ಹೆಚ್ ಡಿ ಕುಮಾರಸ್ವಾಮಿ ಇಂದು ಬಿಜೆಪಿ ವಕ್ತಾರರಾಗಿದ್ದಾರೆ: ಡಿಕೆ ಶಿವಕುಮಾರ್
ಬೆಂಗಳೂರು, ಮಾರ್ಚ್07: ಕುಮಾರಸ್ವಾಮಿ ಇಂದು ತಮ್ಮ ದಳದ ಬಗ್ಗೆ ಮಾತನಾಡುತ್ತಿಲ್ಲ. ಬಿಜೆಪಿ ವಕ್ತಾರರಾಗಿದ್ದಾರೆ. ಬರೀ ಬಿಜೆಪಿಯ ಸುದ್ದಿ ಮಾತನಾಡುತ್ತಿದ್ದಾರೆ. ಅಂದರೆ ಅವರ ಸ್ಥಿತಿ ಈಗ ಏನಾಗಿರಬೇಕು? ಪಕ್ಷದಲ್ಲಿರುವ ಶಾಸಕರು ಏನಾಗಬಹುದು ಎಂಬ ಚಿಂತೆಯಲ್ಲಿ ಬಿಜೆಪಿ ತಬ್ಬಿಕೊಂಡಿದ್ದಾರೆ. ಅವರ ಮೈತ್ರಿ ಬಗ್ಗೆ ಈಗ ನಾನೇನು ಹೇಳುವುದಿಲ್ಲ. ಚುನಾವಣೆ ಮುಗಿಯಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಬಿಜೆಪಿಗೆ ಸುಳ್ಳೇ ಮನೆದೇವರು. ಯಾವುದೇ ದೊಡ್ಡ ಕಾರ್ಯಕ್ರಮವನ್ನು ತರುವಲ್ಲಿ ಅವರಿಂದ ಸಾಧ್ಯವಿಲ್ಲ. ಬಿಡಿಗಾಸು ಸಹ ಅವರಿಂದ ರಾಜ್ಯಕ್ಕೆ ದೊರೆಯುತ್ತಿಲ್ಲ. ಜನರ ಮನದಲ್ಲಿ ಉಳಿಯುವ ಕಾರ್ಯಕ್ರಮವನ್ನು ಬಿಜೆಪಿ ನೀಡಿದ್ದೆ ಆದಲ್ಲಿ ನಾನು ಅವರಿಗೆ ಶರಣಾಗಲು ಸಿದ್ಧ ಎಂದರು.

ಅಥಣಿ ತಾಲೂಕಿನ ಪಾಲಿಗೆ ಇದೊಂದು ಐತಿಹಾಸಿಕ ಮತ್ತು ಪವಿತ್ರವಾದ ದಿನ. ನಾನು ಆಗಾಗ ಒಂದು ಮಾತು ಹೇಳುತ್ತಿರುತ್ತೇನೆ. ನಾನು ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡ ಸಂದರ್ಭದಲ್ಲಿ ನಮ್ಮ ನೀರು ನಮ್ಮ ಹಕ್ಕು ಮಾಡುತ್ತಿದ್ದೇವೆ ಎಂದರೆ ಬುದ್ಧ- ಬಸವ ಮನೆ ಬಿಟ್ಟ ಘಳಿಗೆಯಲ್ಲಿ, ಪೈಗಂಬರ್ ದಿವ್ಯ ವಾಣಿ ಕೇಳಿದ ಘಳಿಗೆಯಲ್ಲಿ, ಮಹಾತ್ಮ ಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಘಳಿಗೆಯಲ್ಲಿ, ಸೋನಿಯಾ ಗಾಂಧಿ ಈ ದೇಶಕ್ಕೋಸ್ಕರ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದ ಘಳಿಗೆಯಲ್ಲಿ ಮತ್ತು ಮನಮೋಹನ್ ಸಿಂಗ್ ಆರ್ಥಿಕ ತಜ್ಞ ಈ ರಾಷ್ಟ್ರವನ್ನು ಮುನ್ನಡೆಸಿದ ಘಳಿಗೆಯಲ್ಲಿ ಈ ಕಾರ್ಯಕ್ರಮ ಮಾಡಿದ್ದೇವೆ ಅಂತ ಹೇಳಿದ್ದೆ.
ಬಸವಣ್ಣನ ನಾಡು, 120 ಮಠಗಳಿರುವ ಈ ಪುಣ್ಯಭೂಮಿಯಲ್ಲಿ ಈ ಕಾರ್ಯಕ್ರಮ ನಡೆಸಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲ ಸೇರಿ ಅವರಿಗೆ ಚಿರಋಣಿಯಾಗಿದ್ದೇವೆ. ನೀವೆಲ್ಲ ಸೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಟ್ಟು ಇಡೀ ರಾಜ್ಯದಲ್ಲಿ 136 ಶಾಸಕರನ್ನು ಆಯ್ಕೆ ಮಾಡುವ ಮೂಲಕ ನುಡಿದಂತೆ ನಡೆಯಲು ಶಕ್ತಿ ಕೊಟ್ಟಿದ್ದಕ್ಕೆ ನಿಮಗೆ ಸಾಷ್ಟಾಂಗ ನಮಸ್ಕಾರ ಅರ್ಪಿಸುತ್ತಿದ್ದೇನೆ.
ಈ ಎಲ್ಲಾ ತಾಯಂದಿರನ್ನು ನೋಡಬೇಕು. ಶಕ್ತಿ ಯೋಜನೆಯಿಂದ ಎಲ್ಲರೂ ಪ್ರಯಾಣ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಅಕ್ಕಂದಿರ ಖಾತೆಗೆ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ. ಅವರ ಭಾವನೆ, ನಗುಮುಖ ಹೇಗಿದೆ? ಅವರನ್ನು ನೋಡಲು ನಾವೆಲ್ಲ ಇಲ್ಲಿಗೆ ಬಂದಿದ್ದೇವೆ. ಅಮ್ಮಾಜೇಶ್ವರಿ ನೀರಾವರಿ ಯೋಜನೆ ಶಂಕುಸ್ಥಾಪನೆ ಮಾಡಿದ್ದೇವೆ. ಇದೊಂದು ಬಹಳ ದೊಡ್ಡ ಯೋಜನೆ. ಈ ಯೋಜನೆ ಮೂಲಕ ಈ ಭಾಗದ ಜನರ ಬದುಕು ಹಸನಾಗಲಿದೆ ಎಂದು ಹೇಳಿದರು.

