KPCC: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಯಕ ಫಿಕ್ಸ್, ಆಕಾಂಕ್ಷಿಗಳಿಗೆ ಆಘಾತ!
ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರದ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಚರ್ಚೆ ಕೂಡ ಜೋರಾಗಿ ನಡೆಯುತ್ತಿದೆ. ಕೆಲವರು ಸಚಿವ ಸ್ಥಾನದ ಕಡೆಗೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಪ್ರಬಲ ನಾಯಕರು ಹದ್ದಿನಕಣ್ಣಿಟ್ಟಿದ್ದಾರೆ. ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ಆಯ್ಕೆಯಾಗಿದ್ದಾರೆ ಎನ್ನುವ ಗುಸುಗುಸು ಕೂಡ ಶುರುವಾಗಿದೆ.
ಸದ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ತಮ್ಮದೇ ಹವಾ ಕ್ರಿಯೇಟ್ ಮಾಡಿಕೊಂಡು ಬಂದಿದ್ದಾರೆ. ಮುಂದಿನ ಸಿಎಂ ಸ್ಥಾನದ ಬಗ್ಗೆಯೂ ಅವರು ನಿಗಾ ಇಟ್ಟಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಆದರೆ, ತಮ್ಮ ನಂತರ ಈ ಕೆಪಿಸಿಸಿ ಅಧಿಕಾರ ಬೇರೆಯವರಿಗೆ ಹೋದರೆ ಸಮಸ್ಯೆಯಾಗಬಹುದು ಎಂದು ಅವಲೋಕಿಸಿ, ತನ್ನ ಸಹೋದರ ಡಿ.ಕೆ.ಸುರೇಶ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೌದು ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋತಿದ್ದರು. ಇದರಿಂದಾಗಿ ತಮ್ಮನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಬೇಕು ಎಂದು ಡಿಕೆಶಿ ಅವಿರತ ಶ್ರಮ ಪಡುತ್ತಿದ್ದಾರೆ. ಅಲ್ಲದೆ ಮೊದಲಿಗೆ ಚನ್ನಪಟ್ಟಣ ಉಪಚುನಾವಣೆಗೆ ಡಿ.ಕೆ.ಸುರೇಶ್ ಅವರನ್ನೇ ಅಭ್ಯರ್ಥಿ ಮಾಡಬೇಕು ಎಂಬ ಯೋಜನೆಯೂ ಇತ್ತು. ಆದರೆ ನಿರಂತರವಾಗಿ ಸಂಸದರಾಗಿ ಗೆದ್ದಿದ್ದ ಡಿ.ಕೆ.ಸುರೇಶ್ ಅವರಿಗೆ ಶಾಸಕ ಸ್ಥಾನ ಸೂಕ್ತವಲ್ಲ ಎಂದು ನಿರ್ಧಾರ ಕೈಬಿಡಲಾಗಿತ್ತು ಎನ್ನುವ ಮಾತಿದೆ.
ಸದ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ. ಮತ್ತೊಂದೆಡೆ ಅವರು ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನ ಸೇರಿ ಹಲವು ಜವಾಬ್ದಾರಿಗಳಿರುವುದರಿಂದ ಕೆಪಿಸಿಸಿ ಸ್ಥಾನ ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ಹೇಳಲಾಗಿತ್ತು. ಮತ್ತೊಂದೆಡೆ ರಾಜ್ಯ ಕಾಂಗ್ರೆಸ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೂಡ ಭಾರಿ ಮಹತ್ವದ ಕುರ್ಚಿ ಆಗಿರುವುದರಿಂದ ಇದು ಕೈತಪ್ಪಿದರೆ ಮುಂದಿನ ರಾಜಕೀಯ ಹಾದಿಗೆ ಕಷ್ಟವಾಗಬಹುದು ಎಂದೂ ಡಿ.ಕೆ.ಶಿವಕುಮಾರ್ ಲೆಕ್ಕಚಾರ ಹಾಕಿದ್ದಾರೆ ಎನ್ನಲಾಗಿದೆ.
ಹಾಗಾಗಿ ತಮ್ಮ ಸಹೋದರ ಡಿ.ಕೆ.ಸುರೇಶ್ ಅವರಿಗೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟರೆ, ಒಂದು ರೀತಿಯಲ್ಲಿ ಕೆಪಿಸಿಸಿ ತಮ್ಮ ಸುಪರ್ದಿಯಲ್ಲೇ ಇರುತ್ತದೆ ಎಂದು ಡಿಕೆಶಿ ಪ್ಲ್ಯಾನ್ ಮಾಡಿದ್ದಾರೆ. ಈ ಸಂಬಂಧ ದೆಹಲಿ ನಾಯಕರೊಂದಿಗೆ ಚರ್ಚೆ ಕೂಡ ನಡೆದಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ಜೋರಾಗಿವೆ. ಇನ್ನು ಡಿ.ಕೆ.ಶಿವಕುಮಾರ್ ಅವರ ಮೇಲೆ ಹೈಕಮಾಂಡ್ ಮೊದಲಿನಿಂದಲೂ ಒಳ್ಳೆಯ ಅಭಿಪ್ರಾಯ ಹೊಂದಿರುವುದರಿಂದ ಈ ಮನವಿಯನ್ನು ಪುರಸ್ಕರಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

ಅದರಂತೆ ಡಿ.ಕೆ.ಸುರೇಶ್ ಅವರನ್ನೇ ಮುಂದಿನ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ದಟ್ಟವಾಗಿದೆಯಂತೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಗೆದ್ದು ಸಂಸದರಾಗಿದ್ದ ಡಿ.ಕೆ.ಸುರೇಶ್ ಅವರು ಕಳೆದ ಚುನಾವಣೆಯಲ್ಲಿ ಡಾ.ಸಿ.ಎನ್.ಮಂಜುನಾಥ್ ಅವರ ಎದುರು ಸೋಲು ಕಂಡಿದ್ದರು. ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೂಡ ಡಿ.ಕೆ.ಸುರೇಶ್ ಅವರಿಗೆ ಒಲಿದು ಬರುವ ಸೂಚನೆ ಸಿಕ್ಕಿದ್ದು, ಇದರಿಂದ ಡಿ.ಕೆ.ಶಿವಕುಮಾರ್ ಅವರ ಮುಂದಿನ ಬೆಳವಣಿಗೆ ಹಾದಿ ಸುಗಮವಾಗಲಿದೆ ಎಂದು ಚರ್ಚೆಗಳು ಜೋರಾಗಿವೆ.
ಆದರೆ ಸದ್ಯಕ್ಕೆ ರಾಜ್ಯದಲ್ಲಿ ಸಚಿವ ಸಂಪುಟದಲ್ಲಿ ಬದಲಾವಣೆ ಆಗುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಯೂ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆಯೂ ಇದೆ.












Click it and Unblock the Notifications