ದಳಪತಿಗಳಿಗೆ ಆಪರೇಷನ್ ಭಯ; ಜೆಡಿಎಸ್ನ ಇಬ್ಬರು ನಾಯಕರಿಗೆ ಕಾಂಗ್ರೆಸ್ ಗಾಳ; ಪಕ್ಷ ಸೇರ್ಪಡೆ ಯಾವಾಗ ಗೊತ್ತಾ?
ಬೆಂಗಳೂರು, ನವೆಂಬರ್ 10: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರಿಗೆ ಗಾಳ ಹಾಕುತ್ತಿದ್ದು, ಇದೀಗ ಇಬ್ಬರು ಜೆಡಿಎಸ್ ನ ಮಾಜಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ.
ಹೌದು, ದಿನೇ ದಿನೇ ಕಾಂಗ್ರೆಸ್ ಆಪರೇಷನ್ ಹಸ್ತದ ಸದ್ದು ಜೋರಾಗಿತ್ತಿದ್ದು, ಈ ಆಪರೇಷನ್ ನಿಂದ ಪಕ್ಷದ ಶಾಸಕರನ್ನು ರಕ್ಷಿಸುವ ಸಲುವಾಗಿ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಬುಧವಾರ ಹಾಸನದಲ್ಲಿ ಒಗ್ಗಟ್ಟು ಪ್ರದರ್ಶಿಸಿದ್ದರು. ಅಲ್ಲದೇ ಜೆಡಿಎಸ್ ನ 19 ಶಾಸಕರ ಪೈಕಿ 18 ಮಂದಿ ಜತೆಯಾಗಿ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸಾರಿದ್ದರು.

ಇನ್ನೂ ಈ ಎಲ್ಲ ಬೆಳವಣಿಗೆಗಳ ನಡುವೆ ಇದೀಗ ಜೆಡಿಎಸ್ನ ಇಬ್ಬರು ಮಾಜಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿಶಂಕರ್ ಹಾಗೂ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಆರ್.ಮಂಜುನಾಥ್ಗೆ ಕಾಂಗ್ರೆಸ್ ಗಾಳ ಹಾಕಿದ್ದು, ಈ ಇಬ್ಬರು ಮಾಜಿ ಶಾಸಕರು ನವೆಂಬರ್ 15ರಂದು ಕಾಂಗ್ರೆಸ್ ಪಕ್ಷ ಸೇರಲು ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದ್ದು, ಇದೀಗ ಕಾಂಗ್ರೆಸ್ ಸೆರ್ಪಡೆ ಮಾತುಕತೆ ಅಂತಿಮ ಹಂತ ತಲುಪಿದ್ದು, ಅಂತಿಮವಾಗಿ ನವೆಂಬರ್ 15ರಂದು ಆಡಳಿತರೂಢ ಕಾಂಗ್ರೆಸ್ ಸೇರ್ಪಡೆಗೆ ಜೆಡಿಎಸ್ ನಾಯಕರು ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ 2023 ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಇದೀಗ 2024 ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಸದ್ದು ಜೋರಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಆಪರೇಷನ್ ಸದ್ದು ಹೆಚ್ಚಾಗಿದೆ. ಒಂದೆಡೆ, ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂದು ವಿಪಕ್ಷಗಳು ಬಹಿರಂಗವಾಗಿ ಆರೋಪಿಸುತ್ತಿವೆ.












Click it and Unblock the Notifications