Breaking ಮಾಜಿ ಸಚಿವ ಸಿ. ಚೆನ್ನಿಗಪ್ಪ ನಿಧನ
ಬೆಂಗಳೂರು, ಫೆಬ್ರವರಿ 21: ಜೆಡಿಎಸ್ನ ಹಿರಿಯ ಮುಖಂಡ, ಮಾಜಿ ಸಚಿವ ಸಿ. ಚೆನ್ನಿಗಪ್ಪ (76) ಶುಕ್ರವಾರ ನಿಧನರಾದರು.
ಹಲವು ಸಮಯದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರು ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ ಕೊನೆಯುಸಿರೆಳಿದ್ದಾರೆ. ನೆಲಮಂಗಲ ತಾಲ್ಲೂಕಿನ ಬೈರನಾಯಕನಹಳ್ಳಿ ಗ್ರಾಮದವರಾದ ಅವರು, ಜೆಡಿಎಸ್ ಪಕ್ಷದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.
ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚೆನ್ನಿಗಪ್ಪ, ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿಯೂ ಪಕ್ಷದ ಪರವಾಗಿ ದುಡಿದಿದ್ದರು. ಅನಾರೋಗ್ಯದ ಕಾರಣದಿಂದ 2018ರಲ್ಲಿ ಅವರು ಸಿಂಗಪುರದಲ್ಲಿ ಚಿಕಿತ್ಸೆ ಪಡೆದಿದ್ದರು. 2019ರಲ್ಲಿ ಅವರು ತುಮಕೂರು ಜೆಡಿಎಸ್ ಅಧ್ಯಕ್ಷರಾಗಿ ನೇಮಕವಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಹುದ್ದೆ ತೊರೆದಿದ್ದರು.
ಚೆನ್ನಿಗಪ್ಪ ಅವರ ಅಂತ್ಯಕ್ರಿಯೆ ಸ್ವಗ್ರಾಮ ಬೈರನಾಯಕನಹಳ್ಳಿಯಲ್ಲಿ ಶುಕ್ರವಾರ ನಡೆಯಲಿದೆ.
ಪಕ್ಷದ ಬೆಳವಣಿಗೆಯಲ್ಲಿ ಶ್ರಮಿಸಿದ್ದರು
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚೆನ್ನಿಗಪ್ಪ ಅವರು ಪಕ್ಷದ ಬೆಳವಣಿಗೆಯಲ್ಲಿ ಬಹುವಾಗಿ ಶ್ರಮಿಸಿದ್ದರು. ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಕೋರುತ್ತೇನೆ ಎಂದು ಕುಮಾರಸ್ವಾಮಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಚೆನ್ನಿಗಪ್ಪ ನಮ್ಮ ಆತ್ಮೀಯ ಸ್ನೇಹಿತರು
ಚೆನ್ನಿಗಪ್ಪನವರು ನಮಗೆಲ್ಲಾ ಆತ್ಮೀಯ ಸ್ನೇಹಿತರು. ನೇರವಾದ ರಾಜಕಾರಣಿಯಾಗಿದ್ದರು. ಅನೇಕ ಹುದ್ದೆಗಳನ್ನು ಹೊಂದಿದ್ದರು. ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜ ಸೇವೆ ಮಾಡ್ತಿದ್ದರು. ಅವರ ಪುತ್ರ, ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾರಾಯಣಗೌಡ ಶೋಕ
ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ಸಚಿವ ಕೆ.ಸಿ. ನಾರಾಯಣಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪಕ್ಷಕ್ಕೆ ತುಂಬಲಾರದ ನಷ್ಟ
ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಸಿ. ಚೆನ್ನಿಗಪ್ಪ ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ. ದೇವರು ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ಹೇಳಿದೆ.