ಬೆಂಗಳೂರು ಜೆಡಿಎಸ್ ಮುಖಂಡರಿಗೆ ಮಹತ್ವದ ಸಂದೇಶ ರವಾನಿಸಿದ ಎಚ್ಡಿಕೆ
ಬೆಂಗಳೂರು, ನ 16: "ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರ ನಮ್ಮ ಪಕ್ಷಕ್ಕೆ ಬಹಳ ಮುಖ್ಯ. ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು ತಮ್ಮೆಲ್ಲ ಶಕ್ತಿಯನ್ನು ಬಳಸಿ ಪಕ್ಷವನ್ನು ಕಟ್ಟಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾಕೀತು ಮಾಡಿದರು.
ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಪರ್ವ 1.O ದ ಎರಡನೇ ಹಂತದ ಕಾರ್ಯಗಾರ 'ಜನತಾ ಸಂಗಮ'ದ ಏಳನೇ ದಿನ ಬೆಂಗಳೂರು ನಗರದ 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳು, ಪಾಲಿಕೆ ಸದಸ್ಯರು ಹಾಗೂ ಆಯ್ದ ಮುಖಂಡರ ಜತೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು.
"ಪಕ್ಷವನ್ನು ನಾವು ಹಣ ತೆತ್ತು ಕಟ್ಟಲು ಸಾಧ್ಯವಿಲ್ಲ. ನಮ್ಮ ಸ್ವಂತ ಶ್ರಮದ ಮೇಲೆ ಬದ್ಧತೆಯಿಂದ ಕಟ್ಟಬೇಕು. ಯಾರೇ ಆಗಲಿ, ನನ್ನ ಜತೆ ಮುಕ್ತವಾಗಿ ಚರ್ಚೆ ಮಾಡಬಹುದು. ಭೇಟಿಯಾಗಿ ಮಾತುಕತೆ ನಡೆಸಬಹುದು. ಎಲ್ಲರಿಗೂ ಮುಕ್ತ ಸ್ವಾಗತವಿದೆ" ಎಂದು ಮುಖಂಡರಿಗೆ ಕುಮಾರಸ್ವಾಮಿ ಅವರು ಹೇಳಿದರು.
ಬಿಜೆಪಿ ಕಾಂಗ್ರೆಸ್ ನಡುವೆ ಸರಕಾರ ಮಾಡಿದಾಗ ಅನುಭವಿಸಿದ ವೇದನೆಯನ್ನು ಎಳೆ ಎಳೆಯಾಗಿ ಸಭೆಯಲ್ಲಿ ಬಿಡಿಸಿಟ್ಟ ಕುಮಾರಸ್ವಾಮಿ, "2023ರಲ್ಲಿ ಜೆಡಿಎಸ್ ಸ್ವತಂತ್ರ ಸರಕಾರ ನಡೆಸಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲೇಬೇಕು" ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಕಾರ್ಯಕ್ರಮ
"ಈಗಾಗಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದೇನೆ. ಬೆಂಗಳೂರು ನಗರ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಇದುವರೆಗೆ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ ಯೋಜನೆಗಳನ್ನು ನಗರದ ಜನರಿಗೆ ತಿಳಿಸಬೇಕು" ಎಂದು ಕುಮಾರಸ್ವಾಮಿ ಅವರು ಪದಾಧಿಕಾರಿಗಳಿಗೆ ಸೂಚಿಸಿದರು.

ನಗರದ ಒಟ್ಟು 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ ಜತೆ ಸುದೀರ್ಘ ಚರ್ಚೆ
ನಗರದ ಒಟ್ಟು 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಮುಖ್ಯವಾಗಿ ಸಮಸ್ಯೆಗಳ ಬಗ್ಗೆ ಹೆಚ್ಚು ಒತ್ತು ನೀಡಿ ಅವನ್ನು ಸಭೆಯಲ್ಲಿಯೇ ಬಗೆಹರಿಸಿದರು. ಗ್ರಾಮೀಣ ಪ್ರದೇಶಕ್ಕೂ ನಗರ ಪ್ರದೇಶಕ್ಕೂ ಪಕ್ಷ ಕಟ್ಟುವಿಕೆಯಲ್ಲಿ ಪ್ರತ್ಯೇಕ ಸವಾಲುಗಳಿವೆ ಎನ್ನುತ್ತಲೇ, ನಗರದ ವಿವಿಧ ಸ್ತರಗಳಲ್ಲಿ ಪಕ್ಷ ಸಂಘಟಿಸುವ ಪಾಠವನ್ನು ನಾಯಕರಿಗೆ ಮಾಡಿದರು.

ಕಾಲಮಿತಿಯನ್ನು ನಿಗದಿ ಮಾಡಿ ಪದಾಧಿಕಾರಿಗಳಿಗೆ ಕೆಲ ಮಹತ್ವದ ಗುರಿ
ಇದಲ್ಲದೇ, ಕಾಲಮಿತಿಯನ್ನು ನಿಗದಿ ಮಾಡಿ ಪದಾಧಿಕಾರಿಗಳಿಗೆ ಕೆಲ ಮಹತ್ವದ ಗುರಿಗಳನ್ನು ನಿಗದಿ ಮಾಡಿದ ಕುಮಾರಸ್ವಾಮಿ ಅವರು, ಪಕ್ಷದ ಸಂಘಟನೆ ವಿಷಯದಲ್ಲಿ ನೆಪಗಳಿಗೆ ಅವಕಾಶ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪರಸ್ಪರ ಸಹಕಾರದಿಂದ ಸಂಘಟನೆ ಮಾಡಬೇಕು ಎಂದು ಅವರು ಹೇಳಿದರು. ವಿಧಾನ ಪರಿಷತ್ತಿಗೆ ಪಕ್ಷದ ಟಿಕೆಟಿನಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ ಎಂದು ಕುಮಾರಸ್ವಾಮಿ ಪುನರುಚ್ಚಿಸಿದರು.

ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ
"ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಇಡಿಗೆ (ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ" ಎಂದು ಕುಮಾರಸ್ವಾಮಿ ಹೇಳಿದರು. ವೇದಿಕೆಯ ಮೇಲೆ ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು ಪದಾಧಿಕಾರಿಗಳ ಅಭಿಪ್ರಾಯಗಳನ್ನು ಆಲಿಸಿದರು. ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಸರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಮುಂತಾದವರು ಹಾಜರಿದ್ದರು.












Click it and Unblock the Notifications