ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ ಶ್ರೀನಿವಾಸ ಪ್ರಸಾದ್
ಮೈಸೂರು, ಅಕ್ಟೋಬರ್ 29: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಅಭಿಮಾನಿಗಳ ಬಳಿ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ಹೇಳಿದರು.
ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ನಡೆಸಿದ ಸಮಾವೇಶಕ್ಕೆ ಪ್ರತಿಯಾಗಿ ನವೆಂಬರ್ 8ಕ್ಕೆ ಬೃಹತ್ ಸಮಾವೇಶವನ್ನು ನಡೆಸಲು ಶ್ರೀನಿವಾಸ ಪ್ರಸಾದ್ ಸಿದ್ಧತೆ ನಡೆಸಿದ್ದಾರೆ. ನವೆಂಬರ್ 9 ಅಥವಾ 10ರಂದು ಬಿಜೆಪಿಗೆ ಶ್ರೀನಿವಾಸ ಪ್ರಸಾದ್ ಸೇರ್ಪಡಯಾಗಲಿದ್ದಾರೆ ಎಂಬ ಮಾಹಿತಿ ಬಂದಿದೆ

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಶ್ರೀನಿವಾಸ ಪ್ರಸಾದ್ ಭೇಟಿ ಮಾತುಕತೆ ನಡೆಸಿ, ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.
ಸಂಪುಟ ಪುನಾರಚನೆ ವೇಳೆ ತಮ್ಮನ್ನು ಕೈಬಿಟ್ಟದ್ದಕ್ಕೆ ಶ್ರೀನಿವಾಸ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸ್ಪೀಕರ್ ಕೋಳಿವಾಡ ಅವರು ಈ ರಾಜೀನಾಮೆಯನ್ನು ಅಂಗಿಕರಿಸಿದ್ದರು. ಇದಾದ ಬಳಿಕ ಅಕ್ಟೋಬರ್ 26ರಂದು ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ್ದ ಶ್ರೀನಿವಾಸ ಪ್ರಸಾದ್ ಅವರು ಮಾತುಕತೆ ನಡೆಸಿದ್ದರು.,
ಯಡಿಯೂರಪ್ಪ ಅವರ ಹೇಳಿಕೆ: 'ಮಾಜಿ ಶಾಸಕ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಅವರು ನಿರಂತರವಾಗಿ ನಮ್ಮ ಸಂಪರ್ಕದಲ್ಲಿದ್ದು, ನವೆಂಬರ್ 7ರ ನಂತರ ಈ ಬಗ್ಗೆ ನಿರ್ಧಾರವಾಗಲಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. 'ಪಕ್ಷದ ಹಿಂದುಳಿದ ವರ್ಗಗಳ ಘಟಕದ ನಾಯಕತ್ವವನ್ನು ಕೆ.ಎಸ್. ಈಶ್ವರಪ್ಪ ಅವರಿಗೆ ವಹಿಸಲು ಯಾವುದೇ ಆಕ್ಷೇಪವಿಲ್ಲ. ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವ ಸಲುವಾಗಿ ಬೆಂಗಳೂರಿನಲ್ಲಿ ನವೆಂಬರ್ 3ರಿಂದ 6ರ ವರೆಗೆ ಪಕ್ಷದ ಮುಖಂಡರಿಗೆ ವಿಶೇಷ ತರಬೇತಿ ಆಯೋಜಿಸಲಾಗಿದೆ' ಎಂದು ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications