Karnataka By Elections: ಉಪ ಚುನಾವಣೆ, ಕ್ಷೇತ್ರ ಕಾಂಗ್ರೆಸ್ಗೆ ಬಿಟ್ಟುಕೊಟ್ಟ ಮಾಜಿ ಸಿಎಂಗಳು!
ಬೆಂಗಳೂರು, ನವೆಂಬರ್ 23: ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ-2024 ಫಲಿತಾಂಶ ಘೋಷಣೆಯಾಗುತ್ತಿದೆ. ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಜಯಗಳಿಸುವುದು ಖಚಿತವಾಗಿದೆ. ಅಭ್ಯರ್ಥಿಗಳ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ. ಇಬ್ಬರು ಮಾಜಿ ಸಿಎಂಗಳು ಪುತ್ರರನ್ನು ಕ್ಷೇತ್ರದಲ್ಲಿ ಗೆಲ್ಲಿಸುವಲ್ಲಿ ವಿಫಲವಾಗಿದ್ದು, ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದ್ದಾರೆ.
ಶನಿವಾರ ಚನ್ನಪಟ್ಟಣ, ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ವಿರುದ್ಧ ಹಿನ್ನಡೆಯನ್ನು ಅನುಭವಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಎಚ್. ಡಿ. ಕುಮಾರಸ್ವಾಮಿ, ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಜಯಗಳಿಸಿದ್ದರು. ಆದರೆ 2024ರ ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಇಬ್ಬರು ಮಾಜಿ ಸಿಎಂಗಳು ಸಮಾನ ದುಃಖಿಗಳು.
ಗೆಲುವು ಸಾಧಿಸಿದ್ದ ಕುಮಾರಣ್ಣ: ಚನ್ನಪಟ್ಟಣದಲ್ಲಿ 2023ರ ಚುನಾವಣೆಯಲ್ಲಿ ಜೆಡಿಎಸ್ನ ಎಚ್. ಡಿ. ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಬಿಜೆಪಿಯ ಸಿ. ಪಿ. ಯೋಗೇಶ್ವರ ಸೋಲಿಸಿದ್ದರು. 2024ರ ಉಪ ಚುನಾವಣೆಯಲ್ಲಿ ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಸಿ ಕಳೆದ ಚುನಾವಣೆ ಸೇಡು ತೀರಿಸಿಕೊಂಡಿದ್ದಾರೆ.
ಶಿಗ್ಗಾವಿಯಲ್ಲಿ 2023ರಲ್ಲಿ ಬಸವರಾಜ ಬೊಮ್ಮಾಯಿ 100016 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಯಾಸಿರ್ ಪಠಾಣ್ 64,038 ಮತಗಳನ್ನು ಪಡೆದು ಸೋಲು ಕಂಡಿದ್ದರು. 2024ರ ಉಪ ಚುನಾವಣೆಯಲ್ಲಿ ಅವರು ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸೋಲಿಸುವ ಮೂಲಕ ಹಿಂದಿನ ಚುನಾವಣೆ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಇಬ್ಬರಿಗೂ ರಾಷ್ಟ್ರ ರಾಜಕಾರಣದ ಬಗ್ಗೆ ಆಸಕ್ತಿ ಇರಲಿಲ್ಲ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣ ಪಕ್ಷದ ಸೂಚನೆಯಂತೆ ಅನಿವಾರ್ಯವಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಗೆದ್ದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು.
ಉಪ ಚುನಾವಣೆಯಲ್ಲಿ ಪುತ್ರರನ್ನು ಕಣಕ್ಕಿಳಿಸಿ ಕ್ಷೇತ್ರವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಬಯಸಿದ್ದರು. ಆದರೆ ಲೆಕ್ಕಾಚಾರಗಳೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಂತ್ರಗಳ ಮುಂದೆ ಉಲ್ಟಾ ಆಗಿದೆ. ಕಾಂಗ್ರೆಸ್ಗೆ ಗೆಲುವು ಸಿಕ್ಕಿದೆ.
ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೇಶ್ವರ ವೈಯಕ್ತಿಯವಾಗಿಯೂ ಬಹಳ ಪ್ರಭಾವಿ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್, ಡಿ. ಕೆ. ಶಿವಕುಮಾರ್ ಪ್ರಭಾವ ಎಲ್ಲವೂ ಸೇರಿ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, 2023ರ ಚುನಾವಣೆಯಲ್ಲಿ ರಾಮನಗರದಲ್ಲಿ ಸೋತಿದ್ದ ನಿಖಿಲ್ 2024ರಲ್ಲಿ ಚನ್ನಪಟ್ಟಣದಲ್ಲಿ ಸೋಲುವ ಮೂಲಕ ಹ್ಯಾಟ್ರಿಕ್ ಸೋಲು ಅನುಭವಿಸಿದ್ದಾರೆ.
ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ರಾಜಕೀಯದಲ್ಲಿ ಸಕ್ರಿಯವಾಗಿರಲಿಲ್ಲ. ಮೂಲತಃ ಉದ್ಯಮಿಯಾದ ಅವರು 2024ರ ಲೋಕಸಭೆ ಚುನಾವಣೆ ಸಮಯದಲ್ಲಿ ತಂದೆಯ ಪರವಾಗಿ ಪ್ರಚಾರದಲ್ಲಿ ತೊಡಗಿದ್ದರು. ಆದರೆ ಉಪ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಿ, ಶಿಗ್ಗಾವಿ ಗೆಲ್ಲುವ ಲೆಕ್ಕಾಚಾರ ಹಾಕಿತ್ತು. ಅದು ಸಹ ಈಗ ಉಲ್ಟಾ ಹೊಡೆದಿದೆ.












Click it and Unblock the Notifications