ಶುಕ್ರವಾರ ಕರ್ನಾಟಕದಲ್ಲಿ ಬಂದ್ ಇರುವುದಿಲ್ಲ: ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಸೆಪ್ಟೆಂಬರ್ 22: ಕರ್ನಾಟಕದಲ್ಲಿ ಇದೇ ಶುಕ್ರವಾರ ಸೆಪ್ಟೆಂಬರ್ 25ರಂದು ಬಂದ್ ಕುರಿತು ಆಗುತ್ತಿದ್ದ ಚರ್ಚೆಗೆ ತೆರೆಬಿದ್ದಿದೆ. ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಮಾಡಬೇಕೊ, ಬೇಡವೋ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ವಿರೋಧಿಸಿ ವಿವಿಧ ರೈತಪರ, ದಲಿತ, ಕಾರ್ಮಿಕ ಮತ್ತು ಜನರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲು ಉದ್ದೇಶಿಸಿವೆ ಎಂದು ವರದಿಯಾಗಿತ್ತು.

ಇಂದು ಜ್ಹೂಮ್ ಮೀಟಿಂಗ್ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ''ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಕೇವಲ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಇದೀಗ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ಈ ಕುರಿತು ಚರ್ಚಿಸಿ ಸರ್ಕಾರ ಬಿಲ್ ಹಿಂಪಡೆಯದಿದ್ದರೆ ಬಂದ್ ದಿನಾಂಕವನ್ನು ಪ್ರಕಟ ಮಾಡುತ್ತೇವೆ'' ಎಂದರು.
ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್ಗೆ ನಾವು ಬೆಂಬಲ ಕೊಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತ ಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ. ಪ್ರತಿಭಟನೆ ನೋಡಿ ಯಡಿಯೂರಪ್ಪನವರು ಮನಸ್ಸು ಬದಲಿಸಬಹುದು. ಕಾದು ನೋಡುತ್ತೇವೆ ಎಂದು ತಿಳಿಸಿದರು.












Click it and Unblock the Notifications