ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು, ಏಪ್ರಿಲ್ 24: ಈಚೆಗೆ ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆ ಸೇರಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರು ಶನಿವಾರ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು" ಎಂದಿದ್ದಾರೆ.

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಕೇಳಿಕೊಂಡಿದ್ದಾರೆ.
ಇದೇ ಏಪ್ರಿಲ್ 17ರಂದು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ತಮಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಟ್ವೀಟ್ ಮಾಡಿದ್ದರು. ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಲ್ಲಿ ದಣಿವು ಕಾಣಿಸಿಕೊಂಡಿದ್ದು, ಬೆಂಗಳೂರಿಗೆ ಮರಳಿದ ನಂತರ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದಾಗ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಢಪಟ್ಟಿತ್ತು. ನಂತರ ಅವರು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು.












Click it and Unblock the Notifications