ಸುರೇಶ್ ಅಂಗಡಿ ನಿಧನ: ಎಚ್.ಡಿ.ಕುಮಾರಸ್ವಾಮಿ ದಿಗ್ಬ್ರಮೆ
ಬೆಂಗಳೂರು, ಸೆ 23: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಮತ್ತು ಬೆಳಗಾವಿ ಸಂಸದರೂ ಆಗಿರುವ ಸುರೇಶ್ ಅಂಗಡಿ ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂಗಡಿ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಸೆ 23) ರಾತ್ರಿ ನಿಧನರಾಗಿದ್ದಾರೆ.
ಈ ಬಗ್ಗೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಸುರೇಶ್ ಅಂಗಡಿಯವರ ನಿಧನಕ್ಕೆ ದಿಗ್ಬ್ರಮೆ ವ್ಯಕ್ತ ಪಡಿಸಿದ್ದಾರೆ. "ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
"ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು".

"ದುರಾದೃಷ್ಟ ಕೊರೊನಾ ಸೋಂಕಿನಿಂದ ನಮ್ಮನ್ನಗಲಿರುವುದು. ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ. ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ವಿಷಾದ ವ್ಯಕ್ತ ಪಡಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೊರೊನಾ ಟೆಸ್ಟ್ ಕಡ್ಡಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿಯವರು ಸೆಪ್ಟೆಂಬರ್ 11ರಂದು ಟೆಸ್ಟ್ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಕೊರೊನಾ ದೃಢಪಟ್ಟಿದ್ದರಿಂದ, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ದಾಖಲಾಗಿದ್ದರು.
2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಸುರೇಶ್ ಅಂಗಡಿಯವರು ಸಚಿವರಾದ ನಂತರ, ರಾಜ್ಯಕ್ಕೆ ರೈಲ್ವೇ ವಿಭಾಗದಲ್ಲಿ ಹಲವು ಕೊಡುಗೆಗಳನ್ನು ನೀಡಿದ್ದರು.












Click it and Unblock the Notifications