ಕರ್ನಾಟಕದ ಈ 7 ಜಿಲ್ಲೆಗಳಿಗೆ ಅನುದಾನ ಮಂಜೂರಾಗಿಲ್ಲ: ಏನಿದು ಆರೋಪ ?
Kalyana Karnataka: ರಾಜ್ಯ ಕಾಂಗ್ರೆಸ್ ಸರ್ಕಾರವು ಕಲ್ಯಾಣ ಕರ್ನಾಟಕದ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಈ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದು. ಈ ಸಂಬಂಧ ಆಕ್ರೋಶ ಹೊರ ಹಾಕಿದ್ದಾರೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಬರುತ್ತವೆ. ಆದರೆ, ಈ ಏಳು ಜಿಲ್ಲೆಗಳಲ್ಲಿಗೆ ಅನುದಾನವನ್ನು ಮಂಜೂರು ಮಾಡುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಕಲ್ಯಾಣ ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆರ್. ಅಶೋಕ್ ಅವರು ದೂರಿದ್ದಾರೆ. ಈ ಭಾಗಕ್ಕೆ ಅನುದಾನ ತಾರತಮ್ಯವಾಗುತ್ತಿದೆ ಎನ್ನುವ ಆರೋಪವನ್ನು ಅವರು ಮಾಡಿದ್ದಾರೆ. 2024-25ನೇ ಸಾಲಿನ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ ಡಿಬಿ) 5 ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ ನೀಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕ ವರ್ಷ ಅಂತ್ಯವಾಗುತ್ತಿದ್ದರೂ. ಈ ಸಾಲಿನ ಅನುದಾನದಲ್ಲಿ ಮಂಡಳಿಗೆ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂದು ಅವರು ದೂರಿದ್ದಾರೆ.

ಮುಂದುವರಿದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕಾ ಖರ್ಗೆ ಅವರೇ ಸಂಬಂಧಪಡದ ವಿಷಯಗಳಿಗೆಲ್ಲಾ ಅನವಶ್ಯಕವಾಗಿ ಮೂಗು ತೂರಿಸುವ ನೀವು ಕಲ್ಯಾಣ ಕರ್ನಾಟಕಕ್ಕೆ ಬರಬೇಕಾದ ಅನುದಾನದ ವಿಷಯದಲ್ಲಿ ಮೌನವಾಗಿರುವುದೇಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇನ್ನು ಈ ವಿಚಾರದಲ್ಲಿ ಖರ್ಗೆ ಕುಟುಂಬದವರು ಮನಸ್ಸು ಮಾಡಿದರೆ ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲು ಇಡುವುದಕ್ಕೂ ಬಿಡುವುದಿಲ್ಲ ಎಂದು ವಿರೋಧ ಪಕ್ಷದವರಿಗೆ ಸವಾಲು ಹಾಕುತ್ತೀರಲ್ಲ. ಅದರ ಬದಲು ತಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿ ಸರ್ಕಾರದ ಅನುದಾನ ಕಲ್ಯಾಣ ಕರ್ನಾಟಕಕ್ಕೆ ತಲುಪುವಂತೆ ಮಾಡಿ. ತಮ್ಮ ತಂದೆ, ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರ ಕೈಯಿಂದ ಮುಖ್ಯಮಂತ್ರಿಗಳಿಗೆ ಸೂಚನೆ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.
ಅಂದಹಾಗೆ ಕಳೆದ ಸೆಪ್ಟೆಂಬರ್ ನಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ಮಾಡಿ ಪುಂಖಾನುಪುಂಖವಾಗಿ ಘೋಷಣೆಗಳನ್ನು ಮಾಡಿದರಲ್ಲ, ಅದು ಕೇವಲ ಒಂದು ದಿನದ ಜಾಹಿರಾತಿಗೆ ಸೀಮಿತವಾಯ್ತಾ ಅಥವಾ ಅದನ್ನೇನಾದರೂ ಕಾರ್ಯರೂಪಕ್ಕೆ ತರುವ ದೊಡ್ಡ ಮನಸ್ಸು ಮಾಡುತ್ತೀರೋ ಎಂದೂ ಅವರು ಪ್ರಶ್ನೆ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ಅನುದಾನ: ರಾಜ್ಯ ಕಾಂಗ್ರೆಸ್ ಸರ್ಕಾರವು ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನುದಾನ ಕೊಡುವಲ್ಲಿ ತಾರತಮ್ಯ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. 2024 ಹಾಗೂ 2025ನೇ ಸಾಲಿನ ಆರ್ಥಿಕ ವರ್ಷದಲ್ಲಿ 5 ಸಾವಿರ ಕೋಟಿ ರೂಪಾಯಿ ಅನುಮೋದನೆಯನ್ನೇನೋ ಕೊಡಲಾಗಿದೆ. ಆದರೆ, ಆರ್ಥಿಕ ವರ್ಷವೇ ಮುಕ್ತಾಯವಾಗುತ್ತಾ ಬಂದರೂ ಈ ಮೊತ್ತವನ್ನು ಬಿಡುಗಡೆಯೇ ಮಾಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.












Click it and Unblock the Notifications