Lok Sabha Election 2024: ದಳಪತಿಗಳಿಗೆ ಪ್ರತಿಷ್ಠೆಯಾದ ಮಂಡ್ಯ ಕ್ಷೇತ್ರ: ಸ್ಪರ್ಧೆ ಕುರಿತು ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು, ಮಾರ್ಚ್ 19: ಒಂದು ವಾರದಲ್ಲಿ ನಾನು ವಾಪಸ್ ಬರುತ್ತೇನೆ. ನಮ್ಮ ಮೂರು ಕ್ಷೇತ್ರಗಳಲ್ಲಿ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ಮಾಡುವಂತೆ ಕೋರಿದ್ದೇನೆ. ಯಾರೂ ಸಮಯ ವ್ಯರ್ಥ ಮಾಡಬಾರದು. ಆಸ್ಪತ್ರೆಯಿಂದ ಬಂದ ಕೂಡಲೇ ನಾನು ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ತಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನ ಪ್ರಕಾರ ಮಂಡ್ಯ ಸೇರಿ ನಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರೇ ಅಭ್ಯರ್ಥಿಗಳು. ಪಕ್ಷವನ್ನು, ಕಾರ್ಯಕರ್ತರನ್ನು ಗೆಲ್ಲಿಸವುದಕಾಗಿ ಎಲ್ಲರೂ ಒಮ್ಮತವಾಗಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನಾನು ಆಸ್ಪತ್ರೆಗೆ ದಾಖಲಾಗುವ ಮುನ್ನ ಇಷ್ಟು ವಿಷಯಗಳನ್ನು ಕಾರ್ಯಕರ್ತರಿಗೆ ಹೇಳಬೇಕಿತ್ತು. ಅದನ್ನು ನಿಮ್ಮ (ಮಾಧ್ಯಮಗಳು) ಮೂಲಕ ಅವರಿಗೆ ಹೇಳುತ್ತಿದ್ದೇನೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೋಲಾರ ಕ್ಷೇತ್ರದ ಬಗ್ಗೆ ಗೊಂದಲ ನಿವಾರಣೆ ಆಗಿದೆ. ಆಸ್ಪತ್ರೆಯಿಂದ ಬಂದ ಕೂಡಲೇ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತೇವೆ ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ. ಇಂದಿನಿಂದಲೇ ಎಲ್ಲರೂ ಚುನಾವಣೆ ಕೆಲಸ ಶುರು ಮಾಡಬೇಕು ಎಂದು ಮಂಡ್ಯ ಕಾರ್ಯಕರ್ತರಿಗೆ ಕರೆ ನೀಡಿದರು. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾವಣೆ ಕೆಲಸ ಮಾಡಿಕೊಂಡು ಹೋಗುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ ಎಂದು ತಿಳಿಸಿದರು.
ಜೆಡಿಎಸ್-ಬಿಜೆಪಿ ಮೈತ್ರಿಗೆ ನೀವೇ ಕಾರಣ
ಮಿಸ್ಟರ್ ಡಿ.ಕೆ.ಶಿವಕುಮಾರ್, ಇವತ್ತು ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ. ಹಿಂದೆ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ ಕೊರೆದಿರಿ. ಅಧಿಕಾರವನ್ನೂ, ಆ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷವನ್ನೇ ರಾಮನಗರದಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಿರಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಆಗ ಮಂಡ್ಯದಲ್ಲಿ ದೋಖಾ ಮಾಡಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲುವಂತೆ ಮಾಡಿದಿರಿ. ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಮ್ಮ ಕಾರ್ಯಕರ್ತರು ಇದನ್ನೇ ಮಾಡಿದ್ದಿದ್ದರೆ ಆತನೂ ಮನೆಯಲ್ಲಿ ಕೂರಬೇಕಿತ್ತು. ಮೈತ್ರಿಗೆ ನಾವು ಮೋಸ ಮಾಡಲಿಲ್ಲ. ಬಿಜೆಪಿ ಜತೆ 20 ತಿಂಗಳು ಸರಕಾರ ಮಾಡಿದ್ದರಿಂದ ನಾನು ಪಕ್ಷವನ್ನು ಉಳಿಸಿಕೊಂಡಿದ್ದೇನೆ. ಆದರೆ ನಿಮ್ಮ ಜತೆ 14 ತಿಂಗಳ ಮೈತ್ರಿಯಲ್ಲಿ ನಾವು ಸಾಕಷ್ಟು ಕಳೆದುಕೊಂಡಿದ್ದೇನೆ.
ರಾಜಕೀಯವಾಗಿ ನೀವು ವಿಷ ಹಾಕಿ ನಮ್ಮನ್ನು ಕೊಂದಿದ್ದೀರಾ. ಹಂತ ಹಂತವಾಗಿ ನಮ್ಮನ್ನು ಕುಗ್ಗಿಸಿದ್ದೀರಾ. 14 ತಿಂಗಳು ನಿಮ್ಮ ಜತೆ ಸರಕಾರ ಮಾಡಿದ್ದು ನಾನು ತೆಗೆದುಕೊಂಡ ಅತ್ಯಂತ ಕೆಟ್ಟ ನಿರ್ಧಾರ. ದೇವೇಗೌಡರ 60 ವರ್ಷಗಳ ಸುಧೀರ್ಘ ರಾಜಕಾರಣಕ್ಕೆ ಕೊಳ್ಳಿ ಇಟ್ಟಿದ್ದೀರಾ. ನನ್ನ ಜತೆ ಇದ್ದವರನ್ನು ಖರೀದಿ ಮಾಡುತ್ತಿದ್ದೀರಾ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.












Click it and Unblock the Notifications