5 ಕೆಜಿ ಅಕ್ಕಿಗೆ ಹಣ ತೆಗೆದಿಟ್ಟು 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ಸಿದ್ದರಾಮಯ್ಯ!
ಬೆಂಗಳೂರು, ಸೆ. 26: ಮೈತ್ರಿ ಸರ್ಕಾರದ ಪತನದ ಬಳಿಕ ಮತ್ತಷ್ಟು ಹೆಚ್ಚಾಗಿರುವ ಇಬ್ಬರು ನಾಯಕರ ಮಧ್ಯದ ವಾಗ್ಯದ್ಧ ಮತ್ತೆ ತಾರಕಕ್ಕೇರಿದೆ. ಹೌದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒಂದಿಲ್ಲೊಂದು ಕಾರಣಕ್ಕೆ ವಾಕ್ಸಮರವನ್ನು ಮಾಡುತ್ತಲೇ ಇದ್ದಾರೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಡಿದ್ದ ಮಾತೊಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ.
ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, "ನಾನು ಉಚಿತವಾಗಿ ಏಳು ಕೆಜಿ ಅಕ್ಕಿಯನ್ನು ಕೊಟ್ಟಿದ್ದೆ. ಕುಮಾರಸ್ವಾಮಿ ಅಕ್ಕಿ ಕೊಟ್ಟಿದ್ರಾ ಹೇಳಿ? ಯಡಿಯೂರಪ್ಪ ಕೊಟ್ಟಿದ್ರಾ? ಈಗ ಸಿಎಂ ಬೊಮ್ಮಾಯಿ ಕೊಡುತ್ತಿದ್ದಾರಾ? ಈಗ ಕಡಿಮೆ ಅಕ್ಕಿ ಕೊಡುತ್ತಿದ್ದಾರೆ. ಇವರೇನು ಇವರಪ್ಪನ ಮನೆಯಿಂದ ಕೊಡುತ್ತಾರಾ? ಬಡವರಿಗೆ ಅಕ್ಕಿ ಕೊಡೋಕೆ ಯಾಕೆ ಹೊಟ್ಟೆ ಉರಿ? ನಾನೇನು ನಮ್ಮಪ್ಪನ ಮನೆಯಿಂದ ಅಕ್ಕಿ ಕೊಟ್ಟಿದ್ನಾ? ಯಡಿಯೂರಪ್ಪ ರಾಜಾಹುಲಿಯಂತೆ? ಯಾಕೆ ಇಂದಿರಾ ಕ್ಯಾಂಟಿನ್ ಮುಚ್ಚಿದಕ್ಕಾ? ಅತ್ಯುತ್ತಮ ಶಾಸಕನಂತೆ? ಯಡಿಯೂರಪ್ಪ ಎರಡು ವರ್ಷ ಸಿಎಂ ಆಗಿದ್ದಾಗ ಲೂಟಿ ಹೊಡೆಯೋದನ್ನು ಬಿಟ್ಟರೆ ಬೇರೆ ಏನು ಮಾಡಿಲ್ಲ" ಎಂದು ಆರೋಪಿಸಿದ್ದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ತಿರುಗೇಟು ಕೊಟ್ಟಿದ್ದಾರೆ.
ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಸಿದ್ದರಾಮಯ್ಯ!
"ಸಿದ್ದರಾಮಯ್ಯ ಅವರು ಸತ್ಯವನ್ನು ಮರೆಮಾಚಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಕ್ಕಿಭಾಗ್ಯದ ಅಸಲಿಯತ್ತು ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ 'ಸುಳ್ಳಿನ ಜಪ' ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ-ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? 5 ಕೆಜಿ ಅಕ್ಕಿ ಅಸಲಿಯೆತ್ತಿನ ಬಗ್ಗೆ ಹೇಳಲು ಅಂಜಿಕೆ ಯಾಕೆ ಸಿದ್ದರಾಮಯ್ಯನವರೇ?" ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತಿನಿಂದ ಆನಾಹುತ ಆಗಿತ್ತು ಎಂದು ಎಚ್ಡಿಕೆ ವಿವರಿಸಿದ್ದಾರೆ.
ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ದಿರಿ?
