ಬಲವಂತವಾಗಿ ಲಿಂಗ ಬದಲಾಯಿಸಿದ್ದ ವೈದ್ಯೆಯ ವಿರುದ್ಧ ಕೇಸ್ ರದ್ದಿಲ್ಲ
ಬೆಂಗಳೂರು,ಸೆ.12. ಬಾಲಕನೊಬ್ಬನನ್ನು ಅಪಹರಿಸಿ ಬಲವಂತವಾಗಿ ಶಸ್ತ್ರಚಿಕಿತ್ಸೆ ಮಾಡಿ ಲಿಂಗ ಪರಿವರ್ತನೆ ಮಾಡಿದ್ದ ಮಂಡ್ಯದ ವೈದ್ಯೆಯೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ಮುಂದುವರಿಯಲಿದೆ.
ಡಾ.ಅನಿತಾ ಪಾಟೀಲ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಅವರು ತಮ್ಮ ವಿರುದ್ಧದ ಎಫ್ಐಆರ್ ಮತ್ತು ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಪ್ರಕರಣ ರದ್ದಿಗೆ ಸೂಕ್ತ ಕಾರಣಗಳಿಲ್ಲ:
ಅಲ್ಲದೆ, ವೈದ್ಯರು ತಮ್ಮೆ ವಾದ ಏನೇ ಇದ್ದರೂ ವಿಚಾರಣಾ ಕೋರ್ಟ್ ಮುಂದೆ ಮಂಡಿಸಲು ಸ್ವತಂತ್ರರರು ಎಂದು ನ್ಯಾಯಪೀಠ ಹೇಳಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವೈದ್ಯರ ವಿರುದ್ಧ ರೋಗಿಗಳಿಗೆ ಚಿಕಿತ್ಸೆ ವೇಳೆ ನಿರ್ಲಕ್ಷ್ಯ ತೋರಿದ ಆರೋಪವಿದ್ದರೆ, ಆಗ ಮಾತ್ರ ಇತರೆ ವೈದ್ಯರಿಂದ ಅಭಿಪ್ರಾಯ ಪಡೆಯುವುದು ಕಡ್ಡಾಯ. ಈ ಪ್ರಕರಣದಲ್ಲಿ ಅಂತಹ ಆರೋಪವಿಲ್ಲ. ಬಾಲಕನ ಒಪ್ಪಿಗೆ ಪಡೆಯದೆ ಶಸ್ತ್ರ ಚಿಕಿತ್ಸೆ ನಡೆಸಿ ಆತನನ್ನು ಬಾಲಕಿಯಾಗಿ ಲಿಂಗ ಪರಿವರ್ತನೆ ಮಾಡಿದ ಆರೋಪ ಅರ್ಜಿದಾರರ ಮೇಲಿದೆ. ಲಿಂಗ ಪರಿವರ್ತನೆ ನಡೆದಾಗ ಸಂತ್ರಸ್ತನು ಅಪ್ರಾಪ್ತನಾಗಿದ್ದ. ಇಂತಹ ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಬಿಡಬೇಕಾಗುತ್ತದೆ. ಹಾಗಾಗಿ, ಅರ್ಜಿದಾರರು ವಿರುದ್ಧದ ಪ್ರಕರಣ ರದ್ದುಪಡಿಸಲು ಸೂಕ್ತ ಕಾರಣಗಳು ಇಲ್ಲ ಎಂದು ನ್ಯಾಯಾಲಯ ಆದೇಶಿಸಿದೆ.
ಡಾ.ಅನಿತಾ ಪಾಟೀಲ್ ಪರ ವಕೀಲರು, ಪ್ರಕರಣದಲ್ಲಿ ತಪ್ಪಾಗಿ ಅರ್ಜಿದಾರರನ್ನು ಸಿಲುಕಿಸಲಾಗಿದೆ. ದೂರುದಾರರು ಆರೋಪಿಸಿದಂತೆ ಅರ್ಜಿದಾರರು ಯಾವುದೇ ಶಸ್ತ್ರ ಚಿಕಿತ್ಸೆ ಮಾಡಿಲ್ಲ. ವೈದ್ಯಕೀಯನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಜೇಕಬ್ ಮ್ಯಾಥ್ಯೂ ಮತ್ತು ಪಂಜಾಬ್ ಸರ್ಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೊರ್ಟ್ ರೂಪಿಸಿರುವ ಮಾರ್ಗಸೂಚಿ ಪಾಲಿಸದೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ಜರುಗಿಸಲು ಸಾಧ್ಯವಿಲ್ಲ. ವೈದ್ಯಕೀಯ ನಿರ್ಲಕ್ಷ್ಯದ ಬಗ್ಗೆ ಏಕಾಏಕಿ ಅವರನ್ನು ವೈದ್ಯರ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗದು ಎಂದರು.
ಜೊತೆಗೆ ಆರೋಪದ ಕುರಿತು ಮತ್ತೊಬ್ಬ ವೈದ್ಯರಿಂದ ಅಭಿಪ್ರಾಯ ಪಡೆಯಬೇಕು ಎಂಬುದಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಲ್ಲ ಎಂದು ತಿಳಿಸಿದ್ದರು.
ಪ್ರಕರಣದ ವಿವರ: 2018ರ ಫೆ.11ರಂದು ಸಾಕಮ್ಮ ಎಂಬುವರು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಟೌನ್ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿ, ವೈದ್ಯೆ ಅನಿತಾ ಪಾಟೀಲ್ ಮತ್ತಿತರರು ತಮ್ಮ ಮೊಮ್ಮಗನನ್ನು ಅಪಹರಿಸಿ ಶಸ್ತ್ರ ಚಿಕಿತ್ಸೆ ಮೂಲಕ ಬಲವಂತವಾಗಿ ಲಿಂಗ ಪರಿವರ್ತನೆ ಮಾಡಿದ್ದಾರೆ ಎಂದು ದೂರಿದ್ದರು. ತನಿಖೆ ನಡೆಸಿದ್ದ ಪೊಲೀಸರು ಅರ್ಜಿದಾರರ ವಿರುದ್ಧ ಅಪ್ರಾಪ್ತರ ಮೇಲೆ ಅಪಹರಣ, ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಮಾರಣಾಂತಿಕ ಹಲ್ಲೆ, ಮಕ್ಕಳ ಕಳ್ಳ ಸಾಗಣೆ ಸೇರಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಕಾಯ್ದೆಯಡಿ, ಭಾರತೀಯ ದಂಡ ಸಂಹಿತೆ ಮತ್ತು ಬಾಲ ನ್ಯಾಯ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿ ವಿಚಾರಣಾ ನ್ಯಾಯಾಲಯಕ್ಕೆ 2019ರ ಜ.5ರಂದು ಆರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ತಮ್ಮ ವಿರುದ್ಧ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು.












Click it and Unblock the Notifications