ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು? ಕಣ್ಣೀರು ಹಾಕುತ್ತಲ್ಲೇ ಭರವಸೆ ನೀಡಿದ ಎಚ್ಡಿ ಕುಮಾರಸ್ವಾಮಿ
ಬೆಂಗಳೂರು, ಮಾರ್ಚ್ 24: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು, ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.
ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಇನ್ನೂ ನಿವಾಸದ ಮುಂದೆ ಮಂಡ್ಯ ಜಿಲ್ಲೆಯ ಅಭಿಮಾನಿಗಳು ಜಮಾಯಿಸಿದ್ದು, ಮಂಡ್ಯದಿಂದ ಸ್ಪರ್ಧಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಜೆಡಿಎಸ್ ಕಾರ್ಯಕರ್ತರನ್ನ ಉದ್ದೇಶಿಸಿ ಮಾತಾಡುವಾಗ ಕುಮಾರಸ್ವಾಮಿ ಭಾವುಕರಾಗಿದ್ದಾರೆ.

ನಿಮ್ಮ ಅಭಿಮಾನ, ಪ್ರೀತಿ, ವಿಶ್ವಾಸಕ್ಕೆ ಬೆಲೆ ಕಟ್ಟಲು ಆಗಲ್ಲ. ಮಂಡ್ಯದಲ್ಲಿ ವಿಶೇಷವಾಗಿ ಪ್ರೀತಿ ವಿಶ್ವಾಸ ಕೊಟ್ಟಿದ್ದೀರಿ. ಅದನ್ನು ನಾವು ಭೂಮಿಯಲ್ಲಿ ಇರುವವರೆಗೂ ಮರೆಯಲು ಸಾದ್ಯವಿಲ್ಲ. ನನಗೆ 25 ಲಕ್ಷ ರೂ. ಬೆಲೆ ಇರುವ ವಾಲ್ ಹಾಕಿದ್ದಾರೆ. ನನಗೆ ಮೂರು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ ಎಂದು ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗತೊಡಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿ ಅವರೇ ಸಮಾಧಾನಪಡಿಸಬೇಕಾಯಿತು.
ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಹೆಚ್ಚು ಮಾತನಾಡಲೂಬಾರದು ಎಂದು ವೈದ್ಯರು ನೀಡಿರುವ ಸಲಹೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಅವರು. ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು ಅವರು.
ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ: ನಿಖಿಲ್
ಇದಕ್ಕೂ ಮೊದಲು ಮಂಡ್ಯ ಕಾರ್ಯಕರ್ತರ ಜತೆ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ನಾಳೆ ಸಂಜೆಯೊಳಗೆ ತಂದೆಯವರ ನಿರ್ಧಾರ ಗೊತ್ತಾಗಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.











Click it and Unblock the Notifications