ಎಚ್ಡಿಕೆ ಆರೋಗ್ಯದಲ್ಲಿ ಕೊಂಚ ಚೇತರಿಕೆ; ಆಸ್ಪತ್ರೆಗೆ ನಿರ್ಮಲಾನಂದ ಸ್ವಾಮೀಜಿ ಭೇಟಿ!
ಬೆಂಗಳೂರು, ಆಗಸ್ಟ್ 31: ತೀವ್ರ ಜ್ವರದಿಂದ ಬಳಲಿದ ಪರಿಣಾಮ ಸಣ್ಣ ಪ್ರಮಾಣದ ಸ್ಟ್ರೋಕ್ಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಗುರುವಾರ ಸಂಜೆ ಅಥವಾ ಶುಕ್ರವಾರ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.
ಇನ್ನೂ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ತೀವ್ರ ಜ್ವರ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈಗಾಗಲೇ ಆಸ್ಪತ್ರೆಯಲ್ಲಿ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ತೀವ್ರ ಜ್ವರದ ಹಿನ್ನೆಲೆ ಕುಮಾರಸ್ವಾಮಿ ಮಂಗಳವಾರ ತಡ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಆ ಸಂದರ್ಭದಲ್ಲಿ ಮಾತಿನಲ್ಲಿ ತೊದಲುವಿಕೆ ಕಂಡು ಬಂದಿತ್ತು. ಕೂಡಲೇ ಅವರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಆರೋಗ್ಯ ಸದ್ಯ ಚೇತರಿಕೆಯನ್ನು ಕಂಡುಕೊಂಡಿದೆ. ಹಾಗಿದ್ದರೂ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.
ಇನ್ನೂ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆಯ ಡಾ.ಸತೀಶ್ ಚಂದ್ರ ಮಾಹಿತಿ ನೀಡಿದ್ದು, ಎಚ್ಡಿಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ. ಎಚ್ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಬಂದಾಗ ಅವರ ಮಾತಿನಲ್ಲಿ ತೊದಲುವಿಕೆ ಇತ್ತು, ಕೈನಲ್ಲಿ ಸ್ವಲ್ಪ ವೀಕ್ನೆಸ್ ಇತ್ತು. ಕೂಡಲೇ ಚಿಕಿತ್ಸೆ ನೀಡಿದ ಪರಿಣಾಮ ಅವರು ಚೇತರಿಸಿಕೊಂಡಿದ್ದಾರೆ.
ಎಲ್ಲರ ಜೊತೆಗೆ ಚೆನ್ನಾಗಿ ಮಾತನಾಡುತ್ತಿದ್ದಾರೆ ಹಾಗೂ ಚೇತರಿಕೆ ಕಂಡುಕೊಂಡಿದ್ದಾರೆ. ರಕ್ತ ಚಲನೆ ಕಡಿಮೆ ಆದ ಕಾರಣ ಈ ರೀತಿಯಾಗುತ್ತದೆ. ಆದರೆ ತುರ್ತು ಚಿಕಿತ್ಸೆ ಕೊಟ್ಟ ಹಿನ್ನೆಲೆಯಲ್ಲಿ ಚೇತರಿಕೆ ಆಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಆದರೂ ಇನ್ನು ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ವೈದ್ಯರು ನಿರ್ಧಾರ ಮಾಡಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.












Click it and Unblock the Notifications