ಕನ್ನಡಪರ ಸಂಘಟನೆಗಳ ಸಭೆ ಕರೆದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಫೆ 3: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಬಿಡದಿಯ ತಮ್ಮ ತೋಟದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, "ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ" ಎಂದು ಕುಮಾರಸ್ವಾಮಿ ಹೇಳಿದರು.
"ರಾಜ್ಯದಲ್ಲಿ ಕನ್ನಡ ಸಂಘಟನೆಗಳ ಜತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳಿದ್ದು, ಅವೆಲ್ಲವನ್ನೂ ಒಗ್ಗೂಡಿಸುವ ಕೆಲಸ ಮಾಡಲಾಗುವುದು. ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ನಡೆಸಿ ಸಾಧಿಸಿಕೊಳ್ಳಬೇಕಿದೆ. ಆ ಗುರಿ ಸಾಧನೆಗಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ. ಆ ದಿಕ್ಕಿನಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಇಂಥ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಕೆಲಸವನ್ನು ನಾನು ಮಾಡುತ್ತಿದ್ದೇನೆ" ಎಂದು ಕುಮಾರಸ್ವಾಮಿ ವಿವರಿಸಿದರು.

"ಸುಮಾರು ನೂರೈವತ್ತಕ್ಕೂ ಹೆಚ್ಚು ಕನ್ನಡ ಮುಖಂಡರ ಜತೆ ಚರ್ಚೆ ನಡೆಸಿದ್ದೇನೆ. ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಇವರೆಲ್ಲರ ಜತೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ. ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗೀ ಹಾಗೂ ಕೇಂದ್ರ ಸರಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷದ ಸರಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು" ಎಂದು ಕುಮಾರಸ್ವಾಮಿ ಹೇಳಿದರು.
"ಇಡೀ ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ" ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು.
"ಹಾಗೆಯೇ, ಭಾಷೆಗೆ ಸಂಬಂಧಿಸಿದಂತೆ ಕನ್ನಡವು ದೆಹಲಿಯಿಂದ ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದೆ. ಇದನ್ನು ತಪ್ಪಿಸಬೇಕಿದೆ. ಹಾಗೆಯೇ ರೈತ ಮುಖಂಡರನ್ನೂ ಒಗ್ಗೂಡಿಲಾಗುವುದು. ಜಾತಿ, ಮತ ಮತ್ತು ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ವೇದಿಕೆಗೆ ತಂದು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲ ಮುಖಂಡರ ಜತೆ ಮುಕ್ತವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಎರಡನೇ ಬಾರಿ ನಾನು ಮುಖ್ಯಮಂತ್ರಿಯಾದಾಗ ನನ್ನ 14 ತಿಂಗಳ ಆಡಳಿತಾವಧಿಯಲ್ಲಿ ನಾಲ್ಕೈದು ಬಾರಿ ವಿಧಾನಸಭೆಯಲ್ಲೇ ರೈತರ ಸಭೆ ಮಾಡಿದ್ದೇನೆ. ಆದರೆ, ಈ ಸರಕಾರ ಅಂಥ ಒಂದು ಸಭೆಯನ್ನೂ ಮಾಡಿಲ್ಲ" ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications