ಜೆಡಿಎಸ್ ರಾಜ್ಯಾಧ್ಯಕ್ಷರು ಯಾರು?, ನಾಲ್ವರ ಹೆಸರು ಮುಂಚೂಣಿಯಲ್ಲಿ!
Recommended Video
ಬೆಂಗಳೂರು, ಜುಲೈ 23 : 'ಜೆಡಿಎಸ್ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ' ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಘೋಷಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಸ್ತುತ ಜೆಡಿಎಸ್ ರಾಜ್ಯಾಧ್ಯಕ್ಷರು ಎಚ್.ಡಿ.ಕುಮಾರಸ್ವಾಮಿ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ಪಕ್ಷ ಸಂಘಟನೆ ಬಗ್ಗೆ ಹೆಚ್ಚು ಗಮನ ಹರಿಸುವುದು ಸಾಧ್ಯವಿಲ್ಲ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಾಬಿ ಪ್ರಶ್ನೆಯೇ ಇಲ್ಲ: ಎಚ್. ವಿಶ್ವನಾಥ್
'ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಸ್ವತಃ ನಾನೇ ಮನವಿ ಮಾಡಿದ್ದೇನೆ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈ ಕುರಿತು ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಹೊಸದಾಗಿ ಆಯ್ಕೆಯಾಗುವ ಅಧ್ಯಕ್ಷರು ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನೆಡೆಸಬೇಕು' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ: ಎಚ್ಡಿ ದೇವೇಗೌಡ
ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಹಲವು ನಾಯಕರ ಹೆಸರು ಕೇಳಿಬರುತ್ತಿದೆ. ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಯಾವ-ಯಾವ ನಾಯಕರ ಹೆಸರು ಚಾಲ್ತಿಯಲ್ಲಿದೆ? ಚಿತ್ರಗಳಲ್ಲಿ ನೋಡಿ...
ಮಧು ಬಂಗಾರಪ್ಪ ಹೆಸರು ಮುಂಚೂಣಿಯಲ್ಲಿ
ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ ಕೆಲಸ ನಿರ್ವಹಿಸುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಪ್ತರು ಮಧು ಬಂಗಾರಪ್ಪ.
2018ರ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲು ಕಂಡಿದ್ದಾರೆ. ಈಡಿಗ ಜನಾಂಗಕ್ಕೆ ಸೇರಿದ ಮಧು ಬಂಗಾರಪ್ಪ ಅವರು ಯುವಕರು. ಆದ್ದರಿಂದ, ಪಕ್ಷದ ಚುಕ್ಕಾಣಿಯನ್ನು ಅವರಿಗೆ ನೀಡುವ ಸಾಧ್ಯತೆ ಹೆಚ್ಚಿದೆ ಎಂಬ ಸುದ್ದಿ ಹಬ್ಬಿದೆ.
2019ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಧ್ಯಕ್ಷರ ಆಯ್ಕೆ ನಡೆಯಲಿದೆ. ಶಿವಮೊಗ್ಗ ಮೂಲದ ಮಧು ಬಂಗಾರಪ್ಪ ಅವರು ಅಧ್ಯಕ್ಷರಾದರೆ ಕರಾವಳಿ, ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪಕ್ಷದ ಬಲ ಹೆಚ್ಚಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ: ದೇವೇಗೌಡರ ಚಾಣಕ್ಷತನಕ್ಕೆ ಸವಾಲು
ಪಿ.ಜಿ.ಆರ್.ಸಿಂಧ್ಯಾ
ಪಿ.ಜಿ.ಆರ್.ಸಿಂಧ್ಯಾ ಜೆಡಿಎಸ್ ಪಕ್ಷದ ಹಿರಿಯ ನಾಯಕರು. 2018ರ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಕಾಂಗ್ರೆಸ್ನ ನಾರಾಯಣ ರಾವ್ ವಿರುದ್ಧ ಸೋಲು ಕಂಡಿದ್ದಾರೆ.
ಪ್ರಸ್ತುತ ಅವರು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪಿ.ಜಿ.ಆರ್.ಸಿಂಧ್ಯಾ ಅವರ ಹೆಸರು ರಾಜ್ಯಾಧ್ಯಕ್ಷ ಪಟ್ಟಕ್ಕೆ ಕೇಳಿಬರುತ್ತಿದೆ
ಎಚ್.ವಿಶ್ವನಾಥ್
ಮಾಜಿ ಸಚಿವ, ಸಂಸದ ಎಚ್.ವಿಶ್ವನಾಥ್ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಲು ಬಯಸಿದ್ದರು. 2018ರ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಅವರು ಗೆದ್ದುಬಂದಿದ್ದಾರೆ.
ಎಚ್.ವಿಶ್ವನಾಥ್ ಕುರುಬ ಸಮುದಾಯಕ್ಕೆ ಸೇರಿದವರು. ಅವರ ಹೆಸರು ಸಹ ರಾಜ್ಯಾಧ್ಯಕ್ಷ ಪಟ್ಟಕ್ಕೆ ಕೇಳಿಬರುತ್ತಿದೆ. ಆದರೆ, ಚುನಾವಣೆಗೆ ಕೆಲವು ತಿಂಗಳು ಇರುವಾಗ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗುತ್ತದೆಯೇ? ಕಾದು ನೋಡಬೇಕು.
ವೈ.ಎಸ್.ವಿ.ದತ್ತಾ
ವೈ.ಎಸ್.ವಿ.ದತ್ತಾ ಅವರ ಹೆಸರು ಸಹ ಜೆಡಿಎಸ್ ರಾಜ್ಯಾಧ್ಯಕ್ಷರ ಪಟ್ಟಕ್ಕೆ ಕೇಳಿಬರುತ್ತಿದೆ. 2018ರ ಚುನಾವಣೆಯಲ್ಲಿ ದತ್ತ ಅವರು ಕಡೂರು ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ.
ವೈ.ಎಸ್.ವಿ.ದತ್ತಾ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತಿ ಪಡೆದಿದ್ದಾರೆ. ಪಕ್ಷದ ನಾಯಕರು, ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಆದ್ದರಿಂದ, ದತ್ತಾ ಅವರು ಅಧ್ಯಕ್ಷರಾದರೂ ಅಚ್ಚರಿ ಪಡಬೇಕಿಲ್ಲ.