ಪ್ರಧಾನಿ ಮೋದಿಯವರ ಪ್ರಾಮಾಣಿಕತೆಯ ಬಗ್ಗೆ ಸಂಶಯ ವ್ಯಕ್ತ ಪಡಿಸಿದ ಕುಮಾರಸ್ವಾಮಿ
ಬೆಂಗಳೂರು, ಮಾರ್ಚ್ 22: ರೈತರು ಎದುರಿಸುತ್ತಿರುವ ಸಮಸ್ಯೆ ಮತ್ತು ಬೆಲೆ ಏರಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು ಮೋದಿ ಸಭೆಯಲ್ಲಿ ಆಡುವ ಮಾತು ಪ್ರಾಮಾಣಿಕವೇ ಎಂದು ಪ್ರಶ್ನಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ:
"2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್ವೆಲ್ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ?" ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ.

"ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್ವೆಲ್ ಕೊರೆಸಬೇಕಿದ್ದರೆ ₹1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್ಗಳ ದರ ದುಪ್ಪಟ್ಟಾಗಿದೆ, ಮೋಟರ್ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್ ಸೆಟ್ಗಳಿಗೆ ರೈತರಾದವರೇ ಶೇ. 18ರಷ್ಟು ಜಿಎಸ್ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
"ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, 'ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,'ಎಂದಿದ್ದಾರೆ ಅವರು. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ"ಇದು ಕುಮಾರಸ್ವಾಮಿ ಮಾಡಿರುವ ಟ್ವೀಟ್.
"ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ @narendramodi ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ?" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.












Click it and Unblock the Notifications