ಸಿದ್ದರಾಮಯ್ಯಗೆ 2 ಸಲ ನನ್ನಿಂದ ರಾಜಕೀಯ ಮರುಜನ್ಮ; ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ
ನಿರೀಕ್ಷಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕೋಲಾರ ಜಿಲ್ಲಾ ಪ್ರವಾಸ ಮತ್ತು ಅವರು ಪ್ರಮಾಣಪತ್ರ ಸಲ್ಲಿಸಲು ಮತ್ತೆ ಬರುವುದಾಗಿ ಹೇಳಿರುವುದು ಜೆಡಿಎಸ್ ವಲಯದಲ್ಲೂ ಚರ್ಚೆಯ ವಿಷಯವಾಗಿದೆ. ಕಾರಣ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಆ ಭಾಗದಿಂದ ಹೆಚ್ಚಿನ ಸೀಟನ್ನು ನಿರೀಕ್ಷಿಸುತ್ತಿದೆ.
ಸಿದ್ದರಾಮಯ್ಯನವರು ಅಲ್ಲಿಂದ ಸ್ಪರ್ಧಿಸುವ ವಿಚಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾರದಿಂದ ಸ್ಪರ್ಧಿಸಿದರೆ ನಮಗೇನೂ ಭಯವಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಶ್ರೀನಿವಾಸ ಗೌಡ್ರೇ, ಸಿದ್ದರಾಮಯ್ಯನವರಿಗೆ ತೊಂದರೆಯಾಗುವ ಸಾಧ್ಯತೆಯಿದೆ, ನಾನು ಎರಡು ಬಾರಿ ರಾಜಕೀಯ ಜೀವದಾನ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರ ಕೋಲಾರ ರಾಜಕೀಯ ರಂಗ ಪ್ರವೇಶದ ಬಗ್ಗೆ ಕುಮಾರಸ್ವಾಮಿ ನೀಡಿದ ಪತ್ರಿಕಾ ಹೇಳಿಕೆ ಹೀಗಿದೆ. "ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, "ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡುವುದಿಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ ಇಲ್ಲ ಎಂಬ ಕ್ಷುಲ್ಲಕ ಮಾತುಗಳು ನಮಗೆ ಅವಶ್ಯಕತೆ ಇಲ್ಲ" ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಚಿತ ವಿಶ್ವಾಸದ ಮಾತು
"ಸಿದ್ದರಾಮಯ್ಯ ಹೋದರು ಎಂದು ಕೋಲಾರದಲ್ಲಿ ನಮ್ಮ ಯಾವುದೇ ಕಾರ್ಯತಂತ್ರ ಬದಲಾಗುವುದಿಲ್ಲ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ. ಸಿದ್ದರಾಮಯ್ಯ ಅಷ್ಟೆ ಅಲ್ಲ, ಯಾರೇ ನಿಂತರೂ ನಮ್ಮ ಪಕ್ಷಕ್ಕೆ ಆತಂಕ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಚಿತ ವಿಶ್ವಾಸದ ಮಾತನ್ನಾಡಿದ್ದಾರೆ. ಕೋಲಾರ, ಹುಣಸೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆಯ ಬಗ್ಗೆ ಸಿದ್ದರಾಮಯ್ಯನವರ ಹೆಸರು ಕೇಳಿ ಬರುತ್ತಿತ್ತು.

ಹಾಲಿ ಶಾಸಕ ಶ್ರೀನಿವಾಸ್ ಗೌಡರು ಸಿದ್ದರಾಮಯ್ಯನವರಿಗೆ ಮುಳುವು
"ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಸಮಸ್ಯೆ ಎಂದರೆ ನಮ್ಮ ಪಕ್ಷಕ್ಕೆ ಕೈಕೊಟ್ಟು ಹೋದ ಹಾಲಿ ಶಾಸಕ ಶ್ರೀನಿವಾಸ್ ಗೌಡರು. ಅವರು ನಮಗೆ ಮಾಡಿದ ದ್ರೋಹವೇ ಈ ಬಾರಿ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ. ಸಿದ್ದರಾಮಯ್ಯ ಅವರಿಗೆ ನಕಾರಾತ್ಮಕ ಅಂಶಗಳು ಇರುವುದೇ ಅಲ್ಲಿ. ಹೀಗಾಗಿ ನಮ್ಮ ಪಕ್ಷಕ್ಕೆ ಆತಂಕ ಏನೂ ಇಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮೂರು ದಿನ ಬಾದಾಮಿಗೆ ಹೋಗದೆ ಇದ್ದಿದ್ದರೆ 10ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು
"ಬಹುತೇಕ ಎಲ್ಲ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯುತ್ತಿದೆ. ಸಿದ್ದರಾಮಯ್ಯ ಕೂಡ ಅದೇ ಲೆಕ್ಕದಲ್ಲಿ ಕೋಲಾರಕ್ಕೆ ಹೋಗಿರಬಹುದು. ಚಾಮುಂಡೇಶ್ವರಿ, ಬಾದಾಮಿಯಲ್ಲೂ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಕೊನೆ ಸಮಯದಲ್ಲಿ ನಾನು ಮೂರು ದಿನ ಬಾದಾಮಿಗೆ ಹೋಗದೆ ಇದ್ದಿದ್ದರೆ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸಿದ್ದರಾಮಯ್ಯ ಅವರು ಸೋಲುತ್ತಿದ್ದರು" ಎಂದು ಕುಮಾರಸ್ವಾಮಿ ಹೇಳಲು ಮರೆಯಲಿಲ್ಲ.

ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ನನ್ನಿಂದ ರಾಜಕೀಯ ಮರುಜನ್ಮ
"ಗುಳೇದಗುಡ್ಡ ಸೇರಿದಂತೆ ಹಲವೆಡೆ ನಾನು ಅಂತಿಮ ಕ್ಷಣದಲ್ಲಿ ಪ್ರಚಾರ ಮಾಡಿದ್ದೆ, ಜನರಿಂದ ಹೆಚ್ಚು ಪ್ರತಿಕ್ರಿಯೆ ವ್ಯಕ್ತವಾಯಿತು. ನಮ್ಮ ಅಭ್ಯರ್ಥಿಗೆ 28 ಸಾವಿರ ಮತ ಪಡೆದರು. ಆಗ ಸಿದ್ದರಾಮಯ್ಯ ಚಿಕ್ಕ ಅಂತರದಲ್ಲಿ ಗೆದ್ದರು. ಇಲ್ಲವಾಗಿದ್ದರೆ ಹತ್ತು ಸಾವಿರ ಮತಗಳ ಅಂತರದಿಂದ ಸೋಲುತ್ತಿದ್ದರು. ಹಾಗೆ ನೋಡಿದರೆ ಅವರ ಗೆಲುವಿಗೆ ನಾನೇ ಕಾರಣ. ಇದರಲ್ಲಿ ಯಾವುದೇ ಸಂಶಯ ಇಲ್ಲ. ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ನನ್ನಿಂದ ರಾಜಕೀಯ ಮರುಜನ್ಮ ಸಿಕ್ಕಿದೆ" ಎಂದು ಮಾಜಿ ಮುಖ್ಯಮಂತ್ರಿಗಳು ಹೇಳುವ ಮೂಲಕ ಸಿದ್ದರಾಮಯ್ಯನವರಿಗೆ ಚಾಟಿಯನ್ನು ಬೀಸಿದ್ದಾರೆ.












Click it and Unblock the Notifications