ಉ.ಕ. ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ನಿರ್ಲಕ್ಷ ಬೇಡ: ಸಿಎಂಗೆ ಪತ್ರ
ಬೆಂಗಳೂರು, ಜು. 13: ಇಡೀ ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗೆ ವಿಶೇಷ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. ಜೊತೆಗೆ ನಾಳೆಯಿಂದ ಒಂದು ವಾರ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಗೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದ ಮುಖಂಡರು ಪತ್ರ ಬರೆದು ಆಗ್ರಹಿಸಿದ್ದಾರೆ.
Recommended Video
ರಾಜ್ಯದಲ್ಲಿ ದಿನೆ ದಿನೆ ಹೆಚ್ಚುತ್ತಿರುವ ಕೊರೊನಾ ವೈರಸ್ಗೆ ಅಸಂಖ್ಯಾತ ಜನರು ತುತ್ತಾಗುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಜನರ ಚಿಕಿತ್ಸೆಗೆ ಬೆಂಗಳೂರು ಹೊರ ವಲಯದ ಇಂಟರ್ ನ್ಯಾಶನಲ್ ಎಕ್ಸಿಬಿಶನ್ ಸೆಂಟರ್ನಲ್ಲಿ 10,100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಮಾಡಿರುವುದು ಸಮಯೋಚಿತ ವಿಚಾರ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಪತ್ರ ಬರೆದಿದ್ದಾರೆ.
ಇದೇ ರೀತಿ ಉತ್ತರ ಕರ್ನಾಟಕದಲ್ಲಿಯೂ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿನ ಬೆಡ್ಗಳು ಭರ್ತಿಯಾಗುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ 5000 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ತೆರೆದು ಕೊರೊನಾ ಸೋಕಿತರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಬೇಕೆಂದು ಎಸ್.ಆರ್. ಪಾಟೀಲ್ ಅವರು ಸಿಎಂಗೆ ಬರೆದ ಪತ್ರದಲ್ಲಿ ವಿನಂತಿಸಿದ್ದಾರೆ.