Caste Census Report: ಜಾತಿಗಣತಿ ವರದಿ ಜಾರಿಯಾದರೆ ಏನೆಲ್ಲ ಪ್ರಯೋಜನ: ಜಿ.ಪರಮೇಶ್ವರ ಹೇಳಿದ್ದಿಷ್ಟು
ಬೆಂಗಳೂರು, ಅಕ್ಟೋಬರ್ 08: ಕರ್ನಾಟಕ ರಾಜ್ಯದಲ್ಲಿ ಈವರೆಗೆ ಸುದ್ದಿಯಾಗಿದ್ದ ಮುಡಾ ಹಗರಣ, ತನಿಖೆ, ಸಿಎಂ ರಾಜೀನಾಮೆ ಚರ್ಚೆಗೆ ತುಸು ಬ್ರೇಕ್ ಬಿದ್ದಂತಾಗಿದೆ. ಇದೀಗ ಎಲ್ಲೆಡೆ ಜಾತಿ ಗಣತಿ ವರದಿ ಜಾರಿ, ಚರ್ಚೆ ಪರ ವಿರೋಧ ವಿಚಾರವೇ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರು, ಈ ವರದಿ ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಕೋಲ್ಡ್ ಸ್ಟೋರೆಜ್ನಲ್ಲಿಟ್ಟು ಬಿಟ್ಟರು ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿ ಜಾತಿ ಗಣತಿ ಮಾಡಿ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ ಮಾತನಾಡಿದ್ದರು.

ಇದೀಗ ಸರ್ಕಾರವೇ ತಿರ್ಮಾನಿಸಿ, ಜಾತಿ ಗಣತಿ ವರದಿ ಸ್ವೀಕರಿಸಿ, ಚರ್ಚಿಸಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುತ್ತಿದೆ. ಇದು ಇದೀಗ ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು.
ಜಾತಿ ಗಣತಿ ಜಾರಿಯಾದರೆ ಏನೆಲ್ಲ ಅನುಕೂಲ
ಜಾತಿಗಣತಿ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ? ಎಂದು ಪ್ರಶ್ನಿಸಿದ ಅವರು, ವರದಿ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲು ಅನುಕೂಲವಾಗುತ್ತದೆ. ಅಭಿವೃದ್ಧಿಗೂ ಸಹಾಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಯಾವ ಆಧಾರದ ಮೇಲೆ ಯೋಜನೆಗಳನ್ನು ಕೊಡಬೇಕು ಎಂಬ ಪ್ರಶ್ನೆ ಬಂದಾಗ ಸ್ವಾಭಾವಿಕವಾಗಿ ನಾವು ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಕೊಡಬೇಕಾಗುತ್ತದೆ. ಅದಕ್ಕೋಸ್ಕರ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು. ಅಕ್ಟೋಬರ್ 18ರಂದು ಸಚಿವ ಸಂಪುಟದ ಮುಂದೆ ಚರ್ಚೆಗೆ ತರುತ್ತೇವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದರೆ ಎಂದು ಅವರು ವಿವರಿಸಿದರು.
ಜಾತಿ, ಸಮುದಾಯ, ಜನಸಂಖ್ಯೆ ಗೊತ್ತಾಗಬೇಕು
ಉಪಸಮಿತಿ ರಚಿಸುವುದು ಅಥವಾ ವಿಧಾನಮಂಡಲ ಮುಂದೆ ಮುಂದೆ ತೆಗೆದುಕೊಂಡು ಹೋಗುವುದು ಎಂಬುದನ್ನು ತೀರ್ಮಾನ ಮಾಡುತ್ತಾರೆ. ಇದರಲ್ಲಿ ಯಾರ ಬೆಂಬಲದ ಪ್ರಶ್ನೆ ಬರುವುದಿಲ್ಲ. ವಸ್ತುಸ್ಥಿತಿಯನ್ನು ಜನಗಳ ಮುಂದೆ ಇಡುತ್ತೇವೆ. ಅದನ್ನು ಬೇಡ ಅಂದರೆ ಹೇಗೆ? ರೂ. 160 ಕೋಟಿ ಖರ್ಚು ಮಾಡಿ, ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದು ಗೊತ್ತಾಗಬೇಕು ಎಂದು ಅವರು ಹೇಳಿದರು.
ವಿಪಕ್ಷಗಳಿಗೆ ಪರಂ ತಿರುಗೇಟು
ಕೇಂದ್ರ ಸರ್ಕಾರ ಜನಗಣತಿ ಮಾಡಬೇಕು ಎಂದು ನಿರ್ಧರಿಸಿದ್ದು, ಈಗಾಗಲೇ ತಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಪ್ರಧಾನಮಂತ್ರಿ ಭೇಟಿಗೆ ಹೋದಾಗ ಜನಗಣತಿ ಮಾಡುವುದಾಗಿ ಹೇಳಿದ್ದರು. 2026 ಅಥವಾ 2027ರಲ್ಲಿ ಪ್ರಾರಂಭಿಸಿ 2028 ಚುನಾವಣೆಗೆ ಸಿಗುತ್ತದೆ ಎಂದಿದ್ದರು. ಆ ಸಂದರ್ಭದಲ್ಲಿಯೂ ಇದೇ ರೀತಿ ವಿರೋಧಿಸುತ್ತಾರೆಯೇ? ಸರ್ಕಾರ ಅಧಿಕೃತವಾಗಿ ಜಾತಿಗಣತಿ ಮಾಡಿದೆ. ಯಾರೋ ನಾಲ್ಕು ಜನ ಸೇರಿ ಮಾಡಿರುವುದಲ್ಲ ಎಂದು ವಿಪಕ್ಷಗಳ ಟೀಕೆಗಳಿಗೆ ಅವರು ತಿರುಗೇಟು ಕೊಟ್ಟರು.
ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆಯಬೇಕು. ಈಗ ಏರುಪೇರಾಗಿದೆ. ಹತ್ತುವರ್ಷಕ್ಕೆ ಶೇ.15ರಷ್ಟು ಜನಸಂಖ್ಯೆ ಹೆಚ್ಚಾಗಿರುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ ಎಂದರು.












Click it and Unblock the Notifications