"ಸಮ್ಮಿಶ್ರ ಸರಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೆ. ಅದಕ್ಕೆ ಮುನ್ನ ಬಜೆಟ್ ಮಂಡಿಸಿ ಚುನಾವಣೆಗೆ ಹೋದ ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ದಿರಿ? ಐದು ಕೆಜಿಗೋ ಅಥವಾ ಏಳು ಕೆಜಿಗೋ? ಸತ್ಯವನ್ನು ಕಕ್ಕಲು ಕಷ್ಷವೇಕೆ? ನಾಲಗೆ ತಡವರಿಸುತ್ತಿದೆಯಾ ಪ್ರತಿಪಕ್ಷ ನಾಯಕರೇ?" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಅಕ್ಕಿ ಕೊಡಲು ಬಜೆಟ್ನಲ್ಲಿ ಹಣವನ್ನೇ ಸಿದ್ದರಾಮಯ್ಯ ಇಟ್ಟಿರಲಿಲ್ಲ ಎಂಬ ಗಂಭೀರ ಆರೋಪವನ್ನು ಎಚ್ಡಿಕೆ ಮಾಡಿದ್ದಾರೆ.
ಬೊಬ್ಬೆ ಹೊಡೆದಿದ್ದು 7 ಕೆಜಿ ಅಕ್ಕಿ ಎಂದು!
"ಸಮ್ಮಿಶ್ರ ಸರಕಾರದಲ್ಲಿ ಐದು ಕೆಜಿ ಅಕ್ಕಿ ನೀಡಲಾಯಿತು, ನಿಜ. ಇದ್ದಕ್ಕಿದ್ದಂತೆ 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ಸ್ವತಃ ನೀವೇ ಬಜೆಟ್ನಲ್ಲಿ ಹಣ ಮೀಸಲು ಇಟ್ಟಿದ್ದದ್ದು 5 ಕೆಜಿಗೆ ಮಾತ್ರ. ಹೊರಗೆ ಮಾತ್ರ ಹೆಚ್.ಡಿ.ಕುಮಾರಸ್ವಾಮಿ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು ಎಂದು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದೀರಿ. ಉಳಿದ ಎರಡು ಕೆಜಿ ಅಕ್ಕಿಗೆ ಹಣ ಎಲ್ಲಿತ್ತು? ಸ್ವಲ್ಪವಾದರೂ ಪಾಪಪ್ರಜ್ಞೆ ಇಲ್ಲವೆ ನಿಮಗೆ?" ಎಂದು ಸಿದ್ದರಾಮಯ್ಯ ಅವರು ಹೆಚ್ಚಿಗೆ ಅಕ್ಕಿ ಕೊಡಲು ಬಜೆಟ್ನಲ್ಲಿ ಹಣವನ್ನೇ ಇಟ್ಟಿರಲಿಲ್ಲ ಎಂಬ ಗಂಭೀರ ಆರೋಪವನ್ನು ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ್ದಾರೆ.
Recommended Video
ತಿನ್ನುವ ಅಕ್ಕಿಯಲ್ಲಿಯೂ ಸಿದ್ದರಾಮಯ್ಯ ರಾಜಕೀಯ!
"ಕೇವಲ ಚುನಾವಣೆಯಲ್ಲಿ ಮತ ಪಡೆಯುವ ದುರುದ್ದೇಶದಿಂದ ನೀವು ಜನರು ತಿನ್ನುವ ಅನ್ನದಲ್ಲೂ ರಾಜಕೀಯ ಮಾಡುತ್ತಿದ್ದರಿ. ಆದರೆ ಉಳಿದ ಎರಡು ಕೆಜಿ ಅಕ್ಕಿಗೆ ಹಣ ಹೊಂದಿಸಲು ಸಮ್ಮಿಶ್ರ ಸರಕಾರದಲ್ಲಿ ನಾವು ಪಟ್ಟ ಕಷ್ಟ ನಿಮಗೆ ಗೊತ್ತಿಲ್ಲವೇ? ಸದನದಲ್ಲಿ ನಾನು ಈ ವಿಷಯವನ್ನು ಪ್ರಸ್ತಾಪ ಮಾಡಿದಾಗ ಐದು ಕೆಜಿಗೆ ಹಣ ಮೀಸಲಿಟ್ಟಿದ್ದ ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯ ಇನ್ನಾದರೂ ನಿಮ್ಮ ಸುಳ್ಳಿನ 'ಸಿದ್ದಕಲೆ'ಗೆ ಕೊನೆ ಹಾಡಿ" ಎಂದು ಮಾಜಿ ಸಿಎಂ ಎಚ್ಡಿಕೆ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.