ಬಿಜೆಪಿ ಮಾಜಿ ಶಾಸಕ, ಯಡಿಯೂರಪ್ಪ ಆಪ್ತ ವೆಂಕಟರೆಡ್ಡಿ ಮುದ್ನಾಳ್ ವಿಧಿವಶ
ಬೆಂಗಳೂರು, ಸೆಪ್ಟೆಂಬರ್ 17: ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಪ್ತರಾಗಿದ್ದ ವೆಂಕಟ ರೆಡ್ಡಿ ಮುದ್ನಾಳ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟ ರೆಡ್ಡಿ ಮುದ್ನಾಳ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು (ಸೆಪ್ಟೆಂಬರ್ 17) ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅತ್ಯಾಪ್ತರಾಗಿದ್ದ ವೆಂಕಟ ರೆಡ್ಡಿ ಮುದ್ನಾಳ ಅವರು ರಾಜ್ಯದಲ್ಲಿ ಬಿಜೆಪಿ ಬಲಪಡಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಯಾದಗಿರಿ ಕ್ಷೇತ್ರದಲ್ಲಿ 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ ವೆಂಕಟರೆಡ್ಡಿ ಮುದ್ನಾಳ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋಲುಕಂಡರು. ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟರೆಡ್ಡಿ ಮುದ್ನಾಳ ಅವರು ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿರುವ ಮುದ್ನಾಳವರ ಪಾರ್ಥಿವ ಶರೀರವು ಇಂದು ರಾತ್ರಿ ಯಾದಗಿರಿಗೆ ರವಾನೆಯಾಗಲಿದ್ದು, ಸಾರ್ವಜನಿಕರಿಂದ ಅಂತಿಮ ದರ್ಶನ ಪಡೆದ ಬಳಿಕ ನಾಳೆ ಸಂಜೆ ಯಾದಗಿರಿ ತಾಲೂಕಿನ ಅವರ ಸ್ವಗ್ರಾಮ ಮುದ್ನಾಳದಲ್ಲಿ ಅಂತ್ಯಕ್ರಿಯೆ ನೆರೆವೇರಲಿದೆ ಎಂದು ಆಪ್ತರು ತಿಳಿಸಿದ್ದಾರೆ.
ಗಣ್ಯರ ಸಂತಾಪ
ವೆಂಕಟ ರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ. ಯಾದಗಿರಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರ ನಿಧನಕ್ಕೆ ಸಂತಾಪ ಕೋರುವೆ. ನೇರ ನಡೆ ನುಡಿಗೆ ಹೆಸರಾಗಿ ನೈಜ ಜನಕಾಳಜಿಯ ಹಿರಿಯ ನಾಯಕರಾಗಿದ್ದ ಮಾನ್ಯ ಮುದ್ನಾಳ್ ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದಿದ್ದಾರೆ.
ಯಾದಗಿರಿ ಜಿಲ್ಲೆಯ ಮಾಜಿ ಶಾಸಕರಾದ ವೆಂಕಟರಡ್ಡಿ ಮುದ್ನಾಳವರು ಇಂದು ನಮ್ಮನ್ನಗಲಿದ್ದಾರೆ. ನಮ್ಮನ್ನಗಲಿದ ಅವರ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ಅವರ ಬಂಧು ಮಿತ್ರ ವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಸಂತಾಪ ಸೂಚಿಸಿದ್ದಾರೆ.












Click it and Unblock the Notifications