Get Updates
Get notified of breaking news, exclusive insights, and must-see stories!

Budget 2023; ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್: ಸಿದ್ದರಾಮಯ್ಯ

ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು,ಫೆಬ್ರವರಿ1: ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ ' ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಸಚಿವ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಬಜೆಟನ್ನು ಮಂಡಿಸಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ. ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇಕಡಾ 54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿಯಷ್ಟು ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿನ ಅನ್ಯಾಯ, ಅವೈಜ್ಞಾನಿಕ ಬೆಳೆ ವಿಮೆ, ಸಾಲದ ಹೊರೆ, ನೆರೆ ಮತ್ತು ಬರಪರಿಹಾರದಲ್ಲಿನ ಕೊರತೆಗಳ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ.
ರೈತರ ಆದಾಯವನ್ನು ದುಪ್ಪಟ್ಟು ಮಾಡಲಾಗುವುದು ಎಂಬ ಘೋಷಣೆ ಪೊಳ್ಳಾಗಿದೆ.

Former Chief Minister Siddaramaiah Reaction on Union Budget 2023

ಕನಿಷ್ಠ ಸಣ್ಣ ಹಿಡುವಳಿದಾರ ರೈತರ ಸಾಲವನ್ನಾಧರೂ ಮನ್ನಾ ಮಾಡಬಹುದೆಂಬ ನಿರೀಕ್ಷೆ ಸುಳ್ಳಾಗಿದೆ. ರೈತರಿಗೆ ಸಾಲ ನೀಡಲು ಎರಡು ಲಕ್ಷ ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ರೈತರನ್ನು ಋಣಮುಕ್ತಗೊಳಿಸಬೇಕಾಗಿರುವ ಸರ್ಕಾರ ಅವರನ್ನು ಇನ್ನಷ್ಟು ಸಾಲದ ಬಲೆಗೆ ನೂಕಲು ಹೊರಟಿದೆ. ಹೊಸ ಸಾಲ ಪಡೆದು ಹಳೆಸಾಲ ತೀರಿಸಿ ಎನ್ನುವುದನ್ನು ಸರ್ಕಾರ ಹೇಳಿದೆ. ಈ ಸಾಲದ ಬಡ್ಡಿದರ ಎಷ್ಟು ಎನ್ನುವುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.

ಹತ್ತಿಬೆಳೆಯನ್ನು ಹೊರತುಪಡಿಸಿದರೆ ಬೇರೆ ಯಾವ ಬೆಳೆಗೂ ಬೆಳೆ ಕೇಂದ್ರಿತ ಯೋಜನೆಗಳು ಬಜೆಟ್ ನಲ್ಲಿ ಇಲ್ಲ. ತೋಟಗಾರಿಕಾ ಬೆಳೆಗಳನ್ನು ಪ್ರಸ್ತಾಪ ಮಾಡಲಾಗಿದ್ದರು ಅಲ್ಲಿಯೂ ಬೆಳೆ ಕೇಂದ್ರಿತ ಉದಾಹರಣೆಗೆ ತೆಂಗು, ಅಡಿಕೆ ಇತ್ಯಾದಿ ಬೆಳೆಗಳಿಗೆ ನಿರ್ದಿಷ್ಠ ಯೋಜನೆಗಳನ್ನು ಹೇಳಿಲ್ಲ.

ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆ ಪೂರ್ಣಗೊಳ್ಳಬೇಕಾದರೆ ರೂ.23,000 ಕೋಟಿ ಅವಶ್ಯಕತೆಯಿದೆ. ಕೇಂದ್ರ ಸರ್ಕಾರ ನೀಡಲು ಒಪ್ಪಿರುವುದು ಯೋಜನಾ ವೆಚ್ಚದ ಕಾಲುಭಾಗ ಮಾತ್ರ. ಈ ಹಣದಲ್ಲಿ 40% ಕಮಿಷನ್ ಕಳೆದರೆ ಕೊನೆಗೆ ಯೋಜನೆಗೆ ಸಿಗಲಿರುವುದು ರೂ.3000 ಕೋಟಿಗಿಂತಲೂ ಕಡಿಮೆ. ನಿಗದಿ ಪಡಿಸಿರುವ ಹಣ ಕೂಡಾ ಒಂದು ವರ್ಷಕ್ಕೋ ಐದು ವರ್ಷಕ್ಕೋ ಎನ್ನುವದನ್ನೂ ಸ್ಪಷ್ಟಪಡಿಸಿಲ್ಲ ಎಂದು ಹೇಳಿದರು.

