ರಾಜಕಾರಣಿಗಳೂ ಡ್ರಗ್ ಮಾಫಿಯಾದಲ್ಲಿದ್ದಾರೆ: ಸಂಚಲನ ಸೃಷ್ಟಿಸಿದ HDK
ಬೆಂಗಳೂರು, ಸೆ. 11: ಡ್ರಗ್ ಮಾಫಿಯಾದಲ್ಲಿ ರಾಜಕಾರಣಿಗಳೂ ಇದ್ದಾರೆ ಎಂದು ಹೇಳಿಕೆ ಕೊಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆಯನ್ನು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಯ ಬೆನ್ನಲ್ಲೆ ಎಚ್ಡಿಕೆ ಅವರ ಈ ಹೇಳಿಕೆ ಸಂಚಲನ ಮೂಡಿಸಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಸಿಎಂ ಜೊತೆಗಿನ ಭೇಟಿ ಬಳಿಕ ಮಾತನಾಡಿದ್ದ ಕುಮಾರಸ್ವಾಮಿ ಅವರು, ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದೆ. ಹೀಗಾಗಿ ಹೆಚ್ಚು ಅನುದಾನ ಬಿಡುಗಡೆಗೆ ಮನವಿ ಮಾಡಲು ಬಂದಿದ್ದೆ ಎಂದಿದ್ದರು. ಅದಾದ ಬಳಿಕ ಬೆಂಗಳೂರಿನ ರಾಜ್ಯ ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತು, ಅಲ್ಲಿನ ಜೆಡಿಎಸ್ ಮುಖಂಡರೊಂದಿಗೆ ಸಭೆ ನಡೆಸಿದರು. ಸಭೆಯ ಕುರಿತು ಮಾಧ್ಯಮಗಳಿಗೆ ಹೇಳಿಕೆ ಕೊಡುವಾಗ ಡ್ರಗ್ಸ್ ದಂಧೆಯಲ್ಲಿ ರಾಜಕಾರಣಿಗಳ ಪಾತ್ರದ ಕುರಿತು ಮಹತ್ವದ ಮಾತನ್ನಾಡಿದ್ದಾರೆ.

ಊಹಾಪೋಹದ ಮಾತು ಬೇಡ!
ಡ್ರಗ್ಸ್ ಪ್ರಕರಣದಲ್ಲಿ ಒಂದು ಕಾಲದ ಆಪ್ತ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಊಹಾಪೋಹದ ಮಾತನ್ನಾಡಲಾರೆ ಎಂದು ಎಚ್ಡಿಕೆ ಹೇಳಿಕೆ ಕೊಟ್ಟಿದ್ದಾರೆ. ನಾನು ಊಹಾಪೋಹದ ಮಾತುಗಳನ್ನು ಆಡಲಾರೆ. ಸರ್ಕಾರ ಮತ್ತು ಅಧಿಕಾರಿಗಳು ದೊಡ್ಡ ಮಟ್ಟದಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ.
ಡ್ರಗ್ಸ್ ಮಾಫಿಯಾದ ಹಿನ್ನಲೆ ತನಿಖೆ ನಂತರ ಬಯಲಾಗಲಿದೆ. ಸರ್ಕಾರ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ ಎಂದು ಹೇಳಿದೆ. ಡ್ರಗ್ ಮಾಫಿಯಾ ಸಂಪೂರ್ಣವಾಗಿ ನಿರ್ಮೂಲನೆ ಆಗಬೇಕು ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ. ಇದೇ ಸಂದರ್ಭದಲ್ಲಿ ಮಹತ್ವದ ಮಾತನ್ನಾಡಿರುವ ಕುಮಾರಸ್ವಾಮಿ ಅವರು, ಡ್ರಗ್ ಮಾಫಿಯಾದಲ್ಲಿ ಕೇವಲ ಸಿನಿಮಾ ಮಂದಿ ಮಾತ್ರ ಇಲ್ಲ ಎಂದಿದ್ದಾರೆ.

