ಕೊರಟಗೆರೆಯಲ್ಲಿ ಜಿ ಪರಮೇಶ್ವರ್ ಅವರನ್ನ ಕಾಂಗ್ರೆಸ್ನವರೇ ಸೋಲಿಸ್ತಾರೆ: ಬಸವರಾಜ ಬೊಮ್ಮಾಯಿ
ತುಮಕೂರು, ಡಿಸೆಂಬರ್ 7 : ಕೊರಟಗೆರೆಯಲ್ಲಿ ಜಿ. ಪರಮೇಶ್ವರ್ ಅವರನ್ನ ಕಾಂಗ್ರೆಸ್ನವರೇ ಸೋಲಿಸ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಬುಧವಾರ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯ ಸಾರ್ಥಕ ಸೇವೆ - ಯುವ ಸಬಲೀಕರಣ ವೇದಿಕೆಯ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೆಲ್ತಾರೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ 130 ಸೀಟು ಬರುವುದು ಗ್ಯಾರಂಟಿ ಎಂದರು.
ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚಲಿದೆ: ಬಸವರಾಜ ಬೊಮ್ಮಾಯಿ
2023ಕ್ಕೆ ಅದನ್ನೂ ಕಳೆದುಕೊಂಡು ಕಾಂಗ್ರೆಸ್ ಮುಕ್ತ ರಾಷ್ಟ್ರ ಆಗಲಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸುನಾಮಿ ಎದ್ದು ನಿಂತಿದ್ದು, ಕಾಂಗ್ರೆಸ್ ಪಕ್ಷ ಈಗಾಗಲೇ ಕೊಚ್ಚಿ ಹೋಗಿ ರಾಜಕೀಯ ಅಸ್ತಿತ್ವ ಕಳೆದುಕೊಂಡಿದೆ. ಜನಸಂಕಲ್ಪ ಯಾತ್ರೆಯು 2023ಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗುವ ಭರವಸೆ ನನಗಿದೆ ಎಂದು ಹೇಳಿದರು.
ಇನ್ನೂ ಈ ವೇಳೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ನವರು ಯಾವುದೇ ದಾಖಲೆಗಳಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಕಾಂಗ್ರೆಸ್ನ ಭ್ರಮೆಗೆ ತಕ್ಕ ಉತ್ತರ ಕೊಡಲು ನಾವು ಸಿದ್ಧರಾಗಬೇಕು. ಸರಕಾರದ ಉತ್ತಮ ಕಾರ್ಯಕ್ರಮಗಳ ಕುರಿತು ಜನರಿಗೆ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಕುಣಿಗಲ್ನಲ್ಲಿ ಬಿಜೆಪಿ ಗೆಲ್ಲುವಂತಾಗಬೇಕು. ಅಂಥ ಸಂಕಲ್ಪ ಜನರದಾಗಬೇಕು ಎಂದು ತಿಳಿಸಿದರು. ನೈಜ ಪ್ರೀತಿ ಇದ್ದರೆ ಮನೆಮನೆಗೆ ಹೋಗಿ ಕೆಲಸ ಮಾಡಬೇಕು. ಬಿಜೆಪಿ ಗೆಲ್ಲಿಸುವ ಸಂಕಲ್ಪ ಆಗಲಿ ಎಂದು ಹೇಳಿದರು.
ಸಚಿವ ಗೋವಿಂದ ಕಾರಜೋಳ ಅವರು ಮಾತನಾಡಿ, ಜನರಿಗೆ ಮೋಸ ಮಾಡಿದ ಪಕ್ಷ ಕಾಂಗ್ರೆಸ್. ಜಾತಿ ಜಾತಿ, ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಮತಬ್ಯಾಂಕ್ ರಾಜಕೀಯವನ್ನು ಕಾಂಗ್ರೆಸ್ ಮಾಡಿತ್ತು ಎಂದು ಆಕ್ಷೇಪಿಸಿದರು. ಪೌರಕಾರ್ಮಿಕರನ್ನು ಕಾಂಗ್ರೆಸ್ ನೆನಪಿಸಿಕೊಳ್ಳಲಿಲ್ಲ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಲಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ನವರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು.
ಪ್ರಪಂಚ ಮೆಚ್ಚುವಂಥ ಆಡಳಿತವನ್ನು ನರೇಂದ್ರ ಮೋದಿಜಿ ಅವರು ನೀಡಿದ್ದಾರೆ. ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ನೆರವು ನೀಡುವ ಯೋಜನೆಗಳನ್ನು ಅವರು ಜಾರಿಗೊಳಿಸಿದ್ದಾರೆ ಎಂದು ತಿಳಿಸಿದರು. ಯಡಿಯೂರಪ್ಪ- ಬಸವರಾಜ ಬೊಮ್ಮಾಯಿಯವರ ಸರಕಾರಗಳ ಜನಪರ ಯೋಜನೆಗಳನ್ನು ಜನರು ಗಮನಿಸಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು.
ಸಚಿವ ಅರಗ ಜ್ಞಾನೇಂದ್ರ ಅವರು ಮಾತನಾಡಿ, ನಾನು ತೀರ್ಥಹಳ್ಳಿಯಲ್ಲಿ 3 ಬಾರಿ ಸೋತಿದ್ದೆ. ಕೃಷ್ಣಕುಮಾರ್ ಅವರ ಸೋಲಿನ ಶನಿ ಈ ಬಾರಿ ತೊಲಗಲಿದೆ ಎಂಬುದು ಇಲ್ಲಿನ ಜನಸಮುದಾಯವನ್ನು ನೋಡಿದರೆ ಗೊತ್ತಾಗುತ್ತದೆ. ಇದು ಮುಂದಿನ ಚುನಾವಣೆಯ ಸ್ಪಷ್ಟ ಸಂದೇಶ ಎಂದರು.
ಕಿಸಾನ್ ಸಮ್ಮಾನ್, ಆಯುಷ್ಮಾನ್ ಯೋಜನೆ ಸೇರಿದಂತೆ ಸರಕಾರಗಳ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ ಎಂದು ಮನವಿ ಮಾಡಿದರು. ಬಡವರ ಹೆಸರಿನಲ್ಲಿ ರಾಜಕಾರಣ ಮಾಡಿದ, ದಲಿತರನ್ನು ಅತ್ಯಂತ ಕೀಳಾಗಿ ನೋಡಿದ ಕಾಂಗ್ರೆಸ್ ಪಕ್ಷವನ್ನು ಜನರು ಮೂಲೆಗುಂಪು ಮಾಡಿದ್ದಾರೆ. ನಾವು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ ಬಿಜೆಪಿಯನ್ನು ಜನರು ಬೆಂಬಲಿಸುವ ಭರವಸೆ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಸಚಿವರಾದ ಬಿ.ಸಿ.ನಾಗೇಶ್, ಗೋಪಾಲಯ್ಯ, ಪಕ್ಷದ ಪದಾಧಿಕಾರಿಗಳು, ಶಾಸಕರು, ಹಾಲಿ- ಮಾಜಿ ಜನಪ್ರತಿನಿಧಿಗಳು ಭಾಗಿಯಾಗಿದ್ದರು.