ಬಹಳ ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿರುವ ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ಬಿ ಸ್ಕೀಮ್ ಗೆ ಸಂಬಂಧಿಸಿದ ವ್ಯಾಜ್ಯ ಇತ್ಯರ್ಥವಾಗಬೇಕು. ಅಲ್ಲಿಯ ವರೆಗೆ ಈ ಹಣವನ್ನು ಖರ್ಚು ಮಾಡುವ ಹಾಗಿಲ್ಲ. ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಪೈಸೆ ಹಣವನ್ನೂ ನೀಡಿಲ್ಲ.

ಉಪನಗರ ರೈಲ್ವೆ ಮತ್ತು ಮೆಟ್ರೋ ರೈಲು ಯೋಜನೆಗೆ ಹೆಚ್ಚಿನ ಅನುದಾನ ನೀಡಬಹುದೆಂಬ ನಿರೀಕ್ಷೆ ಇತ್ತು ಅದೂ ಸುಳ್ಳಾಗಿದೆ. ಆಹಾರ ಸಬ್ಸಿಡಿಯನ್ನು ಶೇಕಡಾ 31ರಷ್ಟು ಕಡಿಮೆ ಮಾಡಲಾಗಿದೆ. 2022-23ರಲ್ಲಿ ರೂ.2,87,194 ಕೋಟಿಯಷ್ಟು ಆಹಾರ ಸಬ್ಸಿಡಿ ನೀಡಲಾಗಿತ್ತು. ಈ ಬಾರಿ ಅದನ್ನು ರೂ.1,97,350 ಕೋಟಿಗೆ ಇಳಿಸಲಾಗಿದೆ.

ನರೇಗಾ ಯೋಜನೆಗೆ ಶೇಕಡಾ 32ರಷ್ಟು ಕಡಿಮೆ ಅನುದಾನ ನಿಗದಿಪಡಿಸಲಾಗಿದೆ. 2022-23ರಲ್ಲಿ ರೂ.89, 154 ಕೋಟಿ ಗಳಷ್ಟು ನೀಡಲಾಗುತ್ತಿದ್ದ ಅನುದಾನವನ್ನು 2023-24ರ ಸಾಲಿನಲ್ಲಿ ರೂ.61,032 ಕೋಟಿಗೆ ಇಳಿಸಲಾಗಿದೆ.

ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ರಾಜ್ಯ ಸರ್ಕಾರ ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯಲು ಸಂಪೂರ್ಣ ವಿಫಲವಾಗಿದೆ. ಸಾಮಾನ್ಯವಾಗಿ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಸಂಸತ್ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ರಾಜ್ಯದ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡುವುದು ರೂಢಿ. ಆದರೆ ಈ ಬಾರಿ ಈ ಸಂಪ್ರದಾಯವನ್ನು ಮುರಿಯಲಾಗಿದೆ.

ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿಯ 25 ಲೋಕಸಭಾ ಸದಸ್ಯರು ಮತ್ತು ಆರು ರಾಜ್ಯಸಭಾ ಸದಸ್ಯರಿದ್ದಾರೆ. ಇವರಲ್ಲಿ ಯಾರೋಬ್ಬರು ರಾಜ್ಯದ ಬೇಡಿಕೆಗಳ ಬಗ್ಗೆಯಾಗಲಿ, ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆಯಾಗಲಿ ಎಲ್ಲಿಯೂ ಸೊಲ್ಲೆತ್ತಿಲ್ಲ, ಇದರಿಂದಾಗಿ ಕೇಂದ್ರ ಸರ್ಕಾರ ಕೂಡಾ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+