ಯಡಿಯೂರಪ್ಪ ಬದಲಾವಣೆ: ಬಿಜೆಪಿ ಹೈಕಮಾಂಡ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು!
ಬೆಂಗಳೂರು, ಜು. 23: ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ವಿಚಾರವನ್ನು ಇದೀಗ ಕಾಂಗ್ರೆಸ್ ಪಕ್ಷವು ರಾಜಕೀಯ ದಾಳವಾಗಿ ಬಳಸಿಕೊಳ್ಳಲು ಮುಂದಾಗಿದೆಯಾ? ಎಂಬ ಚರ್ಚೆ ಶುರುವಾಗಿದೆ. ದಲಿತ ಮುಖ್ಯಮಂತ್ರಿ ಅಸ್ತ್ರವನ್ನು ಇದೀಗ ಕಾಂಗ್ರೆಸ್ ಬಿಜೆಪಿ ಮೇಲೆ ಪ್ರಯೋಗಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ದಲಿತ ಮುಖ್ಯಮಂತ್ರಿ ವಿಚಾರ ತೀವ್ರವಾಗಿ ಚರ್ಚೆಗೆ ಬಂದಿತ್ತು. ಇದೀಗ ಅದೇ ರಾಜಕೀಯ ಅಸ್ತ್ರವನ್ನು ಬಿಜೆಪಿ ಮೇಲೆ ಕಾಂಗ್ರೆಸ್ ಪ್ರಯೋಗಿಸಲು ಮುಂದಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳೂರಿನಲ್ಲಿ ಮಾತನಾಡಿ, ಮೊದಲ ಬಾರಿ 'ದಲಿತ ಮುಖ್ಯಮಂತ್ರಿ' ಆಗಬೇಕು ಎಂದು ಆಗ್ರಹಿಸಿರುವುದು ಕುತೂಹಲ ಮೂಡಿಸಿದೆ.
"ದಲಿತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ" ಎಂದು ವಿರೋಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಆಗ್ರಹಿಸಿದ್ದಾರೆ. "ಈ ವಿಷಯದಲ್ಲಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸವಾಲು ಹಾಕುವೆ" ಎಂದಿದ್ದಾರೆ. ಜೊತೆಗೆ ಬಿಜೆಪಿ ಹೈಕಮಾಂಡ್ಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬಿಜೆಪಿಗೆ ಈಗ ಅವಕಾಶ ಸಿಕ್ಕಿದೆ
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಿದ್ದರಾಮಯ್ಯ ಅವರು, "ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಈಗ ಬಿಜೆಪಿಗೆ ಬಂದಿದೆ. ಸಿದ್ದರಾಮಯ್ಯ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನಗೆ ಹೇಳಿದ್ದರು. ನಮ್ಮಲ್ಲಿ ಈಗಾಗಲೇ ದಲಿತರು ಮುಖ್ಯಮಂತ್ರಿ ಆಗಿದ್ದಾರೆ. ಹೀಗಾಗಿ ಸದ್ಯ ಬಿಜೆಪಿಗೆ 'ದಲಿತ ಮುಖ್ಯಮಂತ್ರಿ' ಮಾಡುವ ಅವಕಾಶ ಇದೆ, ಹೀಗಾಗಿ ಕಟೀಲ್ ದಲಿತರನ್ನು ಮುಖ್ಯಮಂತ್ರಿ ಮಾಡಲಿ. ಜೊತೆಗೆ ಬಿಜೆಪಿ ಹೈಕಮಾಂಡ್ ಕೂಡ ಅದನ್ನು ಮಾಡಲಿ" ಎಂದು ರಾಜ್ಯ ಹಾಗೂ ಕೇಂದ್ರ ಬಿಜೆಪಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬಿಜೆಪಿಗೆ ಸಿದ್ದರಾಮಯ್ಯ ಸವಾಲು!
"ಬಿ.ಎಸ್. ಯಡಿಯೂರಪ್ಪ ಅವರನ್ನು ಹೇಗಿದ್ದರೂ ಮುಖ್ಯಮಂತ್ರಿ ಹುದ್ದೆಯಿಂದ ತೆಗೀತಾರೆ. ಈಗ ದಲಿತರನ್ನ ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸಲಿ. ದಲಿತರ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರಿಗೆ ಪ್ರೀತಿ ಇದೆ ಅಲ್ವಾ? ಹಾಗಾದ್ರೆ ಸಿಎಂ ಮಾಡಲಿ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇದೆ ಎಂದು ಹಳುತ್ತಾರೆ. ಹೀಗಾಗಿ ತಕ್ಷಣ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಲಿ" ಎಂದು ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಬಿಜೆಪಿ ಹೈಕಮಾಂಡ್ಗೆ ಸವಾಲು ಹಾಕಿದ್ದಾರೆ.
ಮುಂದಿನ ಮುಖ್ಯಮಂತ್ರಿಯೂ ಭ್ರಷ್ಟರೇ
"ಜನರ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾದ್ಯವಿಲ್ಲ. 2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೆ ಇನ್ನೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರು ಕೊಚ್ಚಿ ಹೋಗಿವೆ. ಮನೆಗಳು ಬಿದ್ದಿವೆ. ಈಗ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಯತ್ನದಲ್ಲಿ ಇದ್ದಾರೆ. ಈಗ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೆ. ಆದ್ರೆ ಮುಂದೆ ಮುಖ್ಯಮಂತ್ರಿ ಆಗುವವರೂ ಭ್ರಷ್ಟರೇ ಆಗಿರುತ್ತಾರೆ" ಎಂದು ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು
"ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು. ಇಲ್ಲಿ ಜನಾಭಿಪ್ರಾಯ ಬಹಳ ಮುಖ್ಯ, ಪಕ್ಷದ ಒಳಗಿನ ವಿಚಾರಕ್ಕೆ ಯಾರೂ ಕೈ ಹಾಕಬಾರದು" ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳೂ ಸೇರಿದಂತೆ ಮಠಾಧೀಶರ ನಡೆದುಕೊಂಡರೀತಿಯನ್ನು ವಿಪಕ್ಷ ನಾಯಕ ಸಿದ್ದೆರಾಮಯ್ಯ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಫೋನ್ ಕದ್ದಾಲಿಕೆಯಿಂದ ಸಮ್ಮಿಶ್ರ ಸರ್ಕಾರ ಪತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, "ಫೋನ್ ಕದ್ದಾಲಿಕೆ ಇದೇ ಮೊದಲಲ್ಲ, ಬಿಜೆಪಿ ಇದಕ್ಕೂ ಮೊದಲು ಅದನ್ನೇ ಮಾಡಿದೆ. 2019ರಲ್ಲಿ ನನ್ನ ಪಿಎ ವೆಂಕಟೇಶ್ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸೇರಿ ಹಲವರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಕಿತ್ತು ಹಾಕಲು ಏನು ಬೇಕೋ ಅದೆಲ್ಲಾ ಮಾಡಿದ್ದಾರೆ ನಾನು ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸುತ್ತೇನೆ. ಇದೊಂದು ಪ್ರಜಾಪ್ರಭುತ್ವದ ಕೊಲೆ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಜಡ್ಜ್ ಗಳದ್ದೇ ಫೋನ್ ಕದ್ದಾಲಿಸೋದು ದೇಶದ್ರೋಹದ ಕೆಲಸ.ಇವರಿಗೆ ಸರ್ಕಾರ ಮಾಡೋಕೆ ಯೋಗ್ಯತೆ ಇಲ್ಲ, ನಾಲಾಯಕ್ಗಳು ಇವರು" ಎಂದು ಪೆಗಾಸಸ್ ಪ್ರಕರಣದ ಕುರಿತು ಸಿದ್ದರಾಮಯ್ಯ ತನಿಖೆಗೆ ಆಗ್ರಹಿಸಿದ್ದಾರೆ.
ಬದಲಾವಣೆ ಮೊದಲೇ ಗೊತ್ತಿತ್ತು!
ಇನ್ನು ವಲಸಿಗ ಬಿಜೆಪಿ ಸಚಿವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ. "ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ವಿಚಾರವಿಲ್ಲ. ಅವರು ನಮ್ಮಪಕ್ಷಕ್ಕೆ ಬರ್ತಾರೆ ಅನ್ನೋದು ನನಗಂತೂ ಗೊತ್ತಿಲ್ಲ. ಪಕ್ಕಕ್ಕೆ ಅವರನ್ನ ವಾಪಾಸ್ ಸೇರಿಸಿಕೊಳ್ಳುವುದಿಲ್ಲ ಎಂದು ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ಈಗಲೂ ಬದ್ಧ. ಎಲ್ಲರೂ ಒಟ್ಟಾಗಿ ಭ್ರಷ್ಡ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸಿ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ.ನಾನು ತಿಂಗಳ ಹಿಂದೆಯೇ ಯಡಿಯೂರಪ್ಪ ಬದಲಾಗ್ತಾರೆ ಅಂದಿದ್ದೆ. ನನಗೆ ಹೈಕಮಾಂಡ್ ಮೂಲದ ಮಾಹಿತಿ ಇತ್ತು, ಆದ್ರೆ ಯಾರು ಹೊಸದಾಗಿ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಮಾಹಿತಿಯಿಲ್ಲ" ಎಂದು ಸಿದ್ದರಾಮಯ್ಯ ಅವರು ಹೇಳಿದರು.
Recommended Video