ಜಿಲ್ಲಾ,ತಾಲೂಕು ಪಂಚಾಯತಿ ಚುನಾವಣೆಗೆ ಜೋಶಿಯೇ ಸಾರಥಿ
ಮಂಡ್ಯ,ಜನವರಿ,21: ರಾಜ್ಯ ಬಿಜೆಪಿ ಸಾರಥ್ಯ ಬಿ.ಎಸ್.ಯಡಿಯೂರಪ್ಪ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಷಿ ನೇತೃತ್ವದಲ್ಲೇ ನಡೆಯಲಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸಂದರ್ಭ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು,'ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಬಳಿಕ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.[ಯಡಿಯೂರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಹುತೇಕ ಖಚಿತ]
ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇವೆ. ನನ್ನ ಆಡಳಿತ ವೈಖರಿ ಬಗ್ಗೆ ಜನರಲ್ಲಿ ಇನ್ನೂ ಒಲವಿದೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಭರವಸೆಯ ನುಡಿಗಳಾಡಿದರು.[ಬಿಎಸ್ ವೈ ವಿರುದ್ಧದ 15 ಎಫ್ಐಆರ್ ಹೈಕೋರ್ಟ್]
ಹೆಬ್ಬಾಳ, ದೇವದುರ್ಗ, ಬೀದರ್ ಈ ಮೂರು ಕ್ಷೇತ್ರಗಳಲ್ಲಿ ಫೆಬ್ರವರಿ 13ಕ್ಕೆ ನಡೆಯುವ ಉಪ ಚುನಾವಣೆ ನಡೆಯಲಿದೆ. ಇದರಲ್ಲಿ ಬಿಜೆಪಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಯಾರ ಪರವಾಗಿಯೂ ಲಾಬಿ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಹೇಳಿಕೆ ನೀಡಿರುವ ಫಡ್ನಾವಿಸ್ ಹೇಳಿಕೆ ಅಕ್ಷಮ್ಯ ಅಪರಾಧ. ಈ ರೀತಿಯ ಹೇಳಿಕೆಯನ್ನು ಖಂಡಿಸುವುದಾಗಿಯೂ ತಿಳಿಸಿದರು.