ರಾಜಕಾರಣಿಗಳೂ ಇದ್ದಾರೆ
ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಚಿತ್ರರಂಗದವರು ಮಾತ್ರ ಇಲ್ಲ ಎಂದಿರುವ ಕುಮಾರಸ್ವಾಮಿ ಅವರು, ರಾಜಕಾರಣಿಗಳೂ ಡ್ರಗ್ ಮಾಫಿಯಾದಲ್ಲಿದ್ದಾರೆ ಎನ್ನುವ ಮೂಲಕ ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದಾರೆ.
ಡ್ರಗ್ ಮಾಫಿಯಾದಲ್ಲಿ ರಾಜಕಾರಣಿಗಳು, ಉದ್ಯಮಿಗಳು ಇದ್ದಾರೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರ. ಡ್ರಗ್ಸ್ ಇವತ್ತಿನಿಂದ ಇರೋದಲ್ಲ. ಹಿಂದಿನಿಂದಲೂ ಇದೆ. ಇದು ಸಂಪೂರ್ಣವಾಗಿ ನಿಂತು ಬಿಡುತ್ತದೆ ಎಂದು ನಾನು ಭರವಸೆ ಕೊಡುವುದಿಲ್ಲ. ಆದರೆ ಈ ಮೂಲವಾಗಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಲಿ ಎಂದು ಆಶಿಸುತ್ತೇನೆ. ಸರ್ಕಾರ ಇದನ್ನು ಯಶಸ್ವಿಯಾಗಿ ನಿಯಂತ್ರಣ ಮಾಡಲಿ ಎಂದು ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟಿದ್ದಾರೆ.

ನಾನೇಕೆ ಪತ್ರ ಬರೆಯಲಿ?
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬೆನ್ನಲ್ಲೆ ಬಿಜೆಪಿ ಹೈಕಮಾಂಡ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಗೆ ಸ್ವತಃ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಕೊಟ್ಟಿದ್ದು, ನಾನೇಕೆ ಬಿಜೆಪಿ ಹೈಕಮಾಂಡ್ಗೆ ಪತ್ರ ಬರೆಯಲಿ ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ, ಆಡಳಿತದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರ ಹಸ್ತಕ್ಷೇಪ ವಿಚಾರದ ಬಗ್ಗೆ ನಾನು ಬಿಜೆಪಿ ಹೈಕಮಾಂಡ್ಗೆ ಪತ್ರ ಬರೆದಿಲ್ಲ. ನನಗೆ ಬಿಜೆಪಿ ನಾಯಕರು ಹೈಕಮಾಂಡ್ ಅಲ್ಲ. ನಾನು ಯಾಕೇ ಪತ್ರ ಬರೆಯಲಿ ಎಂದು ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟಿದ್ದಾರೆ.
Recommended Video

ಶಿರಾ ಅಭ್ಯರ್ಥಿ ಹೆಸರು
ಇನ್ನು ಶಿರಾ ವಿಧಾನಸಭಾ ಉಪ ಚುನಾವಣೆ ವಿಚಾರ ವಿಚಾರಕ್ಕೆ ಸಂಬಂಧಿಸಿದಂತೆ ಶಿರಾ ಜೆಡಿಎಸ್ ಮುಖಂಡರ ಸಭೆಯನ್ನು ಕುಮಾರಸ್ವಾಮಿ ಅವರು ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿರುವ ಅವರು, ಮತ್ತೆ ಕ್ಷೇತ್ರವನ್ನು ನಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಸವಾಲು ನಮ್ಮ ಮುಂದೆ ಇದೆ. ಪಕ್ಷದಲ್ಲಿ ಹಲವಾರು ಜನ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. ಇವತ್ತಿನ ಸಭೆ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರುತ್ತೇವೆ. ಶೀಘ್ರವೇ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ ಎಂದಿದ್ದಾರೆ.












Click it and Unblock the Notifications