ಅಕ್ಕಿಭಾಗ್ಯ ಯೋಜನೆಯ 'ರಹಸ್ಯ'ವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಕುಮಾರಸ್ವಾಮಿ
ಬೆಂಗಳೂರು, ಸೆ 16: "ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಬೇಡ, ಈ ವರ್ಷವನ್ನು 'ಕೋವಿಡ್ ವರ್ಷʼ ಎಂದು ಘೋಷಿಸಿ, 55 ಲಕ್ಷ ಬಡ ಕುಟುಂಬಗಳಿಗೆ ನೆರವಾಗಿ. ಪ್ರತಿ ಕುಟುಂಬಕ್ಕೆ 25,000 ರೂಪಾಯಿ ಧನ ಸಹಾಯ ಮಾಡಿ" ಎಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.
"ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ. ಅಲ್ಲದೇ, ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್ ನಿಂದ ತತ್ತರಿಸಿರುವ ಜನರ ಬದುಕು ಕಟ್ಟಲು ಒಂದು ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ" ಕುಮಾರಸ್ವಾಮಿ ಸದನದಲ್ಲಿ ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿಂದು ನಿಯಮ-69ರ ಅಡಿಯಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿಯವರು ತಮ್ಮ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿನ ಅಕ್ಕಿಭಾಗ್ಯದ ಅಸಲಿ ಕಥೆಯನ್ನು ಸದನದ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
"ನನ್ನ ಸರಕಾರ ಬಂದಾಗ ಜನರಿಗೆ ಐದು ಕೆಜಿ ಅಕ್ಕಿಯನ್ನು ನೀಡಲಾಯಿತು. ಇದ್ದಕ್ಕಿದ್ದಂತೆ ಕಾಂಗ್ರೆಸ್ ನಾಯಕರು ದೊಡ್ಡ ಹುಯಿಲೆಬ್ಬಿಸಿದರು. ಐದು ಕೆಜಿ ಬದಲು ಏಳು ಕೆಜಿಯನ್ನೇ ಕೊಡಬೇಕು ಎಂದು ಹಠಕ್ಕೆ ಬಿದ್ದರು. ಆದರೆ, ಹಣಕಾಸು ಲಭ್ಯತೆ ನೋಡಿದರೆ ಕೇವಲ ಐದು ಕೆಜಿ ಅಕ್ಕಿಗೆ ಮಾತ್ರ ಹಣ ತೆಗೆದಿರಿಸಲಾಗಿತ್ತು" ಎಂದು ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿ ಐದು ಕೆಜಿ ಅಕ್ಕಿಗಷ್ಟೇ ಹಣ ಮೀಸಲಿಟ್ಟಿದ್ದರು
"ಉಳಿದ ಎರಡು ಕೆಜಿ ಅಕ್ಕಿಗೆ ಹಣ ತರುವುದು ಎಲ್ಲಿಂದ? ಚುನಾವಣೆಗೆ ಹೋಗುವ ಮುನ್ನ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ಬಜೆಟ್ ಮಂಡಿಸಿ ಐದು ಕೆಜಿ ಅಕ್ಕಿಗಷ್ಟೇ ಹಣ ಮೀಸಲಿಟ್ಟು ಹೋಗಿದ್ದರು. ಸಮ್ಮಿಶ್ರ ಸರಕಾರ ಬಂದಾಗ ಇದೇ ಜನ ಏಳು ಕೆಜಿ ಅಕ್ಕಿ ಕೊಡಬೇಕು ಎಂದು ಬೊಬ್ಬೆ ಹೊಡೆದರು. ಕೇವಲ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶದಿಂದ ಮಾಡಿದ ಕೆಲಸಕ್ಕೆ ಜನ ನಮ್ಮನ್ನು ಟೀಕೆ ಮಾಡುವಂತಾಯಿತು" ಎಂದು ಎಚ್ಡಿಕೆ ಬೇಸರ ವ್ಯಕ್ತ ಪಡಿಸಿದರು.

ಈ ಸತ್ಯ ರಾಜ್ಯದ ಜನರಿಗೆ ಗೊತ್ತಾಗಲಿ, ಈ ವಿಷಯ ನಮಗೂ ಗೊತ್ತಿರಲಿಲ್ಲ - ಆರ್ ಅಶೋಕ್
"ಆಗ ನನಗೆ ಎಂಥ ಸಂದಿಗ್ಧತೆ ಎಂದರೆ, ಏಳು ಕೆಜಿ ಅಕ್ಕಿ ಕೊಡಲೇಬೇಕು, ಕೊಡೋಕೆ ದುಡ್ಡಿಲ್ಲ. ನಾವು ಘೋಷಣೆ ಮಾಡಿದ್ದೇವೆ, ನಿಲ್ಲಿಸುವಹಾಗಿಲ್ಲ ಎನ್ನುವ ಒತ್ತಡ ತಂತ್ರ ಬೇರೆ. ರಾಜ್ಯದ ಜನರಿಗೆ ಈ ಸತ್ಯಸಂಗತಿ ಗೊತ್ತಿಲ್ಲ. ಈಗ ಹೇಳುತ್ತಿದ್ದೇನೆ" ಎಂದು ಅವರು ಅಕ್ಕಿಭಾಗ್ಯದ ಅಸಲಿಯೆತ್ತನ್ನು ಬಯಲು ಮಾಡಿದರು. ಇದಕ್ಕೆ ಸ್ಪಂದಿಸಿದ ಕಂದಾಯ ಸಚಿವ ಆರ್.ಅಶೋಕ್, "ಈ ಸತ್ಯ ರಾಜ್ಯದ ಜನರಿಗೆ ಗೊತ್ತಾಗಲಿ. ಇದುವರೆಗೂ ಈ ವಿಷಯ ನಮಗೂ ಗೊತ್ತಿರಲಿಲ್ಲ" ಎಂದು ಹೇಳಿದರು.

ಸದನದಲ್ಲಿ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ
"ನೆರೆ, ಕೋವಿಡ್ ನಿಂದ ಸಾಮಾನ್ಯ ಜನ ತತ್ತರಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರಂತರ ಬೆಲೆ ಏರಿಕೆಯಿಂದ ರೈತರು, ಬಡವರು ಮತ್ತು ಶ್ರಮಿಕರ ಮನೆಗಳಲ್ಲಿ ಬೆಂಕಿ ಬಿದ್ದಿದೆ. ಆ ಬೆಂಕಿ ಬಿದ್ದಿರುವ ಮನೆಗಳಲ್ಲಿ ಎಷ್ಟು ಗಳ ಹಿರಿಯಬಹುದು ಎಂಬ ಉದ್ದೇಶದಿಂದ ಇಷ್ಟು ತೆರಿಗೆ ಹಾಕಿದಂತಿದೆ. ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ" ಎಂದು ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.
Recommended Video

ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ
"ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಳ್ಳಬೇಕು. ಸರಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ?" ಎಂದು ಸದನದಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದರು.












Click it and Unblock the Notifications