ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ: ಪದೀಪ್ ಈಶ್ವರ್ ಗೆ ಸವಾಲು ಡಾ. ಕೆ ಸುಧಾಕರ್
ಚಿಕ್ಕಬಳ್ಳಾಪುರ, ಜುಲೈ 29: ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಕ್ಷೇತ್ರದ ಶಾಸಕರು ರಾಜೀನಾಮೆ ನೀಡಿ ಸ್ವತಂತ್ರವಾಗಿ ನನ್ನ ವಿರುದ್ಧ ಸ್ಪರ್ಧಿಸಲು ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡೇ ಬಿಡೋಣ ಎಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಲಿ ಶಾಸಕ ಪ್ರದೀಪ್ ಈಶ್ವರ್ ಗೆ ಸವಾಲು ಹಾಕಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಹಾಗೂ ಬೆಂಬಲಿಗರ ದೌರ್ಜನ್ಯ ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಪಿ ಕಚೇರಿ ಪ್ರತಿಭಟನೆ ನಡೆಸಿದ ಎಸ್ಪಿ ಡಿ.ಎಲ್.ನಾಗೇಶ್ ಅವರಿಗೆ ದೂರು ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಬೆಳಗ್ಗೆ ಶಾಸಕ ಪ್ರದೀಪ್ ಈಶ್ವರ್ ಅವರ ಬೆಂಬಲಿಗರು ಬಿಜೆಪಿ ಮುಖಂಡ ಸಂತೋಷ್ ರಾಜ್ ಅವರ ಮೇಲೆ ನಡೆಸಿದ ದೌರ್ಜನ್ಯದ ವಿರುದ್ಧ ಎಸ್ಪಿ ಕಚೇರಿ ಎದುರು ಕೂತು ಮುಖಂಡರು ಪ್ರತಿಭಟನೆ ನಡೆಸಿದರು. ಶಾಸಕರು ಮತ್ತು ಶಾಸಕರ ಬೆಂಬಲಿಗರ ವರ್ತನೆಗೆ ಕಡಿವಾಣ ಹಾಕಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹಾಲಿ ಶಾಸಕರು ಸ್ವತಂತ್ರವಾಗಿ ಸ್ಪರ್ಧಿಸಿದರೆ ಐದು ಸಾವಿರ ಮತಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅವರು ಕಾಂಗ್ರೆಸ್ ಪಕ್ಷ ಮತ್ತು ಮುಖಂಡರ ಶ್ರಮದಿಂದ ಗೆದ್ದಿರಬಹುದು. ಆದರೆ ಈಗ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ವತಂತ್ರವಾಗಿ ಸ್ಪರ್ಧೆಗೆ ನಿಂತು ಗೆಲ್ಲಲಿ ನೋಡೋಣ ಎಂದು ಬಹಿರಂಗ ಸವಾಲು ಹಾಕಿದರು.
ಇನ್ನೂ ನಮ್ಮ ಪಕ್ಷದ ಯಾವುದೇ ಕಾರ್ಯಕರ್ತನಿಗೆ ತೊಂದರೆ ಕೊಟ್ಟರೆ ನಾನು ಸುಮ್ಮನೆ ಕೂರುವುದಿಲ್ಲ. ಎರಡು ತಿಂಗಳವರೆಗೂ ಯಾವುದೇ ಪ್ರತಿಕ್ರಿಯೆ ಕೊಡುವುದು ಬೇಡ ಎಂದು ಸುಮ್ಮನಿದ್ದೆ. ಆದರೆ ಕ್ಷೇತ್ರದಲ್ಲಿ ದಿನೇ ದಿನೇ ಶಾಸಕರ ಬೆಂಬಲಿಗರ ಉಪಟಳ ಹೆಚ್ಚಾಗಿದೆ. ನಾವು ಸೋತಿರಬಹುದು. ಆದರೆ ಇನ್ನೂ ಸತ್ತಿಲ್ಲ ಎಂದು ಪ್ರದೀಪ್ ಈಶ್ವರ್ ಗೆ ಎಚ್ಚರಿಕೆ ನೀಡಿದರು.
ಇನ್ನೂ ಇತ್ತೀಚೆಗೆ ನಮ್ಮ ಬಿಜೆಪಿ ಪಕ್ಷದ ನವೀನ್ ಎಂಬುವರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದನ್ನೆಲ್ಲವನ್ನು ಸಹಿಸಲ್ಲ. ಅಧಿಕಾರಿಗಳನ್ನು ಕರೆದುಕೊಂಡು ಬೆಂಗಳೂರಿನ ಅವರ ಸಂಸ್ಥೆಯಲ್ಲಿ ಸಭೆ ನಡೆಸಿರುವುದನ್ನು ಪ್ರಶ್ನಿಸಿದ್ದೇ ತಪ್ಪಾ..? ಅವರನ್ನು ಯಾರೂ ಪ್ರಶ್ನಿಸಲೇಬಾರದಾ..? ವಾಕ್ ಸ್ವಾತಂತ್ರ್ಯವೇ ಇಲ್ಲವೇ..? ಪ್ರಶ್ನೆ ಮಾಡಿದ್ದಕ್ಕೆ ಅವರ್ಯಾರು ಗೆಲ್ಲಲ್ಲ ಎಂದು ನಗರಸಭೆ ಸದಸ್ಯರ ವಿರುದ್ಧ ಹೇಳಿಕೆ ಕೊಟ್ಟು ಪ್ರಚೋದಿಸಿರುವವರೇ ಇವರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರನ್ನ ಪ್ರಶ್ನೆ ಮಾಡಿದರೇ ನಮ್ಮ ಮುಖಂಡರು ಮಾತನಾಡಿದರೆ ಅವರ ಅಂಗಡಿ ಬಳಿ ಹೋಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವುದನ್ನು ನಾವು ಸಹಿಸಲ್ಲ. ಈ ಕೂಡಲೇ ಗೂಂಡಾಗಿರಿ ಮಾಡಲು ಬಂದ ಅವರ ವಿರುದ್ಧ ತನಿಖೆ ನಡೆಸಿ ತಪ್ಪಿದ್ದರೆ ಇನ್ನೊಂದು ದಿನದಲ್ಲಿ ಎಫ್ಐಆರ್ ದಾಖಲಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದರೆ ಯಾವುದೇ ಕಾರಣಕ್ಕೂ ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಎಸ್ಪಿ ಡಿ.ಎಲ್.ನಾಗೇಶ್ ಅವರಿಗೆ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ದೌರ್ಜನ್ಯವನ್ನು ವಿವರಿಸಿ ದೂರನ್ನು ಕೊಟ್ಟು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಯಾರ ಒತ್ತಡಕ್ಕೂ ಮಣಿಯದೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಹೇಳಿದರು.












Click it and Unblock the Notifications