆ. ನಮ್ಮ ಜಿಲ್ಲೆಯ ಜನರ ಪರವಾಗಿ ನೆರವು ಹಾಗೂ ವಿಶೇಷ ಕೊಡುಗೆ ನೀಡಲಾಗುವುದು ಎಂಬ ಭರವಸೆ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications