ಜೆಡಿಎಸ್ಸಿನ 'ಬಿಟೀಂ' ಕಾಂಗ್ರೆಸ್: ನಿಮ್ಮ ದೌಲತ್ತೇ ಕಾಂಗ್ರೆಸ್ಸಿನ ಇಂತಹ ದುಸ್ಥಿತಿಗೆ ಕಾರಣ
ಬೆಂಗಳೂರು, ಡಿ 7: ವಿಧಾನ ಪರಿಷತ್ ಸಭಾಪತಿ ವಿರುದ್ದ ಅವಿಶ್ವಾಸ ಗೊತ್ತುವಳಿಯ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಟೀಕೆಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಅವರು ಮಾಡಿರುವ ಟ್ವೀಟ್ ಹೀಗಿದೆ, "ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್ಸಿನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ & ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ. ಕಾಂಗ್ರೆಸ್ಸಿನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತೆಯನ್ನು ಅನುಮಾನಿಸಲಾಗುತ್ತಿದೆ".
"ಸಭಾಪತಿ ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್ಸಿನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್ಸಿನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು, ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ?
"ಒಳ್ಳೆ ಇಮೇಜ್ ಅನ್ನು ಚುನಾವಣೆ ಮತ್ತು ಸ್ಥಾನಗಳಿಕೆ ಮೇಲೆ ಲೆಕ್ಕ ಹಾಕಿದ್ದಾರೆ ಸಿದ್ದರಾಮಯ್ಯನವರು. ಹಾಗಾದರೆ ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ಸಿನ ಇಮೇಜ್ ಕತೆ ಏನು? 2018ರ ಚುನಾವಣೆಯಲ್ಲಿ 120 ರಿಂದ 80ಕ್ಕೆ ಕುಸಿದ, ಸ್ವತಃ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ? ಇಮೇಜ್ ಇರುವುದು ನಮ್ಮ ಒಳ್ಳೆತನದಲ್ಲಿ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ
"ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್ಸಿನ ಬಿ ಟೀಂ. ಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನಲ್ಲಿ ಪಕ್ಕದಲ್ಲಿ ಆವರಣ(ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾಗಷ್ಟೇ ಅದರ ಹೆಸರು ಪೂರ್ಣವಾಗುತ್ತದೆ. ಅಷ್ಟರ ಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ" ಕುಮಾರಸ್ವಾಮಿ ಟ್ವೀಟ್.

ಸಿದ್ದರಾಮಯ್ಯ ಸರ್ಕಾರ ಕೆಡವಿದರು
'ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್ ಎಂದು ಹೇಳಿದ್ದಾರೆ ಸಿದ್ದರಾಮಯ್ಯ. ಅಂದರೆ ಹೈಕಮಾಂಡಿನ ನಿರ್ಣಯ ತಮಗೆ ಇಷ್ಟವಿರಲಿಲ್ಲ ಎಂಬುವುದು ಸಿದ್ದರಾಮಯ್ಯ ಅವರ ಮಾತಿನಲ್ಲಿ ಧ್ವನಿಸುತ್ತಿರುವ ಅರ್ಥ. ಹೀಗಾಗಿಯೇ ಸಿದ್ದರಾಮಯ್ಯ ಸರ್ಕಾರ ಕೆಡವಿದರು. ಅದರ ಅಪವಾದ ಬೇರೆಯವರಿಗೆ ಬಳಿದರು' ಕುಮಾರಸ್ವಾಮಿ ಟ್ವೀಟ್.

ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ
ಜಾತ್ಯತೀತ ನಿಲುವಿನ ಬಗ್ಗೆ! ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡಿದ ಕಾಂಗ್ರೆಸ್ ಇವತ್ತು ಜೆಡಿಎಸ್ ನ ನಿಲುವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿಕೊಂಡಿದೆ - ಕುಮಾರಸ್ವಾಮಿ ಟ್ವೀಟ್.

ಇಂದಿನ ರಾಜಕಾರಣದ ಅಯೋಮಯ ಸ್ಥಿತಿಗೆ ನಿಮ್ಮ ದ್ವಂದ್ವ ಹಾಗೂ ಇಬ್ಬಂದಿತನದ ನಿಲುವೇ ಕಾರಣ
ಇನ್ನು ಫೈವ್ ಸ್ಟಾರ್ ಸಂಸ್ಕೃತಿ ಬಗ್ಗೆ ರಾಗ ಎಳೆದಿದ್ದಿರಿ? ಫೈವ್ ಸ್ಟಾರ್ ಹಾಗೂ ಗುಡಿಸಲಿನಿಂದಲೂ ಅಧಿಕಾರ ನಡೆಸಿದ್ದೇನೆ. ಜನತೆಗೆ ನನ್ನಷ್ಟು ಸುಲಭವಾಗಿ ದಕ್ಕುವ ರಾಜಕಾರಣಿ ಮತ್ತೊಬ್ಬರಿಲ್ಲ ಎಂಬುವುದನ್ನು ನೆನಪಿಸಲು ಬಯಸುತ್ತೇನೆ. ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ ರಾಜ್ಯದ ಇಂದಿನ ರಾಜಕಾರಣದ ಅಯೋಮಯ ಸ್ಥಿತಿಗೆ ನಿಮ್ಮ ದ್ವಂದ್ವ ಹಾಗೂ ಇಬ್ಬಂದಿತನದ ನಿಲುವೇ ಕಾರಣ - - ಕುಮಾರಸ್ವಾಮಿ ಟ್ವೀಟ್. .












Click it and Unblock the Notifications