ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಬಿಜೆಪಿಗೆ ಸೇರ್ಪಡೆ
ಬೆಂಗಳೂರು, ಅಕ್ಟೋಬರ್ 01 : ನಟ, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಬಿಜೆಪಿಗೆ ಸೇರ್ಪಡೆಗೊಂಡರು. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದ ಅವರು ಪಕ್ಷ ತೊರೆದಿದ್ದರು.
ಭಾನುವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ನೆ.ಲ.ನರೇಂದ್ರ ಬಾಬು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಕೆಲವು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಬಿಜೆಪಿ ಸೇರಿದರು.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ನೆ.ಲ.ನರೇಂದ್ರ ಬಾಬು ಅವರು, 'ಕಳೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ಪಕ್ಷ ನನ್ನನ್ನು ಕಡೆಗಣಿಸಿದೆ. ಪಕ್ಷದ ಧೋರಣೆಯಿಂದ ನನಗೆ ನೋವಾಗಿದೆ. ಆದ್ದರಿಂದ, ಪಕ್ಷ ತೊರೆಯುತ್ತಿದ್ದೇನೆ' ಎಂದು ಹೇಳಿದ್ದರು.

'ಪಕ್ಷದಲ್ಲಿ 35 ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಕಾರ್ಪೊರೇಟರ್ ಆಗಿ, ಎರಡು ಬಾರಿ ಶಾಸಕನಾಗಿ ಕೆಲಸ ಮಾಡಿರುವ ನನ್ನನ್ನು ಪಕ್ಷ ನಿರ್ಲಕ್ಷಿಸಿದೆ' ಎಂದು ಆರೋಪಿಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದದರು.
ನೆ.ಲ.ನರೇಂದ್ರ ಬಾಬು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಬಿಜೆಪಿಯ ಗಾಳಿ ಕರ್ನಾಟಕದ ಉದ್ದಗಲಕ್ಕೆ ಬೀಸುತ್ತಿದೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಪಕ್ಷದಲ್ಲಿದ್ದ ನರೇಂದ್ರ ಬಾಬು ನಂತರ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಅವರು ಬಿಜೆಪಿಗೆ ಮರಳಿರುವುದನ್ನು ಸ್ವಾಗತಿಸುತ್ತೇನೆ' ಎಂದರು.












Click it and Unblock the Notifications