ಸಿಬಿಐ ದಾಳಿ ಬೆನ್ನಲ್ಲೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ!
ಬೆಂಗಳೂರು. ಅ. 05: ವಿಧಾನಸಭಾ ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಸಾಧಿಸಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ಕೊಟ್ಟಿದೆ. ಇದರ ಬೆನ್ನಲ್ಲಿಯೆ ಮತ್ತೊಂದು ಅಘಾತ ಉತ್ತರ ಕರ್ನಾಟಕ ಭಾಗದಿಂದ ಡಿ.ಕೆ. ಶಿವಕುಮಾರ್ ಅವರಿಗೆ ಎದುರಾಗಿದೆ. ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕರೊಬ್ಬರು 'ಕೈ'ಗೆ ಬೈ ಹೇಳುತ್ತಿದ್ದಾರೆ ಎಂಬ ಮಹತ್ವದ ವಿಚಾರ ಬೆಳಕಿಗೆ ಬರುತ್ತಿದೆ. ಆ ಪ್ರಭಾವಿ ನಾಯಕ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
ಸ್ವಂತ ವರ್ಚಸ್ಸಿನಿಂದಲೇ ರಾಜಕೀಯವಾಗಿ ಬೆಳೆದು ಪಕ್ಷೇತರರಾಗಿ ಸ್ಪರ್ಧಿಸಿ ಸಣ್ಣ ವಯಸ್ಸಿನಲ್ಲಿಯೇ ಶಾಸಕರಾಗಿದ್ದ, ಆ ನಾಯಕರ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಲಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರೂ ಇದ್ದಾರೆ. ಹೀಗಾಗಿ ಬೆಳಗಾವಿ ರಾಜಕಾರಣದ ಬಳಿಕ ಈಗ ಮತ್ತೊಂದು ಬಂಡಾಯವನ್ನು ಡಿಕೆಶಿ ಎದುರಿಸುವಂತಾಗಿದೆ.
ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಉಪ ಚುನಾವಣೆ ಲೆಕ್ಕಾಚಾರ ಉಲ್ಟಾ
ಹಿಂದೆ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಿಜೆಪಿ ನಾಯಕರ ಮೂಲಕ ಬಿಜೆಪಿ ಸೇರ್ಪಡೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಉತ್ತರ ಕರ್ನಾಟಕ ಪ್ರವಾಸಕ್ಕೆ ಮೊದಲ ಬಾರಿ ಡಿ.ಕೆ. ಶಿವಕುಮಾರ್ ಅವರು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬಂದಾಗಲೂ ಆ ನಾಯಕ ಡಿಕೆಶಿ ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂಬುದಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಬಿಜೆಪಿ ಸೇರುವ ವಿಚಾರವಾಗಿ 'ಒನ್ಇಂಡಿಯಾ ಕನ್ನಡ' ಅವರನ್ನು ಸಂಪರ್ಕಿಸಿದಾಗ ಅವರು ಏನು ಹೇಳಿದರು? ಇಲ್ಲಿದೆ ಮಾಹಿತಿ!
ಡಿಕೆಶಿ ಭೇಟಿ ಮಾಡದ ನಾಯಕ!
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಕಳೆದ ಶುಕ್ರವಾರ (ಅ. 02) ರಂದು ಮೊದಲ ಬಾರಿಗೆ ಭೇಟಿ ನೀಡಿದ್ದರು. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಕಾಂಗ್ರೆಸ್ ನಾಯಕರೂ ಡಿಕೆಶಿ ಅವರನ್ನು ಭೇಟಿ ಮಾಡಿದ್ದರು. ಜೊತೆಗೆ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದರು. ಆದರೆ ಆ ಒಬ್ಬ ಪ್ರಭಾವಿ ಮಾತ್ರ ಪಕ್ಷದ ಅಧ್ಯಕ್ಷರು ಮೊದಲ ಬಾರಿ ಹುಬ್ಬಳ್ಳಿಗೆ ಬಂದರೂ ಅವರೊಂದಿಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಕನಿಷ್ಠ ಭೇಟಿಯನ್ನು ಮಾಡಲಿಲ್ಲ.
ಯಾರು ಆ ನಾಯಕ?
ಮಾಜಿ ಸಚಿವ, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮೊದಲ ಹಂತದ ಮಾತುಕತೆ ನಡೆದಿದೆ ಎನ್ನಲಾಗಿದೆ. ವಿನಯ್ ಕುಲಕರ್ಣಿ ಅವರನ್ನು ಬಿಜೆಪಿಗೆ ಕರೆತರಲು ದಕ್ಷಿಣ ಕರ್ನಾಟಕ ಭಾಗದ ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇದು ಉತ್ತರ ಕರ್ನಾಟಕ ಭಾಗದ ಬಿಜೆಪಿ ನಾಯಕರ ಗಮನಕ್ಕೆ ಬಂದಿಲ್ಲ.
ಡಿ. ಕೆ. ಶಿವಕುಮಾರ್ ನಿವಾಸದಲ್ಲಿ 50 ಲಕ್ಷ ಹಣ ವಶಕ್ಕೆ
ಇದೀಗ ಬಿಜೆಪಿ ಸೇರ್ಪಡೆ ವಿಚಾರ ಬರುತ್ತಿದ್ದಂತೆಯೆ ಉ.ಕ. ಭಾಗದ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿನ್ನೆ ನಡೆಯಬೇಕಾಗಿದ್ದ ಅಮಿತ್ ಶಾ ಅವರ ಜೊತೆಗಿನ ಖುದ್ದು ಭೇಟಿ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು 'ಒನ್ಇಂಡಿಯಾ' ಕನ್ನಡಕ್ಕೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ವಿನಯ್ ಕುಲಕರ್ಣಿ ಸ್ಪಷ್ಟನೆ!
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರನ್ನು ಸಂಪರ್ಕಿಸಿದಾಗ ನಾನು ಬಿಜೆಪಿ ಸೇರುವುದಿಲ್ಲ ಎಂದಿದ್ದಾರೆ.
ಬಿಜೆಪಿ ನಾಯಕರೊಂದಿಗೆ ಯಾವುದೇ ಮಾತುಕತೆಯನ್ನು ನಡೆಸಿಲ್ಲ ಎಂದು ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ವಿನಯ್ ಕುಲಕರ್ಣಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.
ವಿಜಯ್ ಕುಲಕರ್ಣಿ ವಿಚಾರಣೆ
ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಿಬಿಐ ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿತ್ತು. ಕಳೆದ ಜೂನ್ 15, 2015ರಂದು ಧಾರವಾಡ ಸಪ್ತಾಪುರದ ಜಿಮ್ನಲ್ಲಿ ಜಿಪಂ ಸದಸ್ಯರಾಗಿದ್ದ ಯೋಗೇಶ್ಗೌಡ ಕೊಲೆಯಾಗಿತ್ತು.
ಯೋಗೇಶಗೌಡ ಕೊಲೆ ಪ್ರಕರಣದ ಸಿಬಿಐ ತನಿಖೆ ತೀವ್ರಗೊಳಿಸಿದೆ. ಇದೇ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನು ಧಾರವಾಡದ ಸಿಬಿಐ ಕಚೇರಿಯಲ್ಲಿ ಇತ್ತೀಚೆಗೆ ವಿಚಾರಣೆಗೆ ಒಳಪಡಿಸಲಾಗಿತ್ತು.
ಈ ಎಲ್ಲ ವಿಚಾರಗಳ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಚರ್ಚೆ ಉತ್ತರ ಕರ್ನಾಟಕ ರಾಜಕೀಯ ವಲಯದಲ್ಲಿದೆ. ಮತ್ತೊಂದೆಡೆ ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ.