ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ; ಬಿಎಸ್ವೈಗೆ ಜೆಡಿಎಸ್ ಪ್ರಶ್ನೆ
Recommended Video
ಬೆಂಗಳೂರು, ಆಗಸ್ಟ್ 07 : ಕರ್ನಾಟಕ ಜೆಡಿಎಸ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. "ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ?" ಎಂದು ಟ್ವೀಟರ್ ಮೂಲಕ ಪ್ರಶ್ನೆ ಮಾಡಿದೆ.
ಬುಧವಾರ "ಸರ್ಕಾರ ಕಾಣೆಯಾಗಿದೆ..." ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ. ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವಾಗ ಯಡಿಯೂರಪ್ಪ ದೆಹಲಿಗೆ ಹೋಗಿ ಕೂತಿರುವುದನ್ನು ಪ್ರತಿಪಕ್ಷ ಟೀಕೆ ಮಾಡಿದೆ.
"ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ ಹಾಗೆಯೇ" ಯಡಿಯೂರಪ್ಪ ಕಥೆಯಾಗಿದೆ ಎಂದು ವಾಗ್ದಾಳಿ ನಡೆಸಿದೆ. ಮುಖ್ಯಮಂತ್ರಿಗಳೂ ಇಲ್ಲ....ಮಂತ್ರಿಗಳು ಇಲ್ಲ ಎಂದು ಸರ್ಕಾರವನ್ನು ಟೀಕಿಸಿದೆ.
ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ಸೋಮವಾರ ಸಂಜೆ ದೆಹಲಿಗೆ ಹೋಗಿದ್ದಾರೆ. ಮಂಗಳವಾರ ಅವರು ಪ್ರಧಾನಿ ಮೋದಿ ಮತ್ತು ವಿವಿಧ ಕೇಂದ್ರ ಸಚಿವರನ್ನು ಭೇಟಿಯಾಗಿದ್ದರು. ರಾಜ್ಯದ ಸಂಸದರ ಜೊತೆ ಸಭೆಯನ್ನು ನಡೆಸಿದ್ದರು.

ಇದೇನಾ ನಿಮ್ಮ ಆಡಳಿತ
"ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ?" ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.

ಸರ್ಕಾರ ಕಾಣೆಯಾಗಿದೆ
ಕರ್ನಾಟಕ ಜೆಡಿಎಸ್ "ಸರ್ಕಾರ ಕಾಣೆಯಾಗಿದೆ" ಎಂದು ಟ್ವೀಟ್ ಮಾಡಿದೆ.
ಬಿ. ಎಸ್. ಯಡಿಯೂರಪ್ಪ ಜುಲೈ 26ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ, ಸಚಿವ ಸಂಪುಟ ವಿಸ್ತರಣೆಯಾಗದ ಕಾರಣ ರಾಜ್ಯದಲ್ಲಿ ಸಚಿವರು ಇಲ್ಲ. ಸಿಎಂ ದೆಹಲಿ ಪ್ರವಾಸದಲ್ಲಿದ್ದಾರೆ.

ಸರ್ಕಾರ ಗಂಜಿ ಕೇಂದ್ರಗಳನ್ನು ಸ್ಥಾಪಿಸಿಲ್ಲ
"ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿಯಿಂದ ಜನರು ನರಳುತ್ತಿದ್ದಾರೆ. ಇದುವರೆಗೂ ಸರ್ಕಾರ ಗಂಜಿ ಕೇಂದ್ರಗಳನ್ನು ಸ್ಥಾಪಿಸಿಲ್ಲ, ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಗಳೂ ಇಲ್ಲ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಾಧ್ಯವಾದಷ್ಟು ಜನರಿಗೆ ಸಹಾಯ ಮಾಡಲು ಕೋರಲಾಗಿದೆ" ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಯಡಿಯೂರಪ್ಪ ವಾಪಸ್
ದೆಹಲಿಯಲ್ಲಿರುವ ಬಿ. ಎಸ್. ಯಡಿಯೂರಪ್ಪ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಯಲ್ಲಿ ಪ್ರವಾಸ ಮಾಡಿ, ಮುಂದಿನ ವಾರ ದೆಹಲಿಗೆ ಬರುವಂತೆ ಅವರಿಗೆ ಸೂಚನೆ ನೀಡಲಾಗಿದೆ.












Click it and Unblock the Notifications