Get Updates
Get notified of breaking news, exclusive insights, and must-see stories!

HD Kumaraswamy: ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ?: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು, ಜುಲೈ 22: ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ? ಇಡೀ ಬೆಂಗಳೂರು ನಗರವನ್ನು ಛಿದ್ರಛಿದ್ರ ಮಾಡಿ ಪೋಗದಸ್ತಾಗಿ ಬುಲ್ಡೋಜ್ ಮಾಡಿ ಕಿಸೆ ತುಂಬಿಸಿಕೊಳ್ಳುವುದಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರುನೈಸ್ ಯೋಜನೆಗೆ ಹೆಚ್‌ ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಡಿ ಕೆ ಶಿವಕುಮಾರ್‌ ಅವರು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? ಎಂದು ಪ್ರಶ್ನಿಸಿದ್ದು, ನೈಸ್ ರಸ್ತೆಯ 'ತಿರುಚಿದ ಒಪ್ಪಂದ'ದ ಬಗ್ಗೆಯೂ ಅವರು ಹೇಳಬೇಕಿತ್ತಲ್ಲವೇ? ಬ್ರ್ಯಾಂಡ್ ಬೆಂಗಳೂರು ಟೀಮಿನ ಮುಖ್ಯಸ್ಥರ ಕರಾಮತ್ತಿನ ಬಗ್ಗೆಯೂ ಬೆಳಕು ಚೆಲ್ಲಬೇಕಲ್ಲವೇ? ಅದು ಬಿಟ್ಟು, ಸತ್ಯ ಮರೆಮಾಚಿ ಬರೀ 'ಸಹಿ'ಯ ಬಗ್ಗೆ ನೀವು ಗೊಣಗಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

Former CM HD Kumaraswamy Fierce Attack Against Congress Government DCM DK Shivakumar

ಸದನ ಸಮಿತಿ ವರದಿಯ ಬಗ್ಗೆಯೂ ಚಕಾರ ಎತ್ತದಿರುವುದು ಯಾಕೋ? ಏನಿದು ಈ ನಿಗೂಢ ಸೋಜಿಗ?? ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉರುಫ್ ನೈಸ್ ರಸ್ತೆ ಯೋಜನೆಗೆ ರಾಜ್ಯ ಸರಕಾರದಿಂದ ನಯಾಪೈಸೆ ಕೊಡುವುದಿಲ್ಲ, ಪೂರ್ಣ ಹೂಡಿಕೆ ಹಣವನ್ನು ಕಂಪನಿಯೇ ಭರಿಸಬೇಕು, ಭೂಸ್ವಾಧೀನವೂ ಸೇರಿ ಸರಕಾರದ ಮೇಲೆ ಯಾವುದೇ ಹೊರೆ ಇರುವಂತಿಲ್ಲ. ಇದು ದೇವೇಗೌಡರ ಕಾಲದಲ್ಲಿ ಆದ ಮೂಲ ಒಪ್ಪಂದದ ಸಾರಾಂಶ. ಹಾಗಾದರೆ, ಈ ಯೋಜನೆ 'ಸಾರ'ವಾಗಿದ್ದು ಯಾರಿಗೆ? ಎಂದು ಕೇಳಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಹರಿಕಾರಾಗಲು ಹೊರಟಿರುವ ನೀವು, 'ತಿರುಚಿದ ಒಪ್ಪಂದ'ದ ಸೂತ್ರಧಾರರನ್ನೇ ಪಕ್ಕದಲ್ಲಿ ಇಟ್ಟುಕೊಂಡಿದ್ದೀರಿ. ತಿರುಚಿದ ಪರಿಣಾಮ ರಾಜ್ಯವು ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾಯಿತು. ಸಾವಿರಾರು ಕೋಟಿ ಲೂಟಿಯಾಯಿತು. ಸರಕಾರ & ಜನರ ಸಾವಿರಾರು ಎಕರೆ ಭೂಮಿ ಭೂಗಳ್ಳರ ಪಾಲಾಯಿತು.

ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ? ಇಡೀ ಬೆಂಗಳೂರು ನಗರವನ್ನು ಛಿದ್ರಛಿದ್ರ ಮಾಡಿ ಪೋಗದಸ್ತಾಗಿ ಬುಲ್ಡೋಜ್ ಮಾಡಿ ಕಿಸೆ ತುಂಬಿಸಿಕೊಳ್ಳುವುದಾ? ಕರ್ನಾಟಕವನ್ನು ಕಡಲೇಪುರಿಯಂತೆ ಮುಕ್ಕಿ ತಿನ್ನುವುದಾ? ಎಂದು ಪ್ರಶ್ನಿಸಿದ್ದಾರೆ.

2014-2 016ರಲ್ಲಿನ ಸದನ ಸಮಿತಿ ವರದಿಯನ್ನು ತಾವು ಓದಿಲ್ಲವೇ? ಅಥವಾ ಅದನ್ನು ಕಸದ ಬುಟ್ಟಿಗೆ ಎಸೆದಿದ್ದೀರಾ? ಕೊಳ್ಳೆ ಹೊಡೆದ ಈಸ್ಟ್ ಇಂಡಿಯಾದಂಥ ಕಂಪನಿ ಜತೆ ಕೈ ಜೋಡಿಸಿದ ನಿಮಗೆ, ದೇವೇಗೌಡರ ಹೆಸರು ಹೇಳುವ ಅರ್ಹತೆ ಇದೆಯಾ? ರಾಜ್ಯದ ಅಭ್ಯುದಯಕ್ಕೆ ಬದುಕನ್ನೇ ಮೀಸಲಿಟ್ಟ ಆ ಹಿರಿಯ ಜೀವದ ಬಗ್ಗೆ ನಾಲಿಗೆ ಜಾರಿ ಬಿಡಲು ನಾಚಿಕೆ ಆಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನೈಸ್ ಕರ್ಮವನ್ನೆಲ್ಲ ಒಮ್ಮೆ ಕಣ್ಮುಚ್ಚಿ ನೆನಪು ಮಾಡಿಕೊಳ್ಳಿ. ಅಲ್ಲಿ ನೀವೆಲ್ಲಿ ನಿಲ್ಲುತ್ತಿರಿ ಎಂದು ಊಹಿಸಿಕೊಳ್ಳಿ, ಮಾಡಿದ ಪಾಪಗಳೆಲ್ಲವೂ ಸ್ಲೈಡುಗಳಂತೆ ಪ್ರತ್ಯಕ್ಷವಾಗುತ್ತವೆ. ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಅಳಿಯದ ಪಾಪವದು.ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ 'ಪೊಲಿಟಿಕಲ್ ಏಜೆಂಟ್' ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ?

ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ 'ಅನೈತಿಕ ಭ್ರಷ್ಟವ್ಯೂಹ' ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು? ಎಂದು ಪ್ರಶ್ನಿಸಿದ್ದಾರೆ.

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು.ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? ಎಂದು ಕೇಳಿದ್ದಾರೆ.

ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ?? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಪ್ರಶ್ನಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+