Breaking; ಒಂದೇ ಕಾರಿನಲ್ಲಿ ತೆರಳಿದ ಸಿಎಂ, ರಮೇಶ್ ಜಾರಕಿಹೊಳಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಆರ್. ಟಿ. ನಗರದ ನಿವಾಸದಲ್ಲಿ ಭೇಟಿಯಾದರು.
ಬೆಂಗಳೂರು, ಫೆಬ್ರವರಿ 01; ಮಾಜಿ ಸಚಿವ, ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದರು.
ಬುಧವಾರ ಬೆಳಗ್ಗೆ ಆರ್. ಟಿ. ನಗರದ ಮುಖ್ಯಮಂತ್ರಿಗಳ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು. ಗೃಹ ಕಚೇರಿ ಕೃಷ್ಣಾಗೆ ಉಭಯ ನಾಯಕರು ಒಂದೇ ಕಾರಿನಲ್ಲಿ ತೆರಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ರಮೇಶ್ ಜಾರಕಿಹೊಳಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು. ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಬಳಿಕ ಪದೇ ಪದೇ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ.

ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ರಮೇಶ್ ಜಾರಕಿಹೊಳಿ ಸಚಿವರಾಗಿದ್ದಾಗ ಸಿಡಿ ಪ್ರಕರಣ ಬೆಳಕಿಗೆ ಬಂದಿತ್ತು. ಆಗ ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಆಗಲೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ ತಮ್ಮನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ರೂಪಿಸಿ ಸಿಡಿ ಪ್ರಕರಣ ಮಾಡಿಸಲಾಗಿದೆ. ಆದ್ದರಿಂದ ಈ ಕುರಿತು ಸಿಬಿಐ ತನಿಖೆಯಾಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಮನವೊಲಿಸುತ್ತೇನೆ ಎಂದು ಹೇಳಿದ್ದರು.
ರಮೇಶ್ ಜಾರಕಿಹೊಳಿ ಆಪ್ತರು, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದರು. "ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಆಗ ಯಾವುದೇ ಗೊಂದಲ ಉಂಟಾಗದಂತೆ ಪ್ರಕರಣ ಸ್ವಚ್ಛವಾಗುತ್ತದೆ" ಎಂದು ಹೇಳಿದ್ದರು.
"ರಮೇಶ್ ಜಾರಕಿಹೊಳಿ ಹೇಳಿದ ರೀತಿಯಲ್ಲಿಯೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಷಡ್ಯಂತ್ರ ಮಾಡಿ ರಮೇಶ್ ಜಾರಕಿಹೊಳಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಆದಷ್ಟು ಬೇಗ ತನಿಖೆಯಾಗಲಿ" ಎಂದು ತಿಳಿಸಿದ್ದರು.












Click it and Unblock the Notifications