ನನ್ನ ಮೇಲೆಯೇ ಪೆಗಾಸಸ್ ಗೂಡಚರ್ಯ ಮಾಡಲಾಗಿತ್ತು: ಮಾಜಿ ಮುಖ್ಯಮಂತ್ರಿಯ ಗಂಭೀರ ಆರೋಪ!
ಬೆಂಗಳೂರು, ಜು. 20: ದೇಶದಲ್ಲಿ ಪೆಗಾಸಸ್ ಗೂಢಚರ್ಯದ ಕುರಿತು ರಾಜ್ಯದಲ್ಲಿಯೂ ವಿರೋಧ ತೀವ್ರವಾಗಿ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದ ವಿರುದ್ಧವೂ ಪೆಗಾಸಸ್ ಗೂಢಚರ್ಯದ ಆರೋಪಗಳು ಕೇಳಿ ಬರಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಆರೋಪಗಳು ಮಹತ್ವದ ಪಡೆದುಕೊಂಡಿವೆ.
"ಪೆಗಾಸಸ್ ಗೂಢಾಚರ್ಯೆಯಲ್ಲಿ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂಥ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೊಂದು ಗಂಭೀರ ಆರೋಪವನ್ನು ಕುಮಾರಸ್ವಾಮಿ ಅವರು ಮಾಡಿದ್ದಾರೆ.
"ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ವಿರುದ್ಧವೇ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ" ಎಂದು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿನ ಮೋದಿ ಅವರನ್ನು ಎಚ್ಡಿಕೆ ಟೀಕಿಸಿದ್ದಾರೆ.

"ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣುಕುವುದಿಲ್ಲ ಎಂಬುದಕ್ಕೆ ಖಚಿತತೆ ಇದೆಯೇ? ಅಂತಹ ದಿನವೂ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು" ಎಂದು ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.
ಪೆಗಾಸಸ್ ಕುರಿತು ಸಂಸದೀಯ ಜಂಟಿ ಸದನ ಸಮಿತಿ ರಚನೆ ಮಾಡಿ ತನಿಖೆ ನಡೆಸುವಂತೆ ಕಾಂಗ್ರೆಸ್ ಪಕ್ಷ ಈಗಾಗಲೇ ಆಗ್ರಹಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ಮಹತ್ವ ಬಂದಿದೆ. ಹೀಗಾಗಿ ಕೇಂದ್ರ ಬಿಜೆಪಿ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ ಪ್ರಕರಣ ಸಂಪೂರ್ಣ ತನಿಖೆ ನಡೆಸಿ ಆರೋಪ ಮುಕ್ತವಾಗುತ್ತದೆಯಾ? ಎಂಬ ಚರ್ಚೆಗಳು ತೀವ್ರವಾಗಿದೆ.












Click it and Unblock the Notifications