ಸಿದ್ದಹಸ್ತ ಮಹಾಶಯ ಏನಯ್ಯಾ ನಿಮ್ಮ ರಾಜಕೀಯ?; ಎಚ್ಡಿಕೆ ಟ್ವೀಟ್
ಬೆಂಗಳೂರು, ಮೇ 31; "ಬಿಜೆಪಿ ಸರಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ... ಏನಯ್ಯಾ ನಿಮ್ಮ ರಾಜಕೀಯ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಿದ್ದರಾಮಯ್ಯಗೆ ಟ್ವೀಟ್ ಬಾಣ ಬಿಟ್ಟಿದ್ದಾರೆ.
ಮಂಗಳವಾರ ಎಚ್. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದಾರೆ. "ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ" ಎಂದು ದೂರಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ಕಣಕ್ಕಿಳಿಸಿದೆ. ಈ ಕುರಿತು ಎಚ್. ಡಿ. ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದ್ದಾರೆ. #ಕಾಂಗ್ರೆಸ್_ಬಿಜೆಪಿ_ಭಾಯಿ_ಭಾಯಿ, #ಆಪರೇಶನ್_ಕಮಲಯ್ಯ ಎಂಬ ಹ್ಯಾಷ್ ಟ್ಯಾಗ್ಗಳನ್ನು ಬಳಕೆ ಮಾಡಿಕೊಂಡು ಸಿದ್ದರಾಮಯ್ಯ ಟೀಕಿಸಿದ್ದಾರೆ.
"ಭಾಷಣ ಒಂದು, ರಾಜಕಾರಣ ಇನ್ನೊಂದು. ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ?" ಎಂದು ಪ್ರಶ್ನೆ ಮಾಡಿದ್ದಾರೆ.
"ಇದು ನ್ಯಾಯವೇ?. ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು?. ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ 'ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ'ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ?" ಎಂದು ಪ್ರಶ್ನಿಸಿದ್ದಾರೆ.

ರಾಜ್ಯಸಭೆ ಚುನಾವಣೆ ಜಟಾಪಟಿ
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ಕಣಕ್ಕಿಳಿಸಿದೆ. ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ 2ನೇ ಅಭ್ಯರ್ಥಿ ಕಣಕ್ಕಿಳಿಸುವ ಹಿಂದೆ ಸಿದ್ದರಾಮಯ್ಯ ಪಾತ್ರ ಇದೆ ಎಂಬುದು ಸ್ಪಷ್ಟವಾಗಿದೆ. ಇದೇ ವಿಚಾರ ಎಚ್. ಡಿ. ಕುಮಾರಸ್ವಾಮಿಯನ್ನು ಕೆರಳಿಸಿದೆ. ಆದ್ದರಿಂದ ಮಂಗಳವಾರ ಸರಣಿ ಟ್ವೀಟ್ ಮೂಲಕ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ರಾಮನ ಹೆಸರು, ರಾವಣ ರಾಜಕೀಯ
"ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು?. ಆಪರೇಶನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ?" ಎಂದು ಕುಮಾರಸ್ವಾಮಿ ಕೇಳಿದರು.

ರಾಜ್ಯಸಭೆ ಚುನಾವಣೆ ಕುರಿತು ಪ್ರಶ್ನೆ
"ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ?" ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿ
"ಇಕ್ಬಾಲ್ ಅಹಮದ್ ಸರಡಗಿ ಆಯಿತು. ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಆಯಿತು. ರೋಷನ್ ಬೇಗ್ ಕಥೆಯನ್ನು ಮುಗಿಸಿದಿರಿ. ತನ್ವೀರ್ ಸೇಠ್ ನಿಮ್ಮ ಹಿಟ್ ಲಿಸ್ಟಿನಲ್ಲಿ ಇದ್ದಾರೆ. ಸತ್ಯ ಹೇಳಿದ ಸಲೀಂರನ್ನು ಸಲೀಸಾಗಿ ಸೈಡಿಗಟ್ಟಿದಿರಿ. ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿಗಳನ್ನು ಹೊಡೆಯೋದು ಅಂದರೆ ಇದೇನಾ?" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದರು.

ಆಪರೇಷನ್ ಕಮಲದ ಆಸಾಮಿ
"ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಮಿನ ಕ್ಯಾಪ್ಟನ್, ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.












Click it and Unblock the Notifications