'ಆತಂಕ ಬೇಡ, ಕೆಲವೇ ಗಂಟೆಗಳಲ್ಲಿ ಪ್ರವಾಹ ಸ್ಥಿತಿ ತಹಬದಿಗೆ'
Recommended Video
ಬೆಂಗಳೂರು, ಆಗಸ್ಟ್ 12: ರಾಜ್ಯದಲ್ಲಿ ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸೋಮವಾರ ಯಲ್ಲೋ(ಹಳದಿ) ಅಲರ್ಟ್ ಇರುತ್ತದೆ. ಸೋಮವಾರ ಕಳೆಯುವಷ್ಟರಲ್ಲಿ ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಭಾನುವಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ರಾಜ್ಯದಲ್ಲಿ ಮಳೆಯ ವಿವರ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಮಾಹಿತಿ ಒದಗಿಸಿದರು.
ಪ್ರವಾಹ: ಉತ್ತರ ಕರ್ನಾಟಕ ಬಳಿಕ ಕರಾವಳಿ ಕರ್ನಾಟಕದತ್ತ ಯಡಿಯೂರಪ್ಪ
ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 34 ಜನರು ಮೃತಪಟ್ಟಿದ್ದು, ಪ್ರವಾಹ ಹಾಗೂ ಮಳೆಯಿಂದಾಗಿ ಮರಣ ಹೊಂದಿದವರ ಕುಟುಂಬದವರಿಗೆ 48 ಗಂಟೆಗಳಲ್ಲಿ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಲಾಗುತ್ತಿದೆ ಎಂದರು.
ಪರಿಹಾರ ಕೇಂದ್ರಗಳನ್ನು ಆರಂಭಿಸಿ ಸಂತ್ರಸ್ತ ಜನರಿಗೆ ಊಟ, ವಸತಿ ಮತ್ತು ಬಟ್ಟೆಗಳನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಕೂಡ ನೀಡಲಾಗುತ್ತಿದೆ. ಇದಲ್ಲದೇ ಜಾನುವಾರುಗಳಿಗೂ ಆಶ್ರಯ ಒದಗಿಸಿದ್ದು, ಮೇವು ವಿತರಣೆ ಮಾಡಲಾಗುತ್ತಿದೆ ಎಂದರು. ಈವರೆಗೆ 3 ಲಕ್ಷಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದರು.
ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ ಮತ್ತು ಪುನರ್ವಸತಿ ಕಾರ್ಯ ಕೈಗೊಳ್ಳಲು ಈಗಾಗಲೇ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಕೊನೆಗೂ ತಗ್ಗಿದ ಮಳೆರಾಯ; ಹಲವು ಗ್ರಾಮಗಳು ಜಲದಿಗ್ಬಂಧನದಿಂದ ಮುಕ್ತ
ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರವಾಹ ಪೀಡಿತ ವಿವಿಧ ಜಿಲ್ಲೆಗಳಲ್ಲಿ 4.15 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. 136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ಶಾಲೆಗಳು, ಪೈಪ್ ಲೈನ್, ವಿದ್ಯುತ್ ಕಂಬಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಹಾನಿಯ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಅಪರ ಮುಖ್ಯ ಕಾರ್ಯದರ್ಶಿಗಳಾದ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ, ಲಕ್ಷ್ಮೀನಾರಾಯಣ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯಿತಿ ಸಿಇಓ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.