ಜನರಿಗೆ ಅನ್ನಭಾಗ್ಯ, ಗೃಹ ಲಕ್ಷ್ಮಿ ಮುಂತಾದ ಯೋಜನೆಗಳ ಬಗ್ಗೆ ತಿಳಿಸಿ ಹೇಳಬೇಕು. ಈ ಯೋಜನೆಯಿಂದ ಐದು ವರ್ಷಕ್ಕೆ ನಾಲ್ಕು ಲಕ್ಷ ರೂಪಾಯಿ ನಾಗರಿಕರಿಗೆ ಸಿಗುತ್ತದೆ. ಇದಕ್ಕಿಂತ ದೊಡ್ಡದು ಏನು ಮಾಡಬೇಕು. ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ ಅವರು ಬಹಳ ಅಭಿನಂದನೆಯ ಕೆಲಸ ಮಾಡಿದ್ದಾರೆ. ಅಮ್ಮಾಜೇಶ್ವರಿ ನೀರಾವರಿ ಯೋಜನೆಯನ್ನು ಎರಡು ವರ್ಷದಲ್ಲಿ ಮುಗಿಸುವ ಸಮಯ ಕೊಡುತ್ತೇನೆ. ನಂತರ ನಾವೇ ಬಂದು ಇದರ ಚಾಲನೆ ನೀಡಬೇಕು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಳಸ ಬಂಡೂರಿ ಯೋಜನೆ ಬಗ್ಗೆ ದೊಡ್ಡ ಹಬ್ಬ ಮಾಡಿದರು. ಆದರೆ ಅವರದ್ದೇ ಕೇಂದ್ರ ಸರ್ಕಾರದಿಂದ ಅನುಮತಿ ಪತ್ರ ಕೊಡಲು ಅವರಿಂದ ಸಾಧ್ಯವಾಗುತ್ತಿಲ್ಲ. 27 ಎಂಪಿಗಳು, ಬಲಿಷ್ಠ ಸರ್ಕಾರ ಇದ್ದರೂ ಇನ್ನೂ ಯೋಜನೆ ಪ್ರಾರಂಭ ಮಾಡಿಲ್ಲ. ಯಾವುದೇ ದೊಡ್ಡ ಯೋಜನೆಯನ್ನು ಜಾರಿಗೆ ತಂದಿಲ್ಲ. ಬಿಡಿಗಾಸು ಕೊಡಲು ಬಿಜೆಪಿಯವರಿಂದ ಸಾಧ್ಯವಿಲ್ಲ. ಮತ ಕೇಳಲು ಅವರಿಗೆ ಯಾವ ಹಕ್ಕು ಇಲ್ಲ. ಕಾಂಗ್ರೆಸ್ ಪಕ್ಷ ಜನರ ಕಷ್ಟ ಕಾರ್ಪಣ್ಯದಲ್ಲಿ ಸಹಭಾಗಿಯಾಗಿ ಜನಪರ ಕಾರ್ಯಕ್ರಮ ನಡೆಸುವ ಮೂಲಕ ಜನರ ಮನದಲ್ಲಿದೆ.
ಸವದಿಯವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಆದರೆ ಸಂಸತ್ತಿಗೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಸಂಸದರನ್ನು ನೀವು ಕೊಡಬೇಕು. ಅಲ್ಲಿಯವರೆಗೆ ನಾನು ಏನು ಹೇಳುವುದಿಲ್ಲ ಎಂದು ತಿಳಿಸಿದರು. ಲಕ್ಷ್ಮಣ ಸವದಿ ಅವರು ಅಥಣಿ ತಾಲೂಕಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಿದ್ದಾರೆ. ಇದನ್ನು ನೋಡಿ ನಾನು ನನ್ನ ಸಹೋದರ ಡಿ.ಕೆ. ಸುರೇಶ್ ಅವರ ಕಡೆ ಹೇಳಿದೆ. ಕೊನೆಗೆ ಅಧಿಕಾರಿಗಳನ್ನು ಕರೆಸಿ ಈ ಬಗ್ಗೆ ಮಾತನಾಡಿ ಚರ್ಚಿಸಿದ್ದೆ. ಇದೀಗ ಕೃಷಿ ವಿಶ್ವವಿದ್ಯಾಲಯವನ್ನು ಸವದಿ ಅವರು ಕೇಳುತ್ತಿದ್ದಾರೆ. ಬೆಂಗಳೂರಿನ ಖಜಾನೆಯನ್ನು ನಮಗೆ ಕೊಡಿ ಎಂದು ಕೇಳಿಲ್ಲ. ಹೀಗೆ ಕೇಳುವುದು ನಿಮ್ಮ ತಪ್ಪಲ್ಲ. ನಿಮ್ಮ ಋಣ ತೀರಿಸಬೇಕು ಅಲ್ಲವೇ ಎಂದರು.












Click it and Unblock the Notifications