ಬಿಜೆಪಿ ಶಾಸಕರಿಗೆ ಮಹತ್ವದ ಸಂದೇಶ ರವಾನಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ!
ಬೆಂಗಳೂರು, ಸೆ. 14: ರಾಜ್ಯ ಬಿಜೆಪಿ ಸರ್ಕಾರ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಕೂಡ ಆಗಿದೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಹೈಕಮಾಂಡ್ ನೇಮಿಸಿದೆ. ಮುಖ್ಯಮಂತ್ರಿಯಾದ ಬಳಿಕ ಬಸವರಾಜ ಬೊಮ್ಮಾಯಿ ಅವರು ವಿಧಾನ ಮಂಡಲ ಮೊದಲ ಅಧಿವೇಶನವನ್ನು ಎದುರಿಸುತ್ತಿದ್ದಾರೆ.
ಮುಖ್ಯಮಂತ್ರಿಯಾಗಿ ವಿಧಾನ ಮಂಡಲ ಮೊದಲ ಅಧಿವೇಶನವನ್ನು ಎದುರಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಶಾಸಕರಿಗೆ ಮಹತ್ವದ ಸೂಚನೆಯನ್ನು ಕೊಟ್ಟಿದ್ದಾರೆ. ಸೋಮವಾರ ರಾತ್ರಿ ಬಿಜೆಪಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಮಹತ್ವದ ಸಂದೇಶವನ್ನು ಬಿಜೆಪಿ ಶಾಸಕರಿಗೆ ರವಾನೆ ಮಾಡಿದ್ದಾರೆ.
ಶಾಸಕರಲ್ಲಿ ಸಿಎಂ ಬೊಮ್ಮಾಯಿ ಮನವಿ!
ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧವನ್ನು ಒಗ್ಗಟ್ಟಿನಿಂದ ಎದುರಿಸಲು ಸರ್ಕಾರಕ್ಕೆೆ ಎಲ್ಲರೂ ಸಹಕಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಶಾಸಕರು ಹಾಗೂ ಸಚಿವರಿಗೆ ಮನವಿ ಮಾಡಿದ್ದಾರೆ. ಖಾಸಗಿ ಹೊಟೇಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರೊಂದಿಗೆ ಮಾತನಾಡಿದ ಬೊಮ್ಮಾಯಿ ಅಧಿವೇಶನದ ಸಮಯದಲ್ಲಿ ಶಾಸಕರು ಸದನಕ್ಕೆೆ ಹಾಜರಾಗಿ ಸರ್ಕಾರದ ಪರ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಲೆ ಏರಿಕೆ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ!
ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆೆಸ್ ಪಕ್ಷವು, ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸಲು ಸಿದ್ದತೆ ನಡೆಸಿದೆ. ಆದರೆ, ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗಲೂ ಇಂಧನ ಬೆಲೆ ಹೆಚ್ಚಳವಾಗಿತ್ತು ಎನ್ನುವುದನ್ನು ಎಲ್ಲರೂ ಒಟ್ಟಾಗಿ ತಿರುಗೇಟು ಕೊಡಬೇಕು ಸಿಎಂ ಬೊಮ್ಮಾಯಿ ಎಂದು ತಿಳಿದು ಬಂದಿದೆ. ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಶಾಸಕರಿಗೆ ಮತ್ತೊಂದು ಮಹತ್ವದ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕರಿಗೆ ಯಡಿಯೂರಪ್ಪ ಮಹತ್ವದ ಸೂಚನೆ!
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಅಧಿವೇಶನದಲ್ಲಿ ಕಾಂಗ್ರೆೆಸ್ ಆರೋಪಗಳಿಗೆ ತಿರುಗೇಟು ನೀಡಿ, ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ಶಾಸಕರಿಗೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಹಾಗೂ ಸಚಿವರು ಸ್ವಪಕ್ಷದ ಶಾಸಕರಿಗೇ ಲಭ್ಯವಾಗುತ್ತಿಲ್ಲ ಎಂದು ಹಲವು ಶಾಸಕರು ಸಭೆಯಲ್ಲಿ ಆಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿ ಗುರುವಾರ ಶಾಸಕರಿಗೆ ಸಿಗುತ್ತಾರೆ, ಜೊತೆಗೆ ಸಚಿವರುಗಳೂ ಕೂಡ ಶಾಸಕರಿಗೆ ಲಭ್ಯವಾಗಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.
ಈ ಅಧಿವೇಶನದಲ್ಲಿ ಮಂಡನೆ ಆಗುತ್ತಿರುವ ವಿಧೇಯಕಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಶಾಸಕರಿಗೆ ವಿವರಣೆ ನೀಡಿದ್ದಾರೆ. ಡೀಮ್ಡ್ ಫಾರೆಸ್ಟ್ ಹಾಗೂ ಇ-ಸ್ವತ್ತು ವಿಧೇಯಕಗಳ ಬಗ್ಗೆೆ ಶಾಸಕರು ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿ ಕಾಯ್ದೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
Recommended Video
ಪ್ರತಿ ಮಂಗಳವಾರ ಶಾಸಕಾಂಗ ಪಕ್ಷದ ಸಭೆ!
ಶಾಸಕಾಂಗ ಪಕ್ಷದ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮಗೋಷ್ಠೀಯಲ್ಲಿ ಮಾತನಾಡಿ, "ಅಧಿವೇಶನದಲ್ಲಿ ಹೇಗೆ ನಿಭಾಯಿಸಬೇಕು ಅಂತ ಚರ್ಚೆ ಆಗಿದೆ. ಶಾಸನ ಸಭೆಯಲ್ಲಿ ಬರಬಹುದಾದ ವಿಧೇಕಗಳ ಬಗ್ಗೆೆ ಅನುಮಾನಗಳನ್ನು ಬಗೆಹರಿಸಿಕೊಳ್ಳಲಾಗಿದೆ. ಶಾಸನ ಸಭೆಗಳಲ್ಲಿ ಎಲ್ಲರೂ ಭಾಗವಹಿಸಲು ಸೂಚಿಸಲಾಗಿದೆ. ಅಧಿವೇಶನ ವೇಳೆ ಪ್ರತೀ ಮಂಗಳವಾರ ಪಕ್ಷದ ಶಾಸಕಾಂಗ ಸಭೆ ಕರೆಯಲು ನಿರ್ಧಾರಿಸಲಾಗಿದ್ದು, ಬೆಳಗ್ಗೆೆ 9.30 ರಿಂದ 11 ರೊಳಗೆ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಮುಂದಿನ ಮಂಗಳವಾರ ಮತ್ತೆೆ ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.
ಜೊತೆಗೆ ಆನ್ಲೈನ್ ಗ್ಯಾಂಬಲಿಂಗ್ ತಡೆ ವಿಧೇಯಕ, ಜಿ.ಪಂ., ತಾ.ಪಂ ಕ್ಷೇತ್ರ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡುವ ಬಗ್ಗೆೆ ಚರ್ಚೆ ಮಾಡಲಾಗಿದೆ. ಈ ಆಯೋಗವೇ ಮೀಸಲಾತಿ ಹಂಚಿಕೆಯೂ ಮಾಡಲಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಒಬ್ಬರನ್ನು ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲು ಚಿಂತನೆ ನಡೆಸಲಾಗಿದೆ. ಜೈಲ್ಗಳ ಸುಧಾರಣೆ ಬಗ್ಗೆೆ ಚರ್ಚೆ ಆಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.