ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ಸಿ, ಜೆಡಿಎಸ್ ನಾಯಕ!
ಬೆಂಗಳೂರು, ಡಿಸೆಂಬರ್ 02; ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ನಾಯಕ, ಸಿನಿಮಾ ನಿರ್ಮಾಪಕ ಸಿ. ಆರ್. ಮನೋಹರ್ ಕಾಂಗ್ರೆಸ್ ಸೇರಿದರು. ಈ ಮೂಲಕ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷದ ಸೇರಿದಂತಾಗಿದೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ. ಆರ್. ಮನೋಹರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.
ಎಂಎಲ್ಸಿ ಸ್ಥಾನಕ್ಕೆ ಜೆಡಿಎಸ್ ನಾಯಕನ ರಾಜೀನಾಮೆ
ಈ ಸಂದರ್ಭದಲ್ಲಿ ಮಾಲೂರಿನ ಮಾಜಿ ಶಾಸಕ, ಬಿಜೆಪಿ ಮುಖಂಡ ನಾಗರಾಜು, ರಾಜ್ಯ ಮಡಿವಾಳರ ಸಂಘದ ನಂಜಪ್ಪ, ಅಮರನಾಥ್, ಜೆಡಿಎಸ್ನ ಗೋಪಿಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನುಸೂಯ ಸೇರಿದಂತೆ ವಿವಿಧ ಪಕ್ಷದ ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಪರಿಷತ್ ಚುನಾವಣೆ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ!
Recommended Video
ನವೆಂಬರ್ 29ರಂದು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಸಿ. ಆರ್. ಮನೋಹರ್ ಜೆಡಿಎಸ್ ಪಕ್ಷಕ್ಕೆ ಸಹ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದರು. ಕೆಲವೇ ದಿನಗಳಲ್ಲಿ ಸಿ. ಆರ್. ಮನೋಹರ್ ಪರಿಷತ್ ಸದಸ್ಯತ್ವ ಅವಧಿ ಅಂತ್ಯಗೊಳ್ಳಲಿದೆ. ಆ ಸ್ಥಾನಕ್ಕೆ ಈಗಾಗಲೇ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಪರಿಷತ್; ರಾತ್ರೋರಾತ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜೆಡಿಎಸ್ ಅಭ್ಯರ್ಥಿ!
ಕೋಲಾರ ಸ್ಥಳೀಯ ಸಂಸ್ಥೆಗಳಿಂದ ಸಿ. ಆರ್. ಮನೋಹರ್ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಅವರ ಸದಸ್ಯತ್ವದ ಅವಧಿ ಅಂತ್ಯಗೊಳ್ಳಲಿದ್ದು, ಆ ಸ್ಥಾನಕ್ಕೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಆದರೆ ಸಿ ಆರ್. ಮನೋಹರ್ ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿಲ್ಲ.
ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ್ದ ಸಿ. ಆರ್. ಮನೋಹರ್ ಡಿಸೆಂಬರ್ 2ರಂದು ನನ್ನ ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ ಎಂದು ಹೇಳಿದ್ದರು. ಇಂದು ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ಮಾಡಿದ್ದ ಸಿ. ಆರ್. ಮನೋಹರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಹಾಗೆಯೇ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ಪತ್ರವನ್ನು ಪಕ್ಷದ ಅಧ್ಯಕ್ಷರಿಗೆ ಕಳಿಸಿದ್ದರು.
Koo Appಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಜೆಡಿಎಸ್ನ ಮಾಜಿ ವಿಧಾನ ಪರಿಷತ್ ಸದಸ್ಯ ಸಿ.ಆರ್ ಮನೋಹರ್, ಮಾಲೂರಿನ ಮಾಜಿ ಶಾಸಕ ಬಿಜೆಪಿಯ ನಾಗರಾಜು, ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷ ಅಮರನಾಥ್ ಸೇರಿದಂತೆ ಅನ್ಯ ಪಕ್ಷಗಳ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸೇರಿದಂತೆ ಹಲವು ಮುಖಂಡರು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. - ಕರ್ನಾಟಕ ಕಾಂಗ್ರೆಸ್ (@inckarnataka) 2 Dec 2021
ಸಿನಿಮಾ ನಿರ್ಮಾಪಕರೂ ಆಗಿರುವ ಸಿ. ಆರ್. ಮನೋಹರ್ 2009ರಿಂದಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 38,302 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಬಿಜೆಪಿ ಸೇರುವ ವದಂತಿ; ಸಿ. ಆರ್. ಮನೋಹರ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ನವೆಂಬರ್ ತಿಂಗಳಿನಲ್ಲಿ ಹಬ್ಬಿತ್ತು. ಆಗ ಪತ್ರಿಕಾಗೋಷ್ಠಿ ನಡೆಸಿ ಅವರು ಸ್ಪಷ್ಟನೆ ನೀಡಿದ್ದರು. "ನನ್ನ ಪರಿಷತ್ ಅವಧಿ ಇನ್ನೂ ಬಾಕಿ ಇದೆ. ಪಕ್ಷಕ್ಕೆ ಮುಜುಗರ ತರುವ ಕೆಲಸ ನಾನು ಮಾಡುವುದಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು" ಎಂದು ಹೇಳಿದ್ದರು.
ಜೆಡಿಎಸ್ ಪಕ್ಷದ ಅನೇಕ ನಾಯಕರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ, ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ ಕಾಂಗ್ರೆಸ್ ಸೇರುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ಜೆಡಿಎಸ್ನಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ಸಂದೇಶ್ ನಾಗರಾಜ್ ಸಹ ಮೈಸೂರಿನಲ್ಲಿ ಸಿದ್ದರಾಮಯ್ಯ ಭೇಟಿಯಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗಮನದಲ್ಲಿಟ್ಟುಕೊಂಡು ರಾಜಕೀಯ ನಾಯಕರು ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತಿದ್ದಾರೆ.