ದಲಿತರಿಗೆ ಮುಖ್ಯಮಂತ್ರಿ ಪಟ್ಟ ಕೊಡಲು ರಾಹುಲ್ಗೆ ಮನವಿ
ಬೆಂಗಳೂರು, ಅಕ್ಟೋಬರ್ 10 : ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕೂಗು ಪುನಃ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ದಲಿತ ನಾಯಕರನ್ನು ಸಿಎಂ ಮಾಡಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಛಲವಾದಿ ಮಹಾಸಭಾದ ರಾಜ್ಯ ಘಟಕದ ಗೌರವಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು, ದಲಿತ ನಾಯಕರಿಗೆ ಮುಖ್ಯಮಂತ್ರಿ ಪಟ್ಟ ಕೊಡುವ ಕುರಿತು ಮನವಿ ಸಲ್ಲಿಸಿದ್ದಾರೆ. [ದಲಿತ ಸಿಎಂ, ಚರ್ಚೆಗೆ ತೆರೆ ಎಳೆದ ದಿಗ್ವಿಜಯ್]

'ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷ ಕಳೆದಿದ್ದಾರೆ. ಆದ್ದರಿಂದ, ಅವರನ್ನು ಬದಲಾವಣೆ ಮಾಡಿ ದಲಿತ ನಾಯಕರನ್ನು ಸಿಎಂ ಮಾಡಿ' ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. [ದಲಿತರಿಗೆ ಸಿಎಂ ಪಟ್ಟ, ಕಾಂಗ್ರೆಸ್ ನಾಯಕರು ಹೇಳುವುದೇನು?]
'ಅಂಬೇಡ್ಕರ್ ಅವರ 125ನೇ ಜನ್ಮದಿನದಂದು ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದು ಮಲ್ಲಿಕಾರ್ಜುನ ಖರ್ಗೆ ಅಥವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು' ಎಂದು ಮನವಿ ಮಾಡಲಾಗಿದೆ.[ರಾಹುಲ್ ಕರ್ನಾಟಕ ಭೇಟಿ, ಚಿತ್ರಗಳು]
ಹಿಂದೆಯೋ ಕೇಳಿಬಂದಿತ್ತು : 2015ರ ಫೆಬ್ರವರಿಯಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಆಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು 'ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಿಸುವ ಯಾವುದೇ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ' ಎಂದು ಚರ್ಚೆಗೆ ತೆರೆ ಎಳೆದಿದ್ದರು.
ಆಗ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದ್ದ 15ಕ್ಕೂ ಅಧಿಕ ದಲಿತ ಸಂಘಟನೆಗಳ ಮುಖಂಡರು ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಚರ್ಚೆ ಹುಟ್ಟು ಹಾಕಿದ್ದರು. ಸದ್ಯ, ಛಲವಾದಿ ನಾರಾಯಣಸ್ವಾಮಿ ಅವರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿ, ಮತ್ತೆ ಚರ್ಚೆ ಆರಂಭಿಸಿದ್ದಾರೆ.












Click it and Unblock the Notifications