ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ: ಕೇಂದ್ರದಿಂದ ಅಗತ್ಯ ನೆರವಿನ ಭರವಸೆ
ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ.ಇದರ ಸಮರ್ಪಕ ನಿರ್ವಹಣೆಗಾಗಿ ಕೇಂದ್ರದಿಂದ ಅಗತ್ಯ ನೆರವು ನೀಡುವುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಿಎಂ ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ.
ಪ್ರವಾಹ ಪರಿಸ್ಥಿತಿ ನಿರ್ವಹಣೆ ಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಸೇನಾ ಹೆಲಿಕಾಪ್ಟರ್ ಹಾಗೂ ಅಗತ್ಯ ಕೇಂದ್ರ ರಕ್ಷಣಾ ತಂಡಗಳನ್ನು ರಾಜ್ಯಕ್ಕೆ ಇಂದು ಸಂಜೆಯೊಳಗೆ ಕಳುಹಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸೇನೆಯ ಹತ್ತು ಹೆಲಿಕಾಪ್ಟರ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ಗೆ ಕಳುಹಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯ ಸಹ ಭರ್ತಿಯಾಗುತ್ತಿದ್ದು, ನೀರಿನ ಮಟ್ಟದಲ್ಲಿಯೂ ಸಹ ಹೆಚ್ಚಳವಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2,922 ಅಡಿ ಆಗಿದ್ದು, 2,899.77 ಅಡಿಯಷ್ಟು ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿಯಾಗಿದ್ದು, ಒಳಹರಿವು 28,317 ಕ್ಯೂಸೆಕ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಾನಳ್ಳಿಯಲ್ಲಿ ಆಗಸ್ಟ್ 5ರಿಂದ ಆ.6ರವರೆಗೆ24 ತಾಸುಗಳಲ್ಲಿ 389 ಮಿ.ಮೀ ಮಳೆಯಾಗಿದ್ದರೆ, ಚಿಕ್ಕಮಗಲೂರು ಜಿಲ್ಲೆ ದಾರದಹಳ್ಳಿ ಆ.6 ರಿಂದ ಆ.7ರವರೆಗಿನ 24 ತಾಸುಗಳಲ್ಲಿ 369.5 ಮಿ.ಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಹಾಮಳೆ ಈ ಮುಂಗಾರು ಅವಧಿಯಲ್ಲಿ ರಾಜ್ಯ ಎದುರಿಸುತ್ತಿರುವ ಮಳೆ ಕೊರತೆಯನ್ನು ಬಹುತೇಕ ನೀಗಿಸಿದೆ.

ಪ್ರವಾಹ ಸ್ಥಿತಿ ನಿರ್ಮಿಸಲು ಸಮರ್ಪಕ ಕ್ರಮ
ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು. ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು. ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂ ಪರಿಹಾರ ನೀಡಲಾಗುವುದು.

ಸಂಸದರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ
ಪ್ರವಾಹ ಪರಿಸ್ಥಿತಿ ನಿಬಾಯಿಸಲು ಜಗದೀಶ್ ಶೆಟ್ಟರ್, ಈಶ್ವರಪ್ಪ, ಶೋಭಾ ಕರಂದ್ಲಾಜೆ, ಕೋಟಾ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ, ಬಿ.ವೈ.ರಾಘವೇಂದ್ರ, ಸಿ.ಎಂ.ಉದಾಸಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ನಡೆಸಲು ಸೂಚಿಸಲಾಗಿದೆ. ಇನ್ನೂ ಮೂರು ದಿನ ಉತ್ತರ ಕನ್ನಡದಲ್ಲೇ ವಾಸ್ತವ್ಯ ಮಾಡಲಿದ್ದು ಪ್ತವಾಹ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು. ಜನರು ಆತಂಕಪಡುವ ಅಗತ್ಯವಿಲ್ಲ.

ಕೆಆರ್ಎಸ್ ಒಳಹರಿವು ಹೆಚ್ಚಳ
ಕೊಡಗು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸುಗೊಂಡ ಹಿನ್ನೆಲೆ ಕೆಆರ್ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನ ಒಳ ಹರಿವು 26,522 ಕ್ಯೂಸೆಕ್ ಏರಿಕೆಯಾಗಿದೆ. ಬೆಳಗ್ಗೆ 22,719 ಕ್ಯೂಸೆಕ್ ಇದ್ದ ಒಳ ಹರಿವು ಸಂಜೆ ಹೊತ್ತಿಗೆ 26,522 ಕ್ಯೂಸೆಕ್ಗೆ ತಲುಪಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದು 88.60 ಅಡಿ ನೀರು ಸಂಗ್ರವಾಗಿದೆ. ಒಳ ಹರಿವು 26,522 ಕ್ಯೂಸೆಕ್ ಇದ್ದು, ಪ್ರಸ್ತುತ 15.121 ಟಿಎಂಸಿ ನೀರು ಸಂಗ್ರಹವಾಗಿದೆ.

ಕಬಿನಿ ಭರ್ತಿಗೆ ಕೇವಲ 4 ಅಡಿ ಬಾಕಿ
ಕಬಿನಿ ಜಲಾಶಯದ ನೀರಿನ ಮಟ್ಟ 80 ಅಡಿ ತಲುಪಿದ್ದು, ಗರಿಷ್ಠ ಮಟ್ಟ 84 ಅಡಿ ಆಗಿದೆ. ಜಲಾಶಯದ ಸದ್ಯದ ಒಳಹರಿವು 23,000 ಕ್ಯೂಸೆಕ್ ಆಗಿದ್ದು, ಹೊರಹರಿವು 10,000 ಕ್ಯೂಸೆಕ್ ಇದೆ. ಜಲಾಶಯದ ಸಂಪೂರ್ಣ ಭರ್ತಿಗೆ 4 ಅಡಿಗಳು ಮಾತ್ರ ಬಾಕಿ ಇದ್ದು, ಒಳಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಜಲಾಶಯದಿಂದ ಹೊರಹರಿವು ಹೆಚ್ಚಳ ಮಾಡಲಾಗಿದೆ.
ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಪಿಲಾ ನದಿಯ ಇಕ್ಕೆಲಗಳ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.












Click it and Unblock the Notifications