ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಲು ಸ್ಪರ್ಧೆ ಮಾಡಿದ್ದೇನೆ: ಎಚ್ಡಿಡಿ
ಬೆಂಗಳೂರು, ಜೂ. 09: ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಅವರು ಕೊನೆಗೂ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆ ನಡೆದರೆ ಗೆಲವು ಸಾಧಿಸಲು ಸಾಕಷ್ಟು ಶಾಸಕರ ಬೆಂಬಲ ಇಲ್ಲದ್ದರಿಂದ ನಾಮಪತ್ರ ಸಲ್ಲಿಸಲು ಕಾಯ್ದು ನೋಡುವ ತಂತ್ರವನ್ನು ಜೆಡಿಎಸ್ ವರಿಷ್ಠ ದೇವೇಗೌಡರು ಅನುಸರಿಸಿದ್ದರು.
ಇವತ್ತು ಚುನಾವಣಾಧಿಕಾರಿ, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ದೇವೇಗೌಡ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪುತ್ರರಾದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಜೊತೆಗಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಜೆಡಿಎಸ್ ನಾಯಕರು ನಾಮಪತ್ರ ಸಲ್ಲಿಸುವಾ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರು, ಪಕ್ಷದ ಕೆಲಸ ಮಾಡಿಕೊಂಡು ಹೋಗೋಣ ಎಂದು ಮನಸ್ಸನ್ನು ಗಟ್ಟಿಮಾಡಿಕೊಂಡು ಇದ್ದೆ. ಜೂನ್ 5ನೇ ನಾಯಕರು ಒತ್ತಡ ಹಾಕಿ ಚುನಾವಣೆಗೆ ಸ್ಪರ್ಧೆ ಮಾಡಬೇಕೆಂದು ಒತ್ತಾಯ ಮಾಡಿದ್ದರು, ಇದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅಥವಾ ಎಚ್.ಡಿ. ರೇವಣ್ಣ ಅವರ ಒತ್ತಡ ಇರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.

ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಹೆಸರನ್ನು ಪ್ರಕಟ ಮಾಡಿದ್ದರು. ಲೋಕಸಭಾ ಚುನಾವಣೆ ಸೋಲಿನ ಬಳಿಕ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹೇಳಿದ್ದೆ. ರಾಷ್ಟ್ರ ಮಟ್ಟದ ನಾಯಕರಿಂದ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಒತ್ತವಿತ್ತು. ಆದರೆ ನಾನು ಪಕ್ಷದ ಶಾಸಕರ ತೀರ್ಮಾನಕ್ಕೆ ಬದ್ಧನಾಗಿ ಸ್ಪರ್ಧೆ ಮಾಡಿದ್ದೇನೆ. ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹಠ ಹಿಡಿದಿದ್ದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಸಂಪರ್ಕಿಸಿದ್ದರು. ಅದರ ಬೆನ್ನಲ್ಲೆ ಸೋನಿಯಾ ಗಾಂಧಿ ಅವರಿಗೆ ದೂರವಾಣಿಯಲ್ಲಿ ಮಾತನಾಡಿದ್ದೆ. ನಾನು ಮತ್ತೊಮ್ಮೆ ಲೋಕಸಭೆಗೆ ಬರಲಿಕ್ಕೆಂದೆ ಮತ್ತೊಬ್ಬ ಅಭ್ಯರ್ಥಿಯನ್ನು ನೀವು ಹಾಕಿಲ್ಲ ಎಂಬುದನ್ನು ಅರಿತಿದ್ದೇನೆ. ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದೆ. ಅದರಂತೆ ಈಗ ನಾಮಪತ್ರ ಸಲ್ಲಿಸಿದ್ದೇನೆ ಎಂದು ದೇವೇಗೌಡರು ಹೇಳಿದ್ದಾರೆ.












Click it and Unblock the